ಬೆಂಗಳೂರು: 'ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿ ಪರೋಕ್ಷ ವಾಗ್ದಾಳಿನಡೆಸಿರುವ ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರ ನಡೆ ಬಗ್ಗೆ ಪಕ್ಷವು ಗಮನಿಸುತ್ತಿದ್ದು, ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದೆ' ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹೇಳಿದರು.
ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, 'ಹರಿಪ್ರಸಾದ್ ಪಕ್ಷದ ಹಿರಿಯ ನಾಯಕರು. ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿ, ರಾಜ್ಯಸಭಾ ಸದಸ್ಯ ಆಗಿದ್ದವರು. ವಿಧಾನ ಪರಿಷತ್ತಿನಲ್ಲಿ ಪಕ್ಷದ ನಾಯಕರಾಗಿ ಕೆಲಸ ಮಾಡಿದವರು. ಅವರಿಂದ ಇಂತಹ ಮಾತು ಬರಬಾರದಿತ್ತು. ಅವರ ಮಾತುಗಳನ್ನು ಕೇಳಿಸಿಕೊಂಡು ಪಕ್ಷದ ರಾಷ್ಟ್ರೀಯ ನಾಯಕರು ಸುಮ್ಮನೆ ಕೂರುವುದಿಲ್ಲ' ಎಂದರು.
'ಹರಿಪ್ರಸಾದ್ ಅವರಿಗೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸುರ್ಜೇವಾಲಾ, ವೇಣುಗೋಪಾಲ್ ಎಲ್ಲರೂ ಆತ್ಮೀಯರು. ಹೀಗಿರುವಾಗ ಅವರು ಎಲ್ಲ ವಿಚಾರಗಳನ್ನೂ ಪಕ್ಷದ ಒಳಗೇ ಮಾತನಾಡಬೇಕಿತ್ತು. ಆದರೆ, ಅವರು ಬೀದಿಗೆ ಹೋಗಿದ್ದಾರೆ. ಇದು ಸರಿಯಲ್ಲ. ಇದರ ಪರಿಣಾಮಗಳನ್ನು ಅವರು ಎದುರಿಸಬೇಕಾಗುತ್ತದೆ' ಎಂದು ಅವರು ಪ್ರತಿಪಾದಿಸಿದರು.
'ಕಾಂಗ್ರೆಸ್ಸಿನಲ್ಲಿ ಯಾವ ಅಂತಃಕಲಹವೂ ಇಲ್ಲ' ಎಂದು ಅವರು ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.