ವಿಜಯಪುರ: ಬಿಜೆಪಿಯವರೇ ವಿರೋಧ ಪಕ್ಷದ ನಾಯಕ ಆಗುತ್ತಾರೆ. ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿರುವುದು ಕೇವಲ ಲೋಕಸಭೆ ಚುನಾವಣೆಗೆ ಸೀಮಿತ, ವಿರೋಧ ಪಕ್ಷ ಸ್ಥಾನ ಜೆಡಿಎಸ್ಗೆ ಬಿಟ್ಟು ಕೊಡಲು ಬರುವುದಿಲ್ಲ. ಹಾಗಾಗಿ ಬಿಜೆಪಿಯವರೇ ಶೀಘ್ರದಲ್ಲೇ ವಿರೋಧ ಪಕ್ಷದ ನಾಯಕರಾಗುತ್ತಾರೆ. ಸಮರ್ಥ ವಿರೋಧ ಪಕ್ಷವಾಗಿ ಬಿಜೆಪಿ ಕೆಲಸ ಮಾಡಲಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ವಿಜಯೇಂದ್ರ ಆಯ್ಕೆಯಾಗಿರುವ ಬಗ್ಗೆ ಭಿನ್ನಾಭಿಪ್ರಾಯ ವಿಚಾರಕ್ಕೆ ನಗರದಲ್ಲಿ ಭಾನುವಾರ ಪ್ರತಿಕ್ರಿಯೆ ನೀಡಿದ ಅವರು, ಚುನಾವಣೆ ರಾಜಕಾರಣಲ್ಲಿದ್ದವರು ಹುದ್ದೆಗಳನ್ನು ಸಹಜವಾಗಿಯೇ ಅಪೇಕ್ಷೆ ಪಡುತ್ತಾರೆ. ಒಂದೆರೆಡು ದಿನ ಅಸಮಾಧಾನ ಇರುತ್ತದೆ, ಅದೆಲ್ಲ ಸರಿಯಾಗುತ್ತದೆ. ಅಸಮಾಧಾನ ಇದ್ದವರನ್ನು ವಿಜಯೇಂದ್ರ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕಾಗುತ್ತದೆ ಎಂದರು.
ಕಳೆದ ಬಾರಿ ಚುನಾವಣೆಯಲ್ಲಿ ನಾವು ಸರ್ಕಾರವನ್ನು ಕಳೆದುಕೊಂಡಿದ್ದೇವೆ. ಹಾಗಾಗಿ ಅಳದು, ತೂಗಿ ಹೈಕಮಾಂಡ್ ಈ ನಿರ್ಧಾರ ಮಾಡಿರುತ್ತದೆ. ಅದಕ್ಕೆ ನಾವೆಲ್ಲ ಬೆಂಬಲಿಸಬೇಕು ಎಂದು ಹೇಳಿದರು.
ಬಿಜೆಪಿ ಯುವಕರಿಗೆ ಪ್ರೋತ್ಸಾಹ ನೀಡುವ ಪಕ್ಷ. ವಿಜಯೇಂದ್ರ ನಾಯಕತ್ವದಲ್ಲಿ ರಾಜ್ಯದಲ್ಲಿ ಯುವಕರು ಸಂಘಟಿತರಾಗಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ 25ಕ್ಕೂ ಅಧಿಕ ಸ್ಥಾನದಲ್ಲಿ ಬಿಜೆಪಿ ಗೆಲ್ಲಿಸಲಿದ್ದಾರೆ. ಕೇಂದ್ರದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ತರಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನ. 15 ರಂದು ಪಕ್ಷದ ಬೆಂಗಳೂರು ಕಚೇರಿಯಲ್ಲಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ ಎಂದರು.
ಕಾಂಗ್ರೆಸ್ನವರು ಸುಳ್ಳು ಗ್ಯಾರಂಟಿ ಕೊಟ್ಟಿದ್ದಾರೆ. ನಿರುದ್ಯೋಗಿ ಯುವಕರಿಗೆ ಉದ್ಯೋಗ ಭತ್ಯೆ ಕೊಡುತ್ತೇವೆ ಎಂದವರು ಇನ್ನೂ ಕೊಡಲಿಲ್ಲ, ಅದೇ ಯುವಕರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಡಿಗೆ ತೆಗೆದುಕೊಂಡು ಓಡಿಸ್ತಾರೆ ಎಂದರು.
ನಾನು ಯಾವುದೇ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.