ಈ ಹಿಂದಿನ ಸರ್ಕಾರ ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಂ. ಲಕ್ಷ್ಮಿನಾರಾಯಣ ಅವರ ಅಧ್ಯಕ್ಷತೆಯಲ್ಲಿ ಸೀಮಾ ನಿರ್ಣಯ ಆಯೋಗವನ್ನು ರಚಿಸಿತ್ತು. ಸಿವಿಲ್ ನ್ಯಾಯಾಲಯದ ಅಧಿಕಾರ ಹೊಂದಿರುವ ಈ ಆಯೋಗವು, ಈ ಹಿಂದಿನ ಜನಗಣತಿ ಆಧರಿಸಿ ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಗಡಿಯನ್ನು ನಿರ್ಧರಿಸುವ ಜೊತೆಗೆ, ಚುನಾಯಿಸಬೇಕಾದ ಒಟ್ಟು ಸದಸ್ಯರ ಸಂಖ್ಯೆಯನ್ನು ನಿಗದಿಪಡಿಸಲು ಸರ್ಕಾರಕ್ಕೆ ಶಿಫಾರಸು ಮಾಡಬೇಕು. ಕ್ಷೇತ್ರಗಳ ಜನಸಂಖ್ಯೆ ನಿರ್ಧರಿಸುವ ಸಂದರ್ಭದಲ್ಲಿ ಸಾಧ್ಯವಾದಷ್ಟು ಸಮಾನ ಆಗಿರುವಂತೆ ಖಚಿತಪಡಿಸಿಕೊಳ್ಳಬೇಕು. ಅಲ್ಲದೆ, ಚುನಾವಣಾ ಕ್ಷೇತ್ರಗಳು ಭೌಗೋಳಿಕವಾಗಿ ಸಮೀಪ ಪ್ರದೇಶಗಳನ್ನು ಒಳಗೊಂಡಿರುವುದನ್ನು ಖಚಿತಪಡಿಸಿಕೊಂಡು ಶಿಫಾರಸು ಮಾಡಬೇಕು. ಜೊತೆಗೆ, ಸರ್ಕಾರ ವಹಿಸುವ ಇತರ ಜವಾಬ್ದಾರಿಗಳನ್ನೂ ನಿರ್ವಹಿಸಬೇಕಿದೆ. ಎಂ. ಲಕ್ಷ್ಮಿನಾರಾಯಣ ಅಧ್ಯಕ್ಷತೆಯ ಆಯೋಗ ಈಗಾಗಲೇ ಬಹುತೇಕ ಕೆಲಸಗಳನ್ನು ಪೂರ್ಣಗೊಳಿಸಿದೆ.