ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭೆ ಚುನಾವಣೆ | ಟಿಕೆಟ್‌ಗಾಗಿ ‘ಸೋತವರ’ ಲಾಬಿ; ಕೆಲ ಮುಖಂಡರ ಆಕ್ಷೇಪ

ಬಿಜೆಪಿಯಲ್ಲಿ ಲೋಕಸಭೆ ಚುನಾವಣೆ ಮೇಲೆ ಹಲವರು ಕಣ್ಣು
Published 2 ಜನವರಿ 2024, 14:07 IST
Last Updated 2 ಜನವರಿ 2024, 14:07 IST
ಅಕ್ಷರ ಗಾತ್ರ

ನವದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿರುವ ಬಿಜೆಪಿಯ ಡಜನ್‌ಗೂ ಅಧಿಕ ಮಾಜಿ ಸಚಿವರು ಹಾಗೂ ಮಾಜಿ ಶಾಸಕರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅದೃಷ್ಟ ಪರೀಕ್ಷೆಗೆ ಅಣಿಯಾಗಿದ್ದಾರೆ. ಈ ನಾಯಕರ ಉಮೇದಿಗೆ ಪಕ್ಷದಲ್ಲೇ ಆಕ್ಷೇಪ ವ್ಯಕ್ತವಾಗಿದೆ. 

ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸಗಢ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಹೊಸ ಮುಖಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಮಣೆ ಹಾಕಿತು. ಮೂರು ರಾಜ್ಯಗಳಲ್ಲಿ ಪಕ್ಷವು ಅಧಿಕಾರದ ಚುಕ್ಕಾಣಿ ಹಿಡಿಯಲು ಈ ಪ್ರಯೋಗವೂ ಒಂದು ಕಾರಣ. ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲೂ ಈ ಮಾದರಿಯನ್ನು ಅನುಸರಿಸಬೇಕು ಎಂಬುದು ಪಕ್ಷದ ಕೆಲವು ಮುಖಂಡರ ಅನಿಸಿಕೆ. ಈ ವಿಷಯವನ್ನು ಪಕ್ಷದ ವರಿಷ್ಠರ ಗಮನಕ್ಕೂ ತಂದಿದ್ದಾರೆ. ಈ ಮುಖಂಡರು ಟಿಕೆಟ್‌ಗೆ ಲಾಬಿ ನಡೆಸುವ ಬದಲು ಪಕ್ಷದ ಸಂಘಟನೆಗೆ ಒತ್ತು ನೀಡಲಿ ಎಂಬ ವಾದವೂ ಪಕ್ಷದಲ್ಲಿದೆ. 

ವಯಸ್ಸಿನ ಕಾರಣದಿಂದ ಬಿಜೆಪಿಯ ಸುಮಾರು ಎಂಟು ಸಂಸದರಿಗೆ ಈ ಸಲ ಟಿಕೆಟ್‌ ಸಿಗುವುದು ಅನುಮಾನ. ಈ ಕ್ಷೇತ್ರಗಳಲ್ಲಿ ಹುರಿಯಾಳುಗಳಾಗಲು ‘ಮಾಜಿ’ಗಳು ಕಳೆದ ಕೆಲವು ತಿಂಗಳುಗಳಿಂದ ಸಿದ್ಧತೆ ನಡೆಸಿದ್ದಾರೆ. ಇವರಲ್ಲಿ ಹೆಚ್ಚಿನವರು ಹಿರಿಯ ಮುಖಂಡರು. ಕನಿಷ್ಠ ನಾಲ್ಕೈದು ಬಾರಿ ಶಾಸಕರಾಗಿ ಅಧಿಕಾರ ಅನುಭವಿಸಿದವರು. ಮತ್ತೆ ಅವರಿಗೆ ಅವಕಾಶ ನೀಡುವುದು ಸರಿಯಲ್ಲ. ಅದರ ಬದಲು ಸಂಘಟನೆಯಲ್ಲಿ ಸಕ್ರಿಯರಾಗಿರುವ ಹೊಸ ಮುಖಗಳನ್ನು ಕಣಕ್ಕೆ ಇಳಿಸುವುದು ಉತ್ತಮ ಎಂಬುದು ಪಕ್ಷದ ಕೆಲವು ಮುಖಂಡರ ವಾದ. 

