ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿಯೇ ಜೆಡಿಎಸ್-ಬಿಜೆಪಿ ಮೈತ್ರಿಯಾಗಿದ್ದರೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿರಲಿಲ್ಲ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದರು.
ಜೆಡಿಎಸ್ ಕಚೇರಿಗೆ ಬುಧವಾರ ಭೇಟಿ ನೀಡಿದ ನಂತರ ಅವರು ಮಾತನಾಡಿದರು.
ಆಗ ಎರಡೂ ಪಕ್ಷಗಳ ನಡುವೆ ಮೈತ್ರಿಯಾಗದೇ ರಾಜ್ಯಕ್ಕೆ ಬಹುದೊಡ್ಡ ನಷ್ಟವಾಗಿದೆ. ಕಾಂಗ್ರೆಸ್ ದುರಾಡಳಿತ ಕರ್ನಾಟಕವನ್ನು ಬಾಧಿಸುತ್ತಿದೆ. ಕಳೆದ ಹತ್ತು ತಿಂಗಳಲ್ಲಿ ರಾಜ್ಯ ಆರ್ಥಿಕ ದಿವಾಳಿಯತ್ತ ಸಾಗಿದೆ. ರಸ್ತೆ, ಚರಂಡಿ ರಿಪೇರಿ ಸೇರಿದಂತೆ ಸಣ್ಣಪುಟ್ಟ ಕಾಮಗಾರಿ ನಡೆಸುವುದಕ್ಕೂ ಶಾಸಕರಿಗೆ ಹಣ ನೀಡುತ್ತಿಲ್ಲ. ತಮ್ಮ ಕ್ಷೇತ್ರಗಳಲ್ಲಿ ಮುಖ ತೋರಿಸಲೂ ಅವರಿಗೆ ಆಗುತ್ತಿಲ್ಲ ಎಂದರು.
ಜೆಡಿಎಸ್ ನಗರ ಘಟಕದ ಅಧ್ಯಕ್ಷ ಎಚ್.ಎಂ.ರಮೇಶ್ ಗೌಡ, ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ, ಬಿಜೆಪಿ ಶಾಸಕ ಸಿ.ಕೆ.ರಾಮಮೂರ್ತಿ, ಮುಖಂಡರಾದ ಅಂದಾನಪ್ಪ, ಭಾಗೇಗೌಡ, ಗಂಗಾಧರ ಮೂರ್ತಿ, ದೇವರಾಜ್ ಉಪಸ್ಥಿತರಿದ್ದರು.