ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನನ್ನನ್ನು ರಾಜಕೀಯವಾಗಿ ಮುಗಿಸಲು ಬಿಜೆಪಿ ನಾಯಕರಿಂದ ದೊಡ್ಡ ಷಡ್ಯಂತ್ರ: ಡಿಕೆಶಿ

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆರೋಪ
Published 1 ಜನವರಿ 2024, 11:34 IST
Last Updated 1 ಜನವರಿ 2024, 11:34 IST
ಅಕ್ಷರ ಗಾತ್ರ

ಬೆಂಗಳೂರು: ‘ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂಪಡೆದಿದ್ದರೂ ಕಿರುಕುಳ ಮುಂದುವರೆದಿದೆ. ನನ್ನನ್ನು ರಾಜಕೀಯವಾಗಿ ಮುಗಿಸಲು ಬಿಜೆಪಿ ನಾಯಕರಿಂದ ದೊಡ್ಡ ಷಡ್ಯಂತ್ರ ನಡೆಯುತ್ತಿದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆರೋಪಿಸಿದರು.

ಕೇರಳ ಮೂಲದ ಜೈ ಹಿಂದ್ ಚಾನೆಲ್ ಎಂಡಿ ಹಾಗೂ ತಮಗೆ ಸಿಬಿಐ ನೋಟಿಸ್ ನೀಡಿರುವ ಬಗ್ಗೆ ಸುದ್ದಿಗಾರರು ಕೇಳಿದಾಗ ಪ್ರತಿಕ್ರಿಯಿಸಿದ ಅವರು, ‘ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ರಾಜ್ಯ ಸರ್ಕಾರ ಹಿಂಪಡೆದ ನಂತರವೂ ಸಿಬಿಐನವರೂ ಸಬ್ ರಿಜಿಸ್ಟ್ರಾರ್ ಕಚೇರಿ, ಸರ್ಕಾರಿ ಕಚೇರಿ, ಸಹಕಾರಿ ಸೊಸೈಟಿ, ನಾನು ಅಧ್ಯಕ್ಷನಾಗಿರುವ ಸಂಸ್ಥೆ, ಸೇರಿದಂತೆ ಅನೇಕರಿಗೆ ನೋಟಿಸ್‌ ಕೊಟ್ಟಿದ್ದಾರೆ. ಯಾವ ಲೆಕ್ಕಾಚಾರದ ಮೇಲೆ ಈ ನೋಟಿಸ್‌ ಕೊಡುತ್ತಿದ್ದಾರೆ ಎಂಬುದು ಗೊತ್ತಿಲ್ಲ. ಅವರ ಉದ್ದೇಶ ಏನು ಎಂಬುದು ಗೊತ್ತಿಲ್ಲ. ಆದರೆ, ಮೇಲ್ನೋಟಕ್ಕೆ ಅವರು ನನಗೆ ಹಾಗೂ ಪಕ್ಷಕ್ಕೆ ತೊಂದರೆ ನೀಡಲು ದೊಡ್ಡ ಷಡ್ಯಂತ್ರ ರೂಪಿಸುತ್ತಿದ್ದಾರೆ’ ಎಂದರು.

‘ಸಿಬಿಐ ತನಿಖೆಯನ್ನು ರಾಜ್ಯ ಸರ್ಕಾರ ಲೋಕಾಯುಕ್ತಕ್ಕೆ ಹಸ್ತಾಂತರಿಸಿದೆ. ಸಿಬಿಐಗೆ ನೀಡಿದ್ದ ಅನುಮತಿಯನ್ನು ರಾಜ್ಯ ಸರ್ಕಾರ ಹಿಂಪಡೆದಿರುವುದನ್ನು ಹೈಕೋರ್ಟ್ ಒಪ್ಪಿದ್ದರೂ ಸಿಬಿಐ ಯಾಕೆ ನೋಟಿಸ್‌ ನೀಡುತ್ತಿದೆ ಎಂಬುದು ಗೊತ್ತಿಲ್ಲ. ಅವರ ಬಳಿ ನನ್ನ ಎಲ್ಲ ದಾಖಲೆಗಳಿವೆ. ಲೋಕಾಯುಕ್ತಕ್ಕೆ ಪ್ರಕರಣ ಹಸ್ತಾಂತರವಾಗಿರುವುದರಿಂದ ಈ ಎಲ್ಲ ದಾಖಲೆಗಳನ್ನು ಸಿಬಿಐ, ಲೋಕಾಯುಕ್ತಕ್ಕೆ ನೀಡಬೇಕಿದೆ ಎಂಬುದು ನನಗಿರುವ ಕಾನೂನಿನ ಅರಿವು’ ಎಂದರು.