‘ಬಿಜೆಪಿ ಸರ್ಕಾರದ ಅವಧಿಯಲ್ಲಿ ವಿ.ಸೋಮಣ್ಣ, ಡಾ.ಕೆ. ಸುಧಾಕರ್‌, ಮುರುಗೇಶ ನಿರಾಣಿ, ಬಿ.ಶ್ರೀರಾಮುಲು ಹಾಗೂ ಬಿ.ಸಿ.ಪಾಟೀಲ ಅವರು ಪ್ರಮುಖ ಖಾತೆಗಳನ್ನು ನಿಭಾಯಿಸಿದ್ದರು. ಪ್ರಣಾಳಿಕೆ ತಯಾರಿಕೆ ಸಮಿತಿಗೆ ಸುಧಾಕರ್ ಅಧ್ಯಕ್ಷರಾಗಿದ್ದರು. ಇವರೆಲ್ಲ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋತಿದ್ದಾರೆ. ಇದೀಗ ಲೋಕಸಭಾ ಟಿಕೆಟ್‌ ಮೇಲೆ ಕಣ್ಣಿಟ್ಟಿದ್ದಾರೆ. ರಾಷ್ಟ್ರ ರಾಜಕಾರಣಕ್ಕೆ ಹೋಗುವುದು ಅವರ ಆಲೋಚನೆ. ಮುಂದಿನ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ರಾಜ್ಯ ರಾಜಕಾರಣಕ್ಕೆ ಮರಳುತ್ತಾರೆ. ಗೆದ್ದರೆ ಸಚಿವ ಸ್ಥಾನಕ್ಕೂ ಲಾಬಿ ನಡೆಸುತ್ತಾರೆ. ಈ ರೀತಿಯಾದರೆ ಯುವ ಮುಖಗಳಿಗೆ ಹಾಗೂ ಕಾರ್ಯಕರ್ತರಿಗೆ ಅವಕಾಶ ಸಿಗುವುದು ಯಾವಾಗ? ಕಾಂಗ್ರೆಸ್‌ಗೂ ಬಿಜೆಪಿಗೂ ವ್ಯತ್ಯಾಸವೇ ಇಲ್ಲದಂತಾಗುತ್ತದೆ’ ಎಂದು ಪಕ್ಷದ ಹಿರಿಯ ಮುಖಂಡರೊಬ್ಬರು ವಿಶ್ಲೇಷಿಸಿದರು. 

‘ಬಿಜೆಪಿ ಸರ್ಕಾರದ ಆಡಳಿತದಲ್ಲಿ ಕೋವಿಡ್‌ ಹೆಸರಿನಲ್ಲಿ ₹40 ಸಾವಿರ ಕೋಟಿ ಅವ್ಯವಹಾರ ನಡೆದಿದೆ’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಕಳೆದ ವಾರವಷ್ಟೇ ಆರೋಪಿಸಿದ್ದಾರೆ. ಕೋವಿಡ್‌ ಅಕ್ರಮದ ತನಿಖೆಗೆ ಕಾಂಗ್ರೆಸ್‌ ತನಿಖಾ ಆಯೋಗ ರಚಿಸಿದೆ. ಲೋಕಸಭಾ ಚುನಾವಣೆಗೆ ಮುನ್ನವೇ ಈ ಆಯೋಗದಿಂದ ಸರ್ಕಾರ ಖಂಡಿತವಾಗಿಯೂ ವರದಿ ಪಡೆಯಲಿದೆ. ಕೋವಿಡ್‌ ವ್ಯಾಪಕವಾಗಿದ್ದ ಸಂದರ್ಭದಲ್ಲಿ ಬಿ.ಶ್ರೀರಾಮುಲು ಹಾಗೂ ಡಾ.ಕೆ.ಸುಧಾಕರ್‌ ಅವರು ಆರೋಗ್ಯ ಸಚಿವರಾಗಿದ್ದರು. ರಾಮುಲು ಹಾಗೂ ಸುಧಾಕರ್‌ ಪಕ್ಷದ ಅಭ್ಯರ್ಥಿಗಳಾದರೆ ಕಾಂಗ್ರೆಸ್‌ಗೆ ದೊಡ್ಡ ಅಸ್ತ್ರ ಸಿಕ್ಕಂತೆ ಆಗುತ್ತದೆ. ಕೈ ಪಾಳಯದ ನಾಯಕರು ಯತ್ನಾಳ ಹೇಳಿಕೆಯನ್ನೇ ಪ್ರಮುಖ ಪ್ರಚಾರ ವಿಷಯವನ್ನಾಗಿ ಮಾಡಿಕೊಳ್ಳುತ್ತಾರೆ. ಇದರಿಂದ ಪಕ್ಷ ಮುಜುಗರ ಅನುಭವಿಸಬೇಕಾಗುತ್ತದೆ’ ಎಂದು ಮತ್ತೊಬ್ಬ ಮುಖಂಡರು ಅಭಿಪ್ರಾಯಪಟ್ಟರು. 

‘ಸಿ.ಟಿ. ರವಿ ಅವರು ಸಚಿವರಾಗಿದ್ದರು. ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯೂ ಆಗಿದ್ದರು. ರಾಷ್ಟ್ರ ರಾಜಕಾರಣಕ್ಕೆ ತೆರಳಿದ ನಂತರ ಕ್ಷೇತ್ರದ ಜತೆಗಿನ ನಂಟು ಕಡಿಮೆಯಾಯಿತು. ಚಿಕ್ಕಮಗಳೂರು ಜಿಲ್ಲೆಯ ಎಲ್ಲ ಐದು ಕ್ಷೇತ್ರಗಳಲ್ಲಿ ಪಕ್ಷ ಸೋತಿತು. ಅವರು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಕ್ಕೆ ವಲಸೆ ಹೋದರೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪಕ್ಷ ಇನ್ನಷ್ಟು ದುರ್ಬಲ ಆಗಲಿದೆ. ಜಿಲ್ಲೆಯ ನಾಯಕತ್ವದ ನಿರ್ವಾತ ಸೃಷ್ಟಿಯಾಗಲಿದೆ’ ಎಂಬುದು ಮತ್ತೊಬ್ಬ ನಾಯಕರ ವಿಶ್ಲೇಷಣೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT