ಧಾರವಾಡ: ‘ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಬಿಜೆಪಿ ಪ್ರಣಾಳಿಕೆಯಲ್ಲಿ ಘೋಷಿಸಬೇಕು. ಯಾತಕ್ಕಾಗಿ ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಸ್ಪಷ್ಟೀಕರಣ ನೀಡಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್.ಲಾಡ್ ಒತ್ತಾಯಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ‘ಸಂವಿಧಾನ ಬದಲಾಯಿಸುವುದಾಗಿ ಒಬ್ಬರಿಂದ ಮತ್ತೊಬ್ಬರು ಹೇಳಿಸುವುದು, ಹಿಂದಿನಿಂದ ಅವರನ್ನು ಬೆಂಬಲಿಸುವುದು, ನಂತರ ಹೇಳಿಕೆಗೂ ತಮಗೂ ಸಂಬಂಧ ಇಲ್ಲ ಎಂದು ಹೇಳುವುದು ಯಾಕೆ? ಸಂವಿಧಾನ ಬದಲಾಯಿಸುತ್ತೇವೆ ಎಂದವರನ್ನು ಪಕ್ಷದಿಂದ ಉಚ್ಛಾಟನೆ ಮಾಡುವ ಕ್ರಮ ಕೈಗೊಳ್ಳಬೇಕು’ ಎಂದು ಅವರು ಆಗ್ರಹಿಸಿದರು.
‘ನಾವು ಇರುವವರೆಗೆ ಸಂವಿಧಾನ ಬದಲು ಮಾಡಲು ಬಿಡಲ್ಲ. ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಹೇಳುವ ಬಿಜೆಪಿಯವರಿಗೆ ಮುಂಬರುವ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು’ ಎಂದರು.