ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ದೇಶದಲ್ಲೇ ಬಿಜೆಪಿ ಅತ್ಯಂತ ಭ್ರಷ್ಟ ಪಕ್ಷ; ನಮ್ಮ ಶಕ್ತಿ ತೋರಿಸುತ್ತೇವೆ: ಡಿಕೆಶಿ

Published 1 ಜೂನ್ 2024, 16:23 IST
Last Updated 1 ಜೂನ್ 2024, 16:23 IST
ಅಕ್ಷರ ಗಾತ್ರ

ಬೆಂಗಳೂರು: ‘ಇಡೀ ದೇಶದಲ್ಲೇ ಕರ್ನಾಟಕ ಬಿಜೆಪಿ ಅತ್ಯಂತ ಭ್ರಷ್ಟ ಪಕ್ಷ. ತಮ್ಮ ಭ್ರಷ್ಟಾಚಾರವನ್ನು ಬಯಲು ಮಾಡಲು ಅವರೇ ಕರೆಯುತ್ತಿದ್ದಾರೆ. ನಾವು ನಮ್ಮ ಶಕ್ತಿ ತೋರಿಸುತ್ತೇವೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ನಗರದ ಸಿವಿಲ್ ಕೋರ್ಟ್ ಮುಂಭಾಗದಲ್ಲಿ ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ನಮ್ಮ ಜಾಹೀರಾತುಗಳ ಬಗ್ಗೆ ಬಿಜೆಪಿಯವರು ಖಾಸಗಿ ದೂರು ನೀಡಿದ್ದಾರೆ. ನಾವು ಸುಮ್ಮನೆ ಜಾಹೀರಾತು ನೀಡಿಲ್ಲ. ಬಿಜೆಪಿ ನಾಯಕರ, ಸಚಿವರ ಹೇಳಿಕೆಗಳ ಆಧಾರದ ಮೇಲೆ ಹಾಗೂ ಮಾಧ್ಯಮಗಳಲ್ಲಿ ಬಂದ ವರದಿಯನ್ನು ಆಧರಿಸಿ ಹಿಂದಿನ ರಾಜ್ಯ ಬಿಜೆಪಿ ಸರ್ಕಾರದ ಹಗರಣಗಳ ಬಗ್ಗೆ ಪತ್ರಿಕಾ ಜಾಹೀರಾತು ನೀಡಿದ್ದೆವು. ಇದನ್ನೆಲ್ಲಾ ನಾವು ಸಾಬೀತು ಮಾಡುತ್ತೇವೆ’ ಎಂದರು.

‘ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರೇ ತಮ್ಮ ಸರ್ಕಾರದ ಮೇಲೆ ಹಗರಣದ ಆರೋಪ ಮಾಡಿದ್ದರು. ಹಣ ನೀಡದೆ ಯಾವುದೇ ಸಚಿವ ಸ್ಥಾನ ಸಿಗುವುದಿಲ್ಲ ಎಂದು ಹೇಳಿದ್ದರು. ಮುಖ್ಯಮಂತ್ರಿ ಸ್ಥಾನಕ್ಕೆ ₹ 2,500 ಸಾವಿರ ಕೋಟಿ, ಸಚಿವ ಹುದ್ದೆಗೆ ₹ 100 ಕೋಟಿ ಎಂದು ಹೇಳಿಕೆ ನೀಡಿದವರು ಬಿಜೆಪಿಯವರೇ ಅಲ್ಲವೇ’ ಎಂದು ಪ್ರಶ್ನಿಸಿದರು.

‘ಜಾಹೀರಾತು ಆಧರಿಸಿ ರಾಹುಲ್ ಗಾಂಧಿ, ಅಂದಿನ ವಿರೋಧ ಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ ಹಾಗೂ ನನ್ನ ಮೇಲೆ ಬಿಜೆಪಿಯವರು ಪ್ರಕರಣ ದಾಖಲಿಸಿದ್ದರು. ಈ ಪ್ರಕರಣವನ್ನು ಹೇಗೆ ಎದುರಿಸಬೇಕು ಎಂಬುದು ನಮಗೆ ತಿಳಿದಿದೆ. ನಾವು ಕಾನೂನಿಗೆ ಗೌರವ ನೀಡುತ್ತೇವೆ. ರಾಹುಲ್ ಗಾಂಧಿ ಅವರೂ ನ್ಯಾಯಾಲಯದ ಮುಂದೆ ಹಾಜರಾಗಲಿದ್ದು, ದಿನಾಂಕವನ್ನು ಮುಂದೆ ತಿಳಿಸುತ್ತೇನೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT