ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಜಿಂದಾಬಾದ್ ಆರೋಪ’: ನಡೆಯದ ಕಲಾಪ

Published 28 ಫೆಬ್ರುವರಿ 2024, 15:53 IST
Last Updated 28 ಫೆಬ್ರುವರಿ 2024, 15:53 IST
ಅಕ್ಷರ ಗಾತ್ರ

ಬೆಂಗಳೂರು: ‘ವಿಧಾನಸೌಧದಲ್ಲಿ ಕಿಡಿಗೇಡಿಯೊಬ್ಬ ‘ಪಾಕಿಸ್ತಾನ್‌ ಜಿಂದಾಬಾದ್‌’ ಎಂದು ಘೋಷಣೆ ಕೂಗಿದ್ದಾನೆ’ ಎಂದು ಆರೋಪಿಸಿ ವಿಧಾನಮಂಡಲದ ಉಭಯ ಸದನಗಳಲ್ಲಿ ಬಿಜೆಪಿ ಗದ್ದಲ ಎಬ್ಬಿಸಿದ್ದರಿಂದಾಗಿ ಬುಧವಾರದ ಕಲಾಪ ಸುಗಮವಾಗಿ ನಡೆಯಲಿಲ್ಲ.

ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯರು ಗದ್ದಲ ಎಬ್ಬಿಸಿ, ಧರಣಿ ನಡೆಸಿದಾಗ ಸಭಾಧ್ಯಕ್ಷ ಯು.ಟಿ.ಖಾದರ್‌ ಅವರು ಕಲಾಪವನ್ನು ಗುರುವಾರಕ್ಕೆ ಮುಂದೂಡಿದರು. ವಿಧಾನಪರಿಷತ್ತಿನಲ್ಲಿ ಇದೇ ವಿಷಯದ ಚರ್ಚೆಯ ವೇಳೆ, ಏಕವಚನ ಬಳಸಿದ್ದಾರೆಂದು ಸಿಟ್ಟಿಗೆದ್ದ ಬಿಜೆಪಿ ಸದಸ್ಯರು ಕಾಂಗ್ರೆಸ್‌ ಸದಸ್ಯರತ್ತ ಮುನ್ನುಗ್ಗಿದ ಘಟನೆಯೂ ನಡೆಯಿತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ ಮೇಲಿನ ಚರ್ಚೆಗೆ ಉತ್ತರ ನೀಡಿ, ವಿತ್ತೀಯ ಮಸೂದೆಗೆ ಒಪ್ಪಿಗೆ ಪಡೆಯಬೇಕಾಗಿರುವುದರಿಂದ ಕಲಾಪವನ್ನು ಶುಕ್ರವಾರದವರೆಗೆ ವಿಸ್ತರಿಸುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.

ಬೆಳಿಗ್ಗೆ ಕಲಾಪ ಆರಂಭವಾಗುತ್ತಿದ್ದಂತೆ ಬಿಜೆಪಿ ಸದಸ್ಯರು ಉಭಯ ಸದನಗಳಲ್ಲಿ ವಿಷಯವನ್ನು ಪ್ರಸ್ತಾಪಿಸಿದರು. ‘ವಿಧಾನಸೌಧದ ಇತಿಹಾಸದಲ್ಲೇ ಇಂತಹದ್ದೊಂದು ಘಟನೆ ಈವರೆಗೆ ನಡೆದಿಲ್ಲ. ಇಂತಹ ಘೋಷಣೆ ಕೂಗಿದವರ ವಿರುದ್ಧ ಸರ್ಕಾರ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಸರ್ಕಾರ ಮೌನವಹಿಸಿರುವುದು ನೋಡಿದರೆ ಪ್ರಕರಣದ ಗಂಭೀರತೆಯ ಅರಿವಾಗಿಲ್ಲ. ಘಟನೆಯ ನೈತಿಕ ಹೊಣೆಯನ್ನು ಮುಖ್ಯಮಂತ್ರಿಯವರೇ ಹೊತ್ತುಕೊಳ್ಳಬೇಕು’ ಎಂದೂ ಆಗ್ರಹಿಸಿದರು. ಈ ಕುರಿತು ಪರ–ವಿರೋಧ ವಾಗ್ವಾದಗಳೂ ನಡೆದವು. ಗಲಾಟೆ ಮಧ್ಯೆಯೇ, ನಾಲ್ಕು ಮಸೂದೆಗಳಿಗೆ ಪರಿಷತ್ತಿನಲ್ಲಿ ಅಂಗೀಕಾರ ಪಡೆಯಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT