ಬೆಂಗಳೂರು: ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಯಂತೆ 200 ಯೂನಿಟ್ ವರೆಗೆ ಉಚಿತ ವಿದ್ಯುತ್, ಬಿಪಿಎಲ್ ಕುಟುಂಬಗಳ ಪ್ರತಿ ಸದಸ್ಯರಿಗೆ ತಿಂಗಳಿಗೆ ಹತ್ತು ಕೆ.ಜಿ. ಅಕ್ಕಿ, ಮನೆಯ ಯಜಮಾನಿಗೆ ಮಾಸಿಕ ₹2,000 ನೆರವು ನೀಡುವುದು ಸೇರಿದಂತೆ ಎಲ್ಲ ಐದು ಗ್ಯಾರಂಟಿಗಳ ಅನುಷ್ಠಾನಕ್ಕೆ ಸಿದ್ದರಾಮಯ್ಯ ನೇತೃತ್ವದ ನೂತನ ಸಂಪುಟ ಶನಿವಾರ ತಾತ್ವಿಕ ಅನುಮೋದನೆ ನೀಡಿದೆ.
ಪ್ರಮಾಣ ವಚನ ಸ್ವೀಕರಿಸಿದ ಬಳಿಕ ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಂಪುಟದ ಎಲ್ಲ ಸದಸ್ಯರೊಂದಿಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ತೀರ್ಮಾನಗಳನ್ನು ಪ್ರಕಟಿಸಿದರು.
ನಿರುದ್ಯೋಗಿ ಪದವೀಧರರಿಗೆ ಎರಡು ವರ್ಷಗಳವರೆಗೆ ತಿಂಗಳಿಗೆ ₹3,000 ಮತ್ತು ಡಿಪ್ಲೊಮಾ ಪದವೀಧರರಿಗೆ ತಿಂಗಳಿಗೆ ₹1,500 ಭತ್ಯೆ ನೀಡಲಾಗುವುದು. ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ನೀಡಲಾಗುವುದು ಎಂದರು.
ಐದು ಗ್ಯಾರಂಟಿಗಳ ಅನುಷ್ಠಾನಕ್ಕೆ ವರ್ಷಕ್ಕೆ ₹50,000 ಕೋಟಿ ಅಗತ್ಯವಿದೆ. ತೆರಿಗೆ ಸಂಗ್ರಹದಲ್ಲಿ ಬಿಗಿ ಕ್ರಮ ಮತ್ತು ಹೊಸ ಆದಾಯ ಮೂಲಗಳಿಂದ ಈ ಮೊತ್ತ ಸಂಗ್ರಹಿಸಲು ಸಾಧ್ಯವಿದೆ. ಎಷ್ಟೇ ಕಷ್ಟವಾದರೂ ಗ್ಯಾರಂಟಿಗಳ ಅನುಷ್ಠಾನದಿಂದ ಹಿಂದೆ ಸರಿಯುವುದಿಲ್ಲ ಎಂದರು.
ಈ ಎಲ್ಲ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಆದೇಶ ಹೊರಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಮಾರ್ಗಸೂಚಿಗಳ ಕುರಿತು ಸಂಪುಟದ ಮುಂದಿನ ಸಭೆಯಲ್ಲಿ ನಿರ್ಧರಿಸಲಾಗುವುದು. ಅಷ್ಟರೊಳಗೆ ಅಗತ್ಯ ಮಾಹಿತಿಗಳನ್ನು ಸಂಗ್ರಹಿಸಿ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.
ಇಂದಿರಾ ಕ್ಯಾಂಟೀನ್ ಪುನರಾರಂಭ:
ಎಲ್ಲ ಇಂದಿರಾ ಕ್ಯಾಂಟೀನ್ ಗಳನ್ನು ಪುನರಾರಂಭ ಮಾಡಲಾಗುವುದು. ಆ ಬಗ್ಗೆಯೂ ಅಗತ್ಯ ಮಾಹಿತಿ ಸಲ್ಲಿಸಲು ಸೂಚನೆ ನೀಡಲಾಗಿದೆ ಎಂದರು.