ಬೆಂಗಳೂರು: ರಾಜ್ಯದಲ್ಲಿಯೂ ವೈದ್ಯಕೀಯ ಆಮ್ಲಜನಕದ ಕೊರತೆ ಎದುರಾಗಿದ್ದು, ಕರ್ನಾಟಕಕ್ಕೆ 1,200 ಟನ್ ಆಮ್ಲಜನಕ ಪೂರೈಸುವಂತೆ ಕೋರ್ಟ್ ಈಗಾಗಲೇ ಆದೇಶಿಸಿದೆ. ಆದರೆ, ಕೇಂದ್ರದಿಂದ ರಾಜ್ಯಕ್ಕೆ ಕೇವಲ 120 ಟನ್ ಆಮ್ಲಜನಕ ಮಾತ್ರ ಪೂರೈಕೆಯಾಗಿದೆ. ಈ ಬಗ್ಗೆ ಪ್ರಶ್ನೆ ಮಾಡಿರುವ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ, 'ಈ ಒಕ್ಕೂಟದಲ್ಲಿ ಕನ್ನಡಿಗರೇನು ತಬ್ಬಲಿ ಮಕ್ಕಳೇ?' ಎಂದಿದ್ದಾರೆ.
ಮಹಾರಾಷ್ಟ್ರದ ನಂತರ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿರುವ ಕರ್ನಾಟಕಕ್ಕಿಂತ ಉತ್ತರ ಪ್ರದೇಶಕ್ಕೆ ಹೆಚ್ಚು ಪ್ರಮಾಣದಲ್ಲಿ ಆಮ್ಲಜನಕ ಪೂರೈಕೆಯಾಗಿದೆ. ಕರ್ನಾಟಕದ ವಿಚಾರದಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿರುವುದು ಸರ್ಕಾರವೇ ನೀಡಿರುವ ಅಂಕಿ ಅಂಶಗಳಿಂದ ಬಯಲಾಗಿದೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.
ಕರ್ನಾಟಕದ ವಿಚಾರದಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿರುವುದು ಸರ್ಕಾರವೇ ನೀಡಿರುವ ಅಂಕಿ ಅಂಶಗಳಿಂದ ಬಯಲಾಗಿದೆ. ಕರ್ನಾಟಕ, ಕನ್ನಡಿಗರ ವಿಚಾರದಲ್ಲಿ ಕೇಂದ್ರಕ್ಕೆ ಈ ಮಟ್ಟಿಗಿನ ತಾತ್ಸಾರ ಏಕೆ? ಇಲ್ಲಿ ಬಿಜೆಪಿಯದ್ದೇ ಸರ್ಕಾರ ಇರುವುದಕ್ಕೋ? ಅತಿ ಹೆಚ್ಚು ಸಂಸದರು ಆಯ್ಕೆಯಾಗಿರುವುದಕ್ಕೋ? ಅಥವಾ ಯಡಿಯೂರಪ್ಪರನ್ನು ಖಳನಾಯಕರಾಗಿಸಲೋ?
— H D Kumaraswamy (@hd_kumaraswamy) May 13, 2021
2/8
'ನ್ಯಾಯಾಲಯ ಹೇಳಿದ್ದ 1200 ಮೆಟ್ರಿಕ್ ಟನ್ ಬದಲಿಗೆ 120 ಮೆಟ್ರಿಕ್ ಟನ್ ಆಮ್ಲಜನಕ ಪೂರೈಸಿದ್ದಕ್ಕೆ ಮುಖ್ಯಮಂತ್ರಿ, ಕೇಂದ್ರದ ಸಚಿವರು, ಬಿಜೆಪಿ ಸಂಸದರು ಮುಗಿಬಿದ್ದು ಕೇಂದ್ರ, ನರೇಂದ್ರ ಮೋದಿ ಅವರನ್ನು ಅಭಿನಂದಿಸಿದ್ದಾರೆ. ನಮಗೆ ಸಿಗಬೇಕಾಗಿದ್ದರಲ್ಲಿ ಮುರಿದುಕೊಂಡು ಕೊಟ್ಟದ್ದಕ್ಕೆ ಧನ್ಯವಾದ ಏಕೆ?' ಎಂದು ಪ್ರಶ್ನಿಸಿದ್ದಾರೆ.
'ಕೇಂದ್ರ ಸರ್ಕಾರ ತಾರತಮ್ಯ ಬಿಟ್ಟು ಕರ್ನಾಟಕದ ಅಗತ್ಯವನ್ನು ಪೂರೈಸಬೇಕು. ತಾನು ಸರ್ವಶಕ್ತ ಆಡಳಿತ ನಡೆಸುತ್ತಿರುವ ದಿಮಾಕನ್ನು ಕೇಂದ್ರ ಬಿಡಬೇಕು. ಒಕ್ಕೂಟ ಸರ್ಕಾರ ನಡೆಸುತ್ತಿರುವ ವಾಸ್ತವ ಅರಿಯಬೇಕು. ಈ ವಿಚಾರದಲ್ಲಿ ಆಗುತ್ತಿರುವ ತಾರತಮ್ಯವನ್ನೇ ಕನ್ನಡಿಗರಾಗಿ ನಾವು ಪ್ರಶ್ನೆ ಮಾಡದೇ ಹೋದರೆ ಇನ್ನ್ಯಾವ ವಿಚಾರದಲ್ಲಿ ನಾವು ನ್ಯಾಯ ಪಡೆಯಲು ಸಾಧ್ಯ...' ಎಂದು ಕುಮಾರಸ್ವಾಮಿ ಟ್ವೀಟಿಸಿದ್ದಾರೆ.
ನ್ಯಾಯಾಲಯ ಹೇಳಿದ್ದ 1200MT ಬದಲಿಗೆ 120MT ಆಮ್ಲಜನಕ ಪೂರೈಸಿದ್ದಕ್ಕೆ ಮುಖ್ಯಮಂತ್ರಿ, ಕೇಂದ್ರದ ಸಚಿವರು, ಬಿಜೆಪಿ ಸಂಸದರು ಮುಗಿಬಿದ್ದು ಕೇಂದ್ರ, ನರೇಂದ್ರ ಮೋದಿ ಅವರನ್ನು ಅಭಿನಂದಿಸಿದ್ದಾರೆ. ನಮಗೆ ಸಿಗಬೇಕಾಗಿದ್ದರಲ್ಲಿ ಮುರಿದುಕೊಂಡು ಕೊಟ್ಟದ್ದಕ್ಕೆ ಧನ್ಯವಾದ ಏಕೆ? ಬಿಜೆಪಿ ನಾಯಕರು, ಬಿಜೆಪಿ ಬೆಂಬಲಿಗರು ಈ ಗುಲಾಮಗಿರಿ ಬಿಡಬೇಕು.
— H D Kumaraswamy (@hd_kumaraswamy) May 13, 2021
6/8
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.