ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹದಾಯಿ: ಅನುಮೋದನೆಗೆ ವನ್ಯಜೀವಿ ಮಂಡಳಿ ನಕಾರ

Published 8 ಫೆಬ್ರುವರಿ 2024, 16:42 IST
Last Updated 8 ಫೆಬ್ರುವರಿ 2024, 16:42 IST
ಅಕ್ಷರ ಗಾತ್ರ

ನವದೆಹಲಿ: ಮಹದಾಯಿಯ ಕಳಸಾ ನಾಲಾ ತಿರುವು ಯೋಜನೆಗೆ ವನ್ಯಜೀವಿ ಅನುಮೋದನೆ ನೀಡಲು ರಾಷ್ಟ್ರೀಯ ವನ್ಯಜೀವಿ ಮಂಡಳಿ ನಿರಾಕರಿಸಿದೆ. 

ಕೇಂದ್ರ ಅರಣ್ಯ, ಪರಿಸರ ಹಾಗೂ ತಾಪಮಾನ ಬದಲಾವಣೆ ಸಚಿವ ಭೂಪೇಂದರ್ ಯಾದವ್‌ ಅಧ್ಯಕ್ಷತೆಯಲ್ಲಿ ಜನವರಿ 30ರಂದು ನಡೆದ ಮಂಡಳಿಯ ಸ್ಥಾಯಿ ಸಮಿತಿಯ 77ನೇ ಸಭೆಯಲ್ಲಿ ಯೋಜನೆಯ ಸಾಧಕ ಬಾಧಕಗಳ ಕುರಿತು ಸಮಗ್ರ ಪರಾಮರ್ಶೆ ನಡೆಸಲಾಯಿತು.

ಈ ವಿಷಯವು ನ್ಯಾಯಿಕ ಪ್ರಕ್ರಿಯೆಯಲ್ಲಿನ ಮಧ್ಯಪ್ರವೇಶ (ಸಬ್‌ ಜ್ಯುಡಿಸ್) ಆಗುತ್ತದೆ ಎಂದು ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (ಎನ್‌ಟಿಸಿಎ) ತಿಳಿಸಿದೆ. ಹೀಗಾಗಿ, ಪ್ರಾಧಿಕಾರವು ಯೋಜನೆ