ಬೆಂಗಳೂರು: ‘ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ)ಗೆ ಶೀಘ್ರದಲ್ಲೇ ಪದಾಧಿಕಾರಿಗಳ ನೇಮಕ ನಡೆಯಲಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು.
ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ‘10 ಜಿಲ್ಲೆಗಳಲ್ಲಿ ಅಧ್ಯಕ್ಷರ ಬದಲಾವಣೆ ಮಾಡಿದ್ದೇವೆ. ಹೊಸ ಬ್ಲಾಕ್ ಅಧ್ಯಕ್ಷರ ನೇಮಕ ಪ್ರಕ್ರಿಯೆ ನಡೆಯುತ್ತಿದೆ. ನಾನು ರಾಜ್ಯದಾದ್ಯಂತ ಪ್ರವಾಸ ಮಾಡುತ್ತೇನೆ’ ಎಂದರು.
‘ಎಐಸಿಸಿ ಅಧ್ಯಕ್ಷರಾಗಿ ಸೋನಿಯಾ ಗಾಂಧಿ ನೇಮಕಗೊಂಡ ಬಳಿಕ ಪಕ್ಷದಲ್ಲಿ ಚಟುವಟಿಕೆ ಮತ್ತೆ ಚುರುಕುಗೊಂಡಿದೆ’ ಎಂದೂ ಹೇಳಿದರು.
ಗೊಂದಲ: ‘ಸಚಿವ ಸಂಪುಟ ರಚನೆಗೆ ಹೆಚ್ಚಿನ ಸಮಯ ತೆಗೆದುಕೊಂಡಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಈಗ ಯಾರಿಗೆ ಯಾವ ಖಾತೆ ಕೊಡಬೇಕು ಎಂದು ಗೊಂದಲದಲ್ಲಿದ್ದಾರೆ’ ಎಂದು ಗೇಲಿ ಮಾಡಿದರು.