‘ನನ್ನ ಸಂಸ್ಥೆ, ನನ್ನ ಹೆಂಡತಿ, ಮಕ್ಕಳು, ಕುಟುಂಬ ಸದಸ್ಯರು, ನನ್ನ ಸ್ನೇಹಿತರು ಸೇರಿದಂತೆ ಹಲವರಿಂದ ಮಾಹಿತಿ ಕೇಳುತ್ತಿದ್ದಾರೆ. ಮೊದಲು ಈ ರೀತಿ ಮಾಡಿ ನಂತರ ಅವರು ನನಗೆ ನೇರವಾಗಿ ನೊಟೀಸ್ ನೀಡುತ್ತಾರೆ. ಅವರು ಏನು ಬೇಕಾದರೂ ಮಾಡಲಿ. ನನ್ನನ್ನು ಜೈಲಿಗೆ ಕಳಿಸುವ ಬಗ್ಗೆ ಅನೇಕ ಬಿಜೆಪಿ ನಾಯಕರು ಹಿಂದೆ ಹೇಳಿದ್ದರು. ನಾನು ಯಾವುದೇ ತಪ್ಪು ಮಾಡಿಲ್ಲ. ಅವರು ಏನಾದರೂ ಮಾಡಿಕೊಳ್ಳಲಿ. ನನಗೆ ಎಲ್ಲಿ ನ್ಯಾಯ ಸಿಗಬೇಕೋ ಅಲ್ಲಿ ಸಿಗುತ್ತದೆ’ ಎಂದರು.

ಶೇ 10ರಷ್ಟು ತನಿಖೆಯೂ ಮಾಡಿರಲಿಲ್ಲ: ‘ಸಿಬಿಐ ಅಧಿಕಾರಿಗಳಿಗೆ ನಾನು ಎಲ್ಲ ದಾಖಲೆಗಳನ್ನು ನೀಡಿದ್ದೆ. ಅವರು ಶೇ 10ರಷ್ಟು ಕೂಡ ತನಿಖೆ ಮಾಡಿರಲಿಲ್ಲ. ಆದರೆ ಶೇ 90ರಷ್ಟು ತನಿಖೆ ಮುಗಿದಿದೆ ಎಂದು  ನ್ಯಾಯಾಲಯದಲ್ಲಿ ಹೇಳಿದ್ದರು. ಯಾವ ಲೆಕ್ಕಾಚಾರದಲ್ಲಿ ಆ ರೀತಿ ಹೇಳಿದ್ದಾರೋ ಗೊತ್ತಿಲ್ಲ. ಅವರು ಏನಾದರೂ ಮಾಡಲಿ. ನನ್ನನ್ನು ಒಳಗೆ ಹಾಕಿಸುವ ಆಸೆ ಇದ್ದರೆ ಹಾಕಿಸಲಿ. ನಾನು ಸಿದ್ಧನಿದ್ದೇನೆ’ ಎಂದರು.

‘ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಈ ರೀತಿ ಮಾಡಲಾಗುತ್ತಿದೆಯೇ’ ಎಂಬ ಪ್ರಶ್ನೆಗೆ, ‘ಅಹ್ಮದ್ ಪಟೇಲ್ ಅವರ ರಾಜ್ಯಸಭೆ ಚುನಾವಣೆ ಕಾರಣ ನನ್ನ ಮೇಲೆ ಸೇಡು ತೀರಿಸಿಕೊಳ್ಳುತ್ತಿದ್ದಾರೆ. ಅಹ್ಮದ್ ಪಟೇಲ್ ಅವರೇ ಇಂದು ನಮ್ಮ ಜತೆ ಇಲ್ಲ. ಆದರೂ ನನಗೆ ಕಿರುಕುಳ ಮುಂದುವರೆಸಿದ್ದಾರೆ. ಇದರ ಹಿಂದೆ ಯಾರೆಲ್ಲಾ ಇದ್ದಾರೆ ಎಂಬುದು ಗೊತ್ತು. ಕಾನೂನು ಇದೆ, ನನ್ನ ಕೊನೆಯುಸಿರು ಇರುವವರೆಗೂ ಹೋರಾಟ ಮಾಡುತ್ತೇನೆ’ ಎಂದರು.

ಮಾಧ್ಯಮದ ವರದಿ ಸುಳ್ಳು

‘ಲೋಕಸಭೆ ಚುನಾವಣೆಯಲ್ಲಿ ಸಚಿವರ ಸ್ಪರ್ಧೆಗೆ ಮಾಡಿದ್ದ ಶಿಫಾರಸ್ಸಿಗೆ ಹೈಕಮಾಂಡ್ ಒಪ್ಪಿಗೆ ನೀಡಿಲ್ಲ’ ಎಂಬ ವರದಿ ಬಗ್ಗೆ ಕೇಳಿದಾಗ, ‘ಅದೆಲ್ಲವೂ ಸುಳ್ಳು. ನಾನು ಯಾವುದೇ ಸಚಿವರನ್ನು ಅಭ್ಯರ್ಥಿ ಮಾಡಿ ಎಂದು ವರದಿ ಕೊಟ್ಟಿಲ್ಲ. ಅಭ್ಯರ್ಥಿಗಳ ಆಯ್ಕೆ ಬಗ್ಗೆ ಹೈಕಮಾಂಡ್ ನನಗೆ ವರದಿ ಕೇಳಿದ್ದು, ನಾನು ಇನ್ನೂ ವರದಿಯನ್ನೇ ನೀಡಿಲ್ಲ’ ಎಂದರು.

‘ಯಾವುದೇ ಸಚಿವರ ಸ್ಪರ್ಧೆ ಬಗ್ಗೆ ಸೂಚನೆ ನೀಡಿಲ್ಲ. ಲೋಕಸಭೆ ಅಭ್ಯರ್ಥಿ ಹೆಸರು ಶಿಫಾರಸ್ಸು ಮಾಡಲು ಸಚಿವರಿಗೆ ಜವಾಬ್ದಾರಿ ನೀಡಿದ್ದೆ. ಲೋಕಸಭೆ ಚುನಾವಣೆ ಬಗ್ಗೆ ಚರ್ಚಿಸಲು ನನಗೆ ಹಾಗೂ ಸಿದ್ದರಾಮಯ್ಯ ಅವರಿಗೆ ಇದೇ 4ರಂದು ದೆಹಲಿಗೆ ಬರುವಂತೆ ಆಹ್ವಾನ ನೀಡಿದ್ದಾರೆ. ಅವರು ಯಾವ ಮಾನದಂಡ ನಿಗದಿ ಮಾಡುತ್ತಾರೋ ಅದರ ಪ್ರಕಾರ ನಾವು ಕೆಲಸ ಮಾಡುತ್ತೇವೆ. ಜ.10 ರಂದು ಸಭೆ ಕರೆದಿದ್ದು, ಬೆಳಿಗ್ಗೆ ಶಾಸಕರು ಹಾಗೂ ಪರಾಜಿತ ಅಭ್ಯರ್ಥಿಗಳ ಜೊತೆ, ಮಧ್ಯಾಹ್ನ ಬ್ಲಾಕ್ ಅಧ್ಯಕ್ಷರ ಜೊತೆ ಸಭೆ ಮಾಡುತ್ತೇವೆ. ಈ ಸಭೆಯಲ್ಲಿ ಭಾಗವಹಿಸುವಂತೆ ಮುಖ್ಯಮಂತ್ರಿಗೂ ಆಹ್ವಾನ ನೀಡಲಾಗಿದೆ’ ಎಂದರು.

‘ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು. ಕೆಲವು ಸಚಿವರು ನಿಲ್ಲುವ ಪರಿಸ್ಥಿತಿ ಬರಬಹುದು, ಬಾರದೆಯೂ ಇರಬಹುದು. ಅದನ್ನು ಹೈಕಮಾಂಡ್ ನಿರ್ಧರಿಸುತ್ತದೆ’ ಎಂದರು.

‘ಕಾಂಗ್ರೆಸ್‌ಗೆ ಅಭ್ಯರ್ಥಿ ಕೊರತೆ ಇದೆಯೇ’ ಎಂದು ಕೇಳಿದಾಗ, ‘ನಮ್ಮ ಪಕ್ಷದಲ್ಲಿ ಅನೇಕ ಅಭ್ಯರ್ಥಿಗಳಿದ್ದಾರೆ. ಕೆಲವು ಕಡೆ 3-4 ಆಕಾಂಕ್ಷಿಗಳು ಇದ್ದರೆ, ಮತ್ತೆ ಕೆಲವೆಡೆ 8-10 ಆಕಾಂಕ್ಷಿಗಳು ಇದ್ದಾರೆ. ಅವರು ಕೇಳುವುದಕ್ಕಿಂತ ನಾವು ಯಾರನ್ನೂ ಕಣಕ್ಕೆ ಇಳಿಸುತ್ತೇವೆ ಎಂಬುದು ಮುಖ್ಯ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT