ಬೆಂಗಳೂರು: ಬೇರೆಯವರಿಗೆ ವ್ಯಾಕರಣದ ಪಾಠ ಹೇಳುವುದನ್ನು ನಿಲ್ಲಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಂಸದ ಪ್ರತಾಪ ಸಿಂಹ ವಾಗ್ದಾಳಿ ನಡೆಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ರಾಜ್ಯ ಘಟಕದ ‘ಎಕ್ಸ್’ (ಟ್ವೀಟ್) ಪೋಸ್ಟ್ ಕುರಿತು ಪ್ರತಿಕ್ರಿಯಿಸಿರುವ ಅವರು, ‘ಕಾಂಗ್ರೆಸ್ಸಿಗರೇ, ಬೇರೆಯವರಿಗೆ ಏಕವಚನ, ಬಹುವಚನ ಮತ್ತು ವ್ಯಾಕರಣದ ಪಾಠ ಹೇಳುವ ಮೊದಲು ಸ್ವತಃ ತಿದ್ದಿಕೊಳ್ಳಿ’ ಎಂದು ತಿರುಗೇಟು ನೀಡಿದ್ದಾರೆ.
ಕಾಂಗ್ರೆಸ್ಸಿಗರೇ, ಬೇರೆಯವರಿಗೆ ಏಕವಚನ, ಬಹುವಚನ ಮತ್ತು ವ್ಯಾಕರಣದ ಪಾಠ ಹೇಳುವ ಮೊದಲು ಸ್ವತಃ ತಿದ್ದಿಕೊಳ್ಳಿ… pic.twitter.com/Zb9T8QYfG4
— Pratap Simha (@mepratap) December 27, 2023
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ‘ಯುವ ನಿಧಿ’ ಯೋಜನೆಗೆ ಚಾಲನೆ ನೀಡಿದ್ದರು. ಇದೇ ವೇಳೆ ಮಾತನಾಡಿದ್ದ ಅವರು, ‘ನಾವು ನುಡಿದಂತೆ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ಕೊಟ್ಟು, ವಚನ ಪಾಲನೆ ಮಾಡಿದ್ದೇವೆ. ಪ್ರಧಾನಿ ನರೇಂದ್ರ ಮೋದಿ ಅವರೇ, ವರ್ಷಕ್ಕೆ 2 ಕೋಟಿಯಂತೆ ನಿಮ್ಮ ಸರ್ಕಾರ ಹತ್ತು ವರ್ಷಕ್ಕೆ 20 ಕೋಟಿ ಉದ್ಯೋಗ ಸೃಷ್ಟಿ ಮಾಡಬೇಕಿತ್ತು. ಎಷ್ಟು ಉದ್ಯೋಗ ಸೃಷ್ಟಿಯಾಗಿದೆ ಎಂದು ದೇಶದ ಜನರಿಗೆ ಲೆಕ್ಕ ಕೊಡಿ’ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದ್ದರು.
ರಾಷ್ಟ್ರೀಕೃತ ಬ್ಯಾಂಕುಗಳಲ್ಲಿರುವ ರೈತರ ಸಾಲ ಮನ್ನಾ ಮಾಡುವಂತೆ ದೇಶದಾದ್ಯಂತ ರೈತರು ಒತ್ತಾಯಿಸುತ್ತಿದ್ದರೆ, ಭಾರತೀಯ ಜನತಾ ಪಕ್ಷದ ನೇತೃತ್ವದ ಕೇಂದ್ರ ಸರ್ಕಾರ ರೈತರ ಕತ್ತು ಹಿಸುಕಿ ಸಾಯಿಸುವ ಕರಾಳ ಕೃಷಿ ಕಾಯ್ದೆಗಳನ್ನು ಜಾರಿಗೆ ತರಲು ಏನೆಲ್ಲ ಕಸರತ್ತು ನಡೆಸಿತ್ತು ಎನ್ನುವುದನ್ನು ಇಡೀ ದೇಶ ಕಂಡಿದೆ. ಕೃಷಿ ಕ್ಷೇತ್ರವನ್ನು ಕಾರ್ಪೋರೇಟ್ ಧಣಿಗಳಿಗೆ ಒತ್ತೆ ಇಡುವ ಬಿಜೆಪಿಯ ಹುನ್ನಾರವನ್ನು ದೇಶದ ರೈತರು ಅರ್ಥಮಾಡಿಕೊಂಡಿದ್ದಾರೆ. ತಮ್ಮ ರೈತ ವಿರೋಧಿ ಕೃತ್ಯಗಳನ್ನು ಮುಚ್ಚಿಹಾಕಲು ಬಿಜೆಪಿ ನಾಯಕರು ಆಗಾಗ ತಿರುಚಿದ ಹೇಳಿಕೆಗಳನ್ನು ಹಿಡ್ಕೊಂಡು ಎದೆ ಬಡಿದುಕೊಳ್ಳುತ್ತಾ ಇರುತ್ತಾರೆ ಎಂದು ಸಿದ್ದರಾಮಯ್ಯ ಟೀಕಿಸಿದ್ದರು.
‘ಅಣ್ಣ ಪ್ರತಾಪ ಸಿಂಹ ನಾಡಕಳ್ಳ, ತಮ್ಮ ವಿಕ್ರಮ್ ಸಿಂಹ ಕಾಡುಗಳ್ಳ! ಹತ್ತಾರು ಎಕರೆಯಲ್ಲಿದ್ದ ಸಾವಿರಾರು ಮರಗಳನ್ನು ಮಾರಣ ಹೋಮ ಮಾಡಿ, ಕಳ್ಳಸಾಗಣೆಗೆ ಮುಂದಾಗಿದ್ದ ಪ್ರತಾಪ್ ಸಿಂಹನ ಸಹೋದರನ ಮೇಲೆ ಪ್ರಕರಣ ದಾಖಲಿಸಿ ತನಿಖೆ ಮಾಡಲಾಗುತ್ತಿದೆ. ವೀರಪ್ಪನ್ನಿಂದ ತೆರವಾದ ಸ್ಥಾನಕ್ಕೆ ತಮ್ಮ ಸಹೋದರನನ್ನು ಪ್ರತಿಷ್ಠಾಪಿಸಲು ಮುಂದಾಗಿರುವಂತಿದೆ ಪ್ರತಾಪ್ ಸಿಂಹ! ಬಿಜೆಪಿಗರೇ, ಈ ಅಣ್ಣ ತಮ್ಮಂದಿರಿಂದ ನಾಡು, ಕಾಡು ಎರಡಕ್ಕೂ ಆಪತ್ತು ಅಲ್ಲವೇ’ ಎಂದು ಕಾಂಗ್ರೆಸ್ ರಾಜ್ಯ ಘಟಕ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.