ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ | ಕಲಬುರಗಿ: ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ

ನಮ್ಮದು ನುಡಿದಂತೆ ನಡೆಯುವ ಸರ್ಕಾರ
Published 17 ಸೆಪ್ಟೆಂಬರ್ 2023, 4:29 IST
Last Updated 17 ಸೆಪ್ಟೆಂಬರ್ 2023, 4:29 IST
ಅಕ್ಷರ ಗಾತ್ರ

ಕಲಬುರಗಿ: ಕಲ್ಯಾಣ ‌ಕರ್ನಾಟಕ ಅಮೃತ ಮಹೋತ್ಸವದ ಅಂಗವಾಗಿ ಇಲ್ಲಿನ ಸಿಎಆರ್ ಪರೇಡ್ ಮೈದಾನದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.

ನಂತರ ಮಾತನಾಡಿದ ಅವರು, 'ಸ್ವಾಮಿ ರಮಾನಂದ ತೀರ್ಥರು ಹಾಗೂ ಅಸಂಖ್ಯ ಹೋರಾಟಗಾರರ ತ್ಯಾಗ, ಬಲಿದಾನಗಳ ಫಲವಾಗಿ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲರ ಸಂಕಲ್ಪ ಶಕ್ತಿಯಿಂದಾಗಿ ಹೈದರಾಬಾದ್ ಕರ್ನಾಟಕ ನಿಜಾಮರ ಆಳ್ವಿಕೆಯಿಂದ ಮುಕ್ತವಾಗಿ ಭಾರತದ ಒಕ್ಕೂಟಕ್ಕೆ ಸೇರ್ಪಡೆಯಾಯಿತು' ಎಂದರು.

'2013ರಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹೈದರಾಬಾದ್ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಸ್ಥಾಪಿಸಿ ಈ ಭಾಗದ ಅಭಿವೃದ್ಧಿಗೆ ಹೊಸ ವೇಗ ನೀಡಲಾಯಿತು' ಎಂದರು.

'ಸಂವಿಧಾನದಲ್ಲಿ 371 (ಜೆ) ಪರಿಚ್ಛೇದ ಸೇರ್ಪಡೆಯೊಂದಿಗೆ ಹೈ-ಕ ಭಾಗಕ್ಕೆ ವಿಶೇಷ ಸ್ಥಾನಮಾನ ದೊರೆತಂತಾಯಿತು. ಹೈ-ಕ ಪ್ರದೇಶ ಅಭಿವೃದ್ಧಿ ಮಂಡಳಿ ಸ್ಥಾಪಿಸಿ ಈ ಭಾಗದ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಯಿತು. ಮುಂದೆ ಮಂಡಳಿಯನ್ನು ಕಲ್ಯಾಣ ಕರ್ನಾಟಕ ‌ಪ್ರದೇಶ ಅಭಿವೃದ್ಧಿ ಮಂಡಳಿ ಎಂದು‌ ಪುನರ್ ನಾಮಕರಣ ಮಾಡಲಾಯಿತು' ಎಂದು ಹೇಳಿದರು.

'ಸಮಾನತೆಯ ಹೊಸ ಹಾದಿಯಲ್ಲಿ ಸಾಗಿದ ಬುದ್ಧ, ಸಾಮಾಜಿಕ ‌ಕ್ರಾಂತಿಯ ಹರಿಕಾರ ಬಸವಣ್ಣ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ತತ್ವ ಮತ್ತು ಅದರ್ಶಗಳನ್ನು ಅಕ್ಷರಶಃ ಅಳವಡಿಸಿಕೊಂಡಿರುವ ನಮ್ಮ ಸರ್ಕಾರವು ಅಧಿಕಾರದ ಚುಕ್ಕಾಣಿ ಹಿಡಿದ ದಿನವೇ ಚುನಾವಣಾ ‌ಪೂರ್ವ ನೀಡಿದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳ ಜಾರಿಗೆ ತಾತ್ವಿಕ ಅನುಮೋದನೆ ನೀಡಿ 100 ದಿನಗಳ ಅವಧಿಯಲ್ಲಿ ಪ್ರಮುಖ ನಾಲ್ಕು ಗ್ಯಾರಂಟಿ ಜಾರಿಗೆ ತಂದಿದ್ದೇವೆ. ಇದು ನುಡಿದಂತೆ ನಡೆಯುವ ಸರ್ಕಾರ ಎಂಬುದು ಮತ್ತೊಮ್ಮೆ ಸಾಬೀತಾಗಿದೆ' ಎಂದು ಹೇಳಿದರು.

'ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿಗೆ 371 (ಜೆ) ತಿದ್ದುಪಡಿಯನ್ವಯ ರಚನೆಗೊಂಡ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಪ್ರಸಕ್ತ 2023-24ನೇ ಸಾಲಿನ ಬಜೆಟ್ ನಲ್ಲಿ ತಿಳಿಸಿದಂತೆ 5 ಸಾವಿರ ಕೋಟಿ ವೆಚ್ಚದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ' ಎಂದರು.

ನಂತರ ಪೊಲೀಸ್, ಅರಣ್ಯ, ಅಬಕಾರಿ, ಗೃಹರಕ್ಷಕ ದಳ ಸೇರಿದಂತೆ ವಿವಿಧ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್, ಐಟಿ, ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಕೆಕೆಆರ್ ಡಿಬಿ ಅಧ್ಯಕ್ಷ ಡಾ. ಅಜಯ್ ಸಿಂಗ್, ಮುಖ್ಯಮಂತ್ರಿಗಳ ರಾಜಕೀಯ ‌ಕಾರ್ಯದರ್ಶಿ ಗೋವಿಂದರಾಜ, ಶಾಸಕರಾದ ಬಿ.ಆರ್. ಪಾಟೀಲ, ಎಂ.ವೈ. ಪಾಟೀಲ, ಅಲ್ಲಮಪ್ರಭು ಪಾಟೀಲ, ಕನೀಜ್ ಫಾತಿಮಾ, ವಿಧಾನಪರಿಷತ್ ಸದಸ್ಯರಾದ ತಿಪ್ಪಣ್ಣಪ್ಪ ಕಮಕನೂರ, ಶಶೀಲ್ ಜಿ. ನಮೋಶಿ, ಮೇಯರ್ ವಿಶಾಲ ದರ್ಗಿ, ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ, ಐಜಿಪಿ ಅಜಯ್ ಹಿಲೋರಿ, ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಕಮಿಷನರ್ ಚೇತನ್ ಆರ್, ಜಿ.ಪಂ. ಸಿಇಒ ಭಂವರ್ ಸಿಂಗ್ ಮೀನಾ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT