ಕಲಬುರ್ಗಿ: ನಗರದಲ್ಲಿ ಫೆಬ್ರುವರಿಯಲ್ಲಿ ನಡೆಯಲಿರುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಜಿಲ್ಲಾಧಿಕಾರಿ ಶರತ್ ಬಿ. ಅವರು ತಮ್ಮ ಒಂದು ತಿಂಗಳ ವೇತನ ₹ 97,461 ದೇಣಿಗೆಯಾಗಿ ನೀಡಿದರು.
ಬುಧವಾರ ಇಲ್ಲಿನ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ನಡೆದ ಪರಿಷತ್ತಿನ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ಭಾಗವಹಿಸಿದ ಜಿಲ್ಲಾಧಿಕಾರಿ, ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ವೀರಭದ್ರ ಸಿಂಪಿ ಅವರಿಗೆ ಚೆಕ್ ಹಸ್ತಾಂತರಿಸಿದರು.
ಇದೇ ಸಂದರ್ಭದಲ್ಲಿ ಸಿಂಪಿ ಅವರೂ ತಮ್ಮ ಒಂದು ದಿನದ ವೇತನವನ್ನು ನುಡಿಹಬ್ಬಕ್ಕೆ ದೇಣಿಗೆ ನೀಡುವುದಾಗಿ ಘೋಷಿಸಿದರು.
ಇತ್ತೀಚೆಗೆ ಉಪ ಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಎಂ.ಕಾರಜೋಳ ಅವರ ನೇತೃತ್ವದಲ್ಲಿ ನಡೆದ ಸಮ್ಮೇಳನದ ಸಭೆಯಲ್ಲಿ ದಾನಿಗಳಿಂದ ನೆರವು ಸಂಗ್ರಹಿಸುವಂತೆ ಸೂಚನೆ ನೀಡಿದ್ದರು.
ಅದರಂತೆ ವಿವಿಧ ಉದ್ಯಮಿಗಳು, ಸರ್ಕಾರಿ ನೌಕರರಿಗೆ ಪತ್ರ ಬರೆದಿರುವ ಜಿಲ್ಲಾಧಿಕಾರಿ, ಮೊದಲು ತಾವೇ ತಮ್ಮ ಪಾಲಿನ ಕೊಡುಗೆ ನೀಡಿದರು.