ಬೆಳಗಾವಿ: 'ಕಳಸಾ ಬಂಡೂರಿ ಪರಿಷ್ಕೃತ ಸಮಗ್ರ ಯೋಜನಾ ವರದಿಗೆ (ಡಿಪಿಆರ್) ಕೇಂದ್ರ ಸರ್ಕಾರ ಅನುಮೋದನೆ ನೀಡಿದ್ದು, ತಕ್ಷಣವೇ ಟೆಂಡರ್ ಪ್ರಕ್ರಿಯೆ ಆರಂಭಿಸಿ, ಕಾಮಗಾರಿ ನಡೆಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ವಿಧಾನಸಭೆಯಲ್ಲಿ ಗುರುವಾರ ಮಾತನಾಡಿದ ಅವರು, ‘ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿರುವಾಗಲೇ ಪ್ರಧಾನಿ ನರೇಂದ್ರ ಮೋದಿ ಸಿಹಿ ಸುದ್ದಿ ನೀಡಿದ್ದಾರೆ. ಕೂಡಲೇ ಕಾಮಗಾರಿ ಕೈಗೊಳ್ಳಲು ಕ್ರಮಕೈಗೊಳ್ಳುತ್ತೇವೆ. ನಾವೇ ಅಡಿಗಲ್ಲು ಹಾಕಿ ದೊಡ್ಡ ಕಾರ್ಯಕ್ರಮ ಮಾಡಿ ಈ ಭಾಗದ ಜನರಿಗೆ ಆತ್ಮವಿಶ್ವಾಸ ಮೂಡಿಸುವ ಕೆಲಸ ಮಾಡುತ್ತೇವೆ’ ಎಂದರು.