ಬೆಂಗಳೂರು: ‘ಲೋಕಸಭೆ ಚುನಾವಣೆಯಲ್ಲಿ ಮತದಾರರು ನೀಡಿದ ತೀರ್ಪನ್ನು ನಾವು ಗೌರವಿಸುತ್ತೇವೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಹಾಲಿ ಸಂಸದ ಡಿ.ಕೆ. ಸುರೇಶ್ ಅವರು ಉತ್ತಮ ಕೆಲಸ ಮಾಡಿದ್ದರು. ಆದರೂ ಜನ ಬದಲಾವಣೆ ಬಯಸಿ ಮತ ಹಾಕಿದ್ದಾರೆ’ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.
ಡಿ.ಕೆ. ಸುರೇಶ್ ಅವರ ಸೋಲಿನ ಬಗ್ಗೆ ಕೇಳಿದ ಪ್ರಶ್ನೆಗೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ‘ನಮ್ಮ ರಾಜ್ಯದ ಇತಿಹಾಸದಲ್ಲಿ ಯಾರ್ಯಾರೋ ಸೋತಿದ್ದಾರೆ. ಶಾಂತವೇರಿ ಗೋಪಾಲಗೌಡರು, ನಿಜಲಿಂಗಪ್ಪ ಸೇರಿ ಅನೇಕರು ಸೋತಿಲ್ಲವೇ? ಹಲವು ವಿಷಯಗಳ ಆಧಾರದಲ್ಲಿ ಜನ ಮತ ಹಾಕುತ್ತಾರೆ’ ಎಂದು ಅಭಿಪ್ರಾಯಪಟ್ಟರು.
‘ಒಂದು ಸ್ಥಾನ ಇದ್ದ ನಾವು ಈ ಬಾರಿ ಒಂಬತ್ತು ಸ್ಥಾನಗಳನ್ನು ಗೆದ್ದಿದ್ದೇವೆ. ಅದು ಸಮಾಧಾನದ ವಿಷಯ. ಆದರೆ, ಇನ್ನೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆ ಇತ್ತು’ ಎಂದರು.
‘ಗ್ಯಾರಂಟಿ ಯೋಜನೆಗಳಿಂದ ಜನರಿಗೆ ಅನುಕೂಲ ಆಗಿದೆ. ಅದರಿಂದ ರಾಜಕೀಯವಾಗಿ ಅನುಕೂಲ ಆಗಿದೆಯೊ, ಬಿಟ್ಟಿದೆಯೊ ಗೊತ್ತಿಲ್ಲ’ ಎಂದೂ ಹೇಳಿದರು.