ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪ ಎದುರಿಸುತ್ತಿರುವ ಕೆ.ಆರ್. ಪುರದ ಹಿಂದಿನ ತಹಶೀಲ್ದಾರ್ ಅಜಿತ್ ಕುಮಾರ್ ರೈ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಏಳು ದಿನಗಳ ಕಾಲ ಲೋಕಾಯುಕ್ತ ಪೊಲೀಸರ ವಶಕ್ಕೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಅಜಿತ್ ರೈ ಅವರ ಮನೆ ಹಾಗೂ ಇತರ ಹತ್ತು ಸ್ಥಳಗಳ ಮೇಲೆ ಬುಧವಾರ ಬೆಳಿಗ್ಗೆ ದಾಳಿಮಾಡಿದ್ದ ಲೋಕಾಯುಕ್ತ ಪೊಲೀಸರು ಶೋಧ ನಡೆಸಿದ್ದರು. ಗುರುವಾರ ತಡ ರಾತ್ರಿಯವರೆಗೂ ಶೋಧ ನಡೆಸಲಾಗಿದೆ. ₹ 500 ಕೋಟಿಗೂ ಹೆಚ್ಚು ಮೌಲ್ಯದ ಬೇನಾಮಿ ಆಸ್ತಿಗಳನ್ನು ಆರೋಪಿಯು ಹೊಂದಿರುವುದು ತನಿಖೆಯಲ್ಲಿ ಪತ್ತೆಯಾಗಿದೆ. ಈ ಕಾರಣದಿಂದ ಅಜಿತ್ ಅವರನ್ನು ತನಿಖಾ ತಂಡವು ಗುರುವಾರ ಬಂಧಿಸಿತ್ತು.
ಸಿಟಿ ಸಿವಿಲ್ ನ್ಯಾಯಾಲಯ ಶುಕ್ರವಾರ ಮಧ್ಯಾಹ್ನ ಆರೋಪಿಯನ್ನು ಹಾಜರುಪಡಿಸಲಾಯಿತು. ಹೆಚ್ಚಿನ ವಿಚಾರಣೆಗಾಗಿ ಏಳು ದಿನಗಳ ಕಾಲ ತಮ್ಮ ವಶಕ್ಕೆ ನೀಡುವಂತೆ ಲೋಕಾಯುಕ್ತ ಪೊಲೀಸರು ಮನವಿ ಸಲ್ಲಿಸಿದರು. ಅದನ್ನು ಮಾನ್ಯ ಮಾಡಿ ನ್ಯಾಯಾಧೀಶರು ಆದೇಶ ಹೊರಡಿಸಿದರು