ಉಡುಪಿ: ಮಂಗನ ಕಾಯಿಲೆಗೆ ಚಿಕಿತ್ಸೆ ಚಿಕಿತ್ಸೆ ಪಡೆಯಲು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದ ರೋಗಿಯೊಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಅರಲಗೋಡು ಗ್ರಾಮದ ಲಕ್ಷ್ಮಿದೇವಿ (82) ಮೃತರು. ಜ.15ರಂದು ಚಿಕಿತ್ಸೆಗೆ ದಾಖಲಾಗಿದ್ದರು. ರೋಗ ಉಲ್ಬಣಗೊಂಡು ಶುಕ್ರವಾರ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಶಂಕಿತ ಮಂಗನ ಕಾಯಿಲೆ ರೋಗಕ್ಕೆ ಇದುವರೆಗೂ 100 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಇವೆರಲ್ಲರೂ ಶಿವಮೊಗ್ಗ ಜಿಲ್ಲೆಯವರು. 40 ರೋಗಿಗಳಲ್ಲಿ ಮಂಗನ ಕಾಯಿಲೆ ಇರುವುದು ದೃಢಪಟ್ಟರೆ, 59 ಮಂದಿಯಲ್ಲಿ ಸೋಂಕು ಪತ್ತೆಯಾಗಿಲ್ಲ. ಒಬ್ಬರ ಪರೀಕ್ಷಾ ವರದಿ ಕೈಸೇರಬೇಕಿದೆ ಎಂದು ವೈದ್ಯರು ತಿಳಿಸಿದ್ದಾರೆ.