ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭೆ ಚುನಾವಣೆ: ಪ್ರಧಾನಿ ಮೋದಿ ಭೇಟಿಯಾದ ಸಂಸದೆ ಸುಮಲತಾ, ಹೇಳಿದ್ದೇನು?

Published 9 ಫೆಬ್ರುವರಿ 2024, 11:55 IST
Last Updated 9 ಫೆಬ್ರುವರಿ 2024, 11:55 IST
ಅಕ್ಷರ ಗಾತ್ರ

ನವದೆಹಲಿ: ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗಲೇ ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದೆ ಸುಮಲತಾ ಅವರು ಇಂದು (ಶುಕ್ರವಾರ) ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಈ ಕುರಿತು ‘ಎಕ್ಸ್‌’ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ‘ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು, ತಮ್ಮ ನಿರಂತರ ಕಾರ್ಯದೊತ್ತಡದ ನಡುವೆಯೂ ನನಗೆ ಸಮಯ ನೀಡಿದ್ದಕ್ಕಾಗಿ, ಭಾರತ ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನನ್ನ ಧನ್ಯವಾದಗಳು’ ಎಂದು ತಿಳಿಸಿದ್ದಾರೆ.

‘ನರೇಂದ್ರ ಮೋದಿ ಅವರು ವಿಶ್ವದ ಮಹಾನ್ ನಾಯಕರಾಗಿದ್ದಾರೆ. ಭಾರತದಂತಹ ಬೃಹತ್ ದೇಶವನ್ನು ಕಳೆದ ಹತ್ತು ವರ್ಷಗಳಿಂದ ಯಶಸ್ವಿಯಾಗಿ ಮುನ್ನಡೆಸಿದ್ದಾರೆ. ಭಾರತವನ್ನು ಮುಂದುವರೆದ ರಾಷ್ಟ್ರಗಳ ಸಾಲಿಗೆ ಸೇರಿಸಲು ಅವರು ಪಡುತ್ತಿರುವ ಶ್ರಮ ನಿಜಕ್ಕೂ ಶ್ಲಾಘನೀಯ. ದೇಶದ ಅಭಿವೃದ್ಧಿ ಹಾಗೂ ದೇಶದ ಭವಿಷ್ಯದ ಬಗ್ಗೆ ಅವರಿಗಿರುವ ದೂರದೃಷ್ಟಿಯನ್ನು ಪದಗಳಲ್ಲಿ ವರ್ಣಿಸಲು ಅಸಾಧ್ಯ. ಭಾರತ ದೇಶವು ಇಂದು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಎಲ್ಲಾ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಲು ಮೋದಿಯವರ ಸಮರ್ಥ ನಾಯಕತ್ವವೇ ಕಾರಣ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ. ಈ ಕಾರಣದಿಂದಲೇ ನಮ್ಮ ಹೆಮ್ಮೆಯ ಪ್ರಧಾನಿಯನ್ನು ಇಡೀ ವಿಶ್ವವೇ ಕೊಂಡಾಡುತ್ತಿದೆ’ ಎಂದು ಬರೆದುಕೊಂಡಿದ್ದಾರೆ.

‘ತಮ್ಮನ್ನು ಭೇಟಿ ಮಾಡಿದ ಸಂಧರ್ಭದಲ್ಲಿ ತಾವು ನೀಡಿದ ಪ್ರೋತ್ಸಾಹದಾಯಕ ಮಾತುಗಳು, ನಮ್ರತೆ, ಮತ್ತು ಗೌರವಕ್ಕೆ ನಾನು ಕೃತಜ್ಞಳಾಗಿದ್ದೇನೆ. ತಮ್ಮನ್ನು ಭೇಟಿ ಮಾಡಿದ ಆ ಕ್ಷಣಗಳು ನನ್ನನ್ನು ಸಾರ್ವಜನಿಕರ ಸೇವೆಯಲ್ಲಿ ಇನ್ನಷ್ಟು ಉತ್ಸಾಹದಿಂದ ತೊಡಗಿಸಿಕೊಳ್ಳಲು ಸ್ಫೂರ್ತಿಯಾಗಿದ್ದು, ನಿಮ್ಮ ಸಹಕಾರ ಮತ್ತು ಮಾರ್ಗದರ್ಶನಕ್ಕೆ ನಾನು ಹೃದಯಪೂರ್ವಕವಾಗಿ ಆಭಾರಿಯಾಗಿದ್ದೇನೆ’ ಎಂದು ತಿಳಿಸಿದ್ದಾರೆ.

‘ವಿಶ್ವದ ಅತ್ಯಂತ ಜನಪ್ರಿಯ ನಾಯಕರಾಗಿರುವ ನಿಮಗೆ (ಮೋದಿ), ನಮ್ಮ ದೇಶದ ಭವಿಷ್ಯದ ಬಗ್ಗೆ ಇರುವ ಪರಿಕಲ್ಪನೆ ಹಾಗೂ ದೂರದೃಷ್ಟಿ ನಮ್ಮ ದೇಶದ ಎಲ್ಲಾ ಭವಿಷ್ಯದ ಮಹತ್ವಾಕಾಂಕ್ಷಿ ನಾಯಕರಿಗೆ ಮಾದರಿಯಾಗಿದೆ. ಪ್ರಧಾನಿಯಾಗಿ ಅಚಲವಾದ ಧೃಢತೆಯಿಂದ ಅದ್ಭುತವಾದ ನಾಯಕತ್ವದ ಗುಣಗಳೊಂದಿಗೆ ತಾವು ಸಲ್ಲಿಸಿದ ಅತ್ಯುತ್ತಮ ಸೇವೆ ಮತ್ತು ದೇಶಕ್ಕೆ ನೀಡಿದ ಆಡಳಿತವು ಭಾರತ ದೇಶದ ಇತಿಹಾಸದಲ್ಲಿ ಶಾಶ್ವತವಾಗಿ ನೆನಪಿನಲ್ಲಿ ಉಳಿಯುತ್ತದೆ’ ಎಂದಿದ್ದಾರೆ.

17ನೇ ಲೋಕಸಭೆಯ ಕೊನೆಯ ಅಧಿವೇಶನವು ಮುಕ್ತಾಯದ ಹಂತದಲ್ಲಿದ್ದು, ನಿಮ್ಮ ಅಧಿಕಾರಾವಧಿಯಲ್ಲಿ ಸಂಸತ್ ಸದಸ್ಯೆಯಾಗಿ ಸೇವೆ ಸಲ್ಲಿಸಿರುವುದು ನಿಜಕ್ಕೂ ನನ್ನ ಸೌಭಾಗ್ಯವಾಗಿದೆ ಎಂದು ಕೊಂಡಾಡಿದ್ದಾರೆ.

ಈ ಬಾರಿಯ ತಮ್ಮ ಭೇಟಿ ಸಂಧರ್ಭದಲ್ಲಿ ‘ಮುಂದಿನ ದಿನಗಳಲ್ಲಿ ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರೆಸೋಣ’ ಎಂಬ ನಿಮ್ಮ ಮಾತುಗಳು ನನಗೆ ಸ್ಫೂರ್ತಿದಾಯಕವಾಗಿದ್ದು, ವಿಶ್ವದ ಹೆಮ್ಮೆಯ ನಾಯಕರಾದ ತಮ್ಮ ಅಮೂಲ್ಯ ಮಾರ್ಗದರ್ಶನದಲ್ಲಿ ಜನರ ಸೇವೆ ಮಾಡಲು ಮತ್ತು ಭಾರತವನ್ನು ಮುಂದುವರೆದ ದೇಶಗಳ ಸಾಲಿನಲ್ಲಿ ನೋಡಲು ನಾನು ಉತ್ಸುಕಳಾಗಿದ್ದೇನೆ ಎಂದು ಹೇಳಿದ್ದಾರೆ.

ಮಂಡ್ಯ ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಆಸಕ್ತಿ ವಹಿಸಿ, ಉತ್ತಮ ಯೋಜನೆಗಳನ್ನು ಕಾರ್ಯಗತಗೊಳಿಸಲು ಅನುದಾನವನ್ನು ಒದಗಿಸಿದ್ದಕ್ಕಾಗಿ ನನ್ನ ಮಂಡ್ಯ ಲೋಕಸಭಾ ಕ್ಷೇತ್ರದ ಸ್ವಾಭಿಮಾನಿ ಮತದಾರರು, ಕಾರ್ಯಕರ್ತರು, ನನ್ನ ಬೆಂಬಲಿಗರು ಮತ್ತು ಸಾರ್ವಜನಿಕರ ಪರವಾಗಿ ಮೋದಿಯವರಿಗೆ ಧನ್ಯವಾದ ಸಲ್ಲಿಸುತ್ತೇನೆ. ಮುಂದಿನ ಅವಧಿಯಲ್ಲಿಯೂ ಸಹ, ನಮ್ಮ ರಾಜ್ಯ ಮತ್ತು ರಾಷ್ಟ್ರದ ಸೇವೆಯಲ್ಲಿ ನಿಮ್ಮೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಬಣ್ಣಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT