ಬೆಂಗಳೂರು: ಬಿಜೆಪಿಯ ಆಗ್ನೇಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಾ. ವೈ.ಎ.ನಾರಾಯಣಸ್ವಾಮಿ ಮತ್ತು ಬೆಂಗಳೂರು ಪದವೀಧರ ಕ್ಷೇತ್ರದ ಅಭ್ಯರ್ಥಿ ಅ. ದೇವೇಗೌಡ ಅವರು ಸೋಮವಾರ ಶಾಂತಿನಗರದ ಪ್ರಾದೇಶಿಕ ಆಯುಕ್ತರ ಕಚೇರಿ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಲೋಕಸಭಾ ಚುನಾವಣೆಯನ್ನು ಬಿಜೆಪಿ ಮತ್ತು ಜೆಡಿಎಸ್ ಜತೆಯಾಗಿ ಎದುರಿಸಿದ್ದೇವೆ. ವಿಧಾನಪರಿಷತ್ ಚುನಾವಣೆಯನ್ನೂ ಒಟ್ಟಾಗಿಯೇ ಎದುರಿಸುತ್ತೇವೆ ಎಂದರು.
ವಿರೋಧ ಪಕ್ಷದ ನಾಯಕ ಆರ್.ಅಶೋಕ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಯಾರೇ ಪ್ರಚಾರ ಮಾಡಿದರೂ ಕಾಂಗ್ರೆಸ್ಗೆ ಉಳಿಗಾಲವಿಲ್ಲ. ನಾರಾಯಣಸ್ವಾಮಿ ಮತ್ತು ಅ.ದೇವೇಗೌಡ ಅವರು ಮಾಡಿರುವ ಕೆಲಸ, ಜನರೊಂದಿಗಿನ ಸಂಪರ್ಕ ಮತ್ತು ನಿರಂತರ ಸೇವೆಯನ್ನು ಪರಿಗಣಿಸಿ ಮತ್ತೊಮ್ಮೆ ಜನರು ಆಶೀರ್ವದಿಸುತ್ತಾರೆ ಎಂದರು.
ಈ ಸಂದರ್ಭದಲ್ಲಿ ಶಾಸಕರಾದ ಬಸವರಾಜ ಬೊಮ್ಮಾಯಿ, ಡಾ.ಸಿ.ಎನ್.ಅಶ್ವತ್ಥನಾರಾಯಣ, ಸುರೇಶ್ ಗೌಡ, ಮಾಜಿ ಸಚಿವ ಗೋವಿಂದ ಕಾರಜೋಳ, ರಾಜ್ಯಸಭಾ ಸದಸ್ಯ ಲಹರ್ ಸಿಂಗ್ ಸಿರೋಯ, ಸಂಸದ ಪಿ.ಸಿ.ಮೋಹನ್, ಮಾಜಿ ಶಾಸಕರಾದ ಎಂ.ಡಿ. ಲಕ್ಷ್ಮೀನಾರಾಯಣ, ಎಂ.ಕೃಷ್ಣಾರೆಡ್ಡಿ ಇದ್ದರು.