ಬೆಂಗಳೂರು: ‘ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಮಹಾನಗರ ಪಾಲಿಕೆಗಳ ಮೇಯರ್, ಉಪಮೇಯರ್ಗಳ ಮೀಸಲು ಪಟ್ಟಿಯನ್ನು ಗೆಜೆಟ್ ಪ್ರಕಟಣೆಗೆ ಕಳುಹಿಸಲಾಗಿದೆ’ ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ತಿಳಿಸಿದೆ.
ಮೀಸಲು ಪಟ್ಟಿ ಪ್ರಕಟಿಸದ ಸರ್ಕಾರದ ಕ್ರಮ ಪ್ರಶ್ನಿಸಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಲೇವಾರಿ ಮಾಡಿದೆ.
ವಿಚಾರಣೆ ವೇಳೆ ಅಡ್ವೊಕೇಟ್ ಜನರಲ್ ಉದಯ ಹೊಳ್ಳ ಅವರು ಪಟ್ಟಿಯನ್ನು ಗೆಜೆಟ್ ಪ್ರಕಟಣೆಗೆ ಕಳುಹಿಸಿಕೊಡಲಾಗಿದೆ ಎಂಬ ವಿಷಯವನ್ನು ನ್ಯಾಯಪೀಠಕ್ಕೆ ತಿಳಿಸಿದರು.
ಇದಕ್ಕೂ ಮುನ್ನ ವಿಚಾರಣೆ ವೇಳೆ ನ್ಯಾಯಪೀಠ ‘ಪಟ್ಟಿಯನ್ನು ಇನ್ನೂ ಸಿದ್ಧಪಡಿಸಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿತ್ತು.‘ಇಂದೇ ಮಧ್ಯಾಹ್ನ 1.30ರ ಒಳಗೆ ಪಟ್ಟಿ ನೀಡಿ’ಎಂದೂ ರಾಜ್ಯ ಸರ್ಕಾರಕ್ಕೆ ತಾಕೀತು ಮಾಡಿತ್ತು.
ಇದಕ್ಕೆ ಉತ್ತರಿಸಿದ್ದ ಹೊಳ್ಳ ಅವರು ಮಧ್ಯಾಹ್ನ 3 ಗಂಟೆಗೆ ಪಟ್ಟಿಯನ್ನು ನೀಡುವುದಾಗಿ ತಿಳಿಸಿದ್ದರು.