ಬೆಂಗಳೂರು: ಸಾರಿಗೆ ನೌಕರರ ವೇತನ ಪರಿಷ್ಕರಣೆ ಕುರಿತು ಈ ವಾರವೇ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ವೇತನ ಪರಿಷ್ಕರಣೆ ಕುರಿತ ಸಭೆಯ ಬಳಿಕ ಅವರು ಸುದ್ದಿಗಾರರಿಗೆ ವಿವರ ನೀಡಿದರು.
ವೇತನ ಪರಿಷ್ಕರಣೆಯ ಸ್ವರೂಪದ ಬಗ್ಗೆ ಸಾರಿಗೆ ನಿಗಮಗಳು ಮತ್ತು ಸಂಬಂಧಪಟ್ಟ ಇಲಾಖೆಗಳ ಹಿರಿಯ ಅಧಿಕಾರಿಗಳು ಹಲವು ಸುತ್ತಿನ ಸಭೆಗಳನ್ನು ನಡೆಸಿ ಚರ್ಚಿಸಿದ್ದಾರೆ. ಈ ವಿಚಾರದಲ್ಲಿ ಆರ್ಥಿಕ ಹೊರೆಯ ಬಗ್ಗೆ ಕೂಲಂಕಶವಾಗಿ ಪರಿಶೀಲಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಒಟ್ಟು 9 ಬೇಡಿಕೆಗಳಲ್ಲಿ 8 ಬೇಡಿಕೆಗಳನ್ನು ಈಡೇರಿಸಲಾಗಿದೆ. ವೇತನ ಪರಿಷ್ಕರಣೆ ಬೇಡಿಕೆ ಈಡೇರಿಕೆ ಮಾತ್ರ ಬಾಕಿ ಉಳಿದಿದೆ. ಈಗ ಅದಕ್ಕೂ ಕಾಲ ಕೂಡಿ ಬಂದಿದೆ. ಆ ಪ್ರಕ್ರಿಯೆ ನಡೆಯುತ್ತಿದೆ. ಆದ್ದರಿಂದ ನೌಕರರು ಏ. 7 ರಂದು ನಡೆಸಲು ಉದ್ದೇಶಿಸಿರುವ ಮುಷ್ಕರ ಕೈಬಿಡಬೇಕು ಎಂದು ಮನವಿ ಮಾಡಿದ್ದಾರೆ.
ಕೋವಿಡ್ನಿಂದ ವಿದ್ಯಾರ್ಥಿಗಳು, ಬಡ ಮತ್ತು ಮಧ್ಯಮ ವರ್ಗದ ಜನ ತೊಂದರೆಗೆ ಒಳಗಾಗಿದ್ದಾರೆ. ಪದೇ ಪದೇ ಮುಷ್ಕರ ಮಾಡುವುದ ರಿಂದ ತೊಂದರೆಗೆ ಸಿಲುಕುತ್ತಾರೆ. ಸಂಕಷ್ಟದ ಪರಿಸ್ಥಿತಿಯಲ್ಲೂ ನೌಕರರ ಹಿತರಕ್ಷಣೆಗೆ ಸ್ಪಂದಿಸಿ ವೇತನ, ಸೌಲಭ್ಯ ಗಳನ್ನು ನೀಡಿದೆ ಎಂದು ಸವದಿ ಹೇಳಿದ್ದಾರೆ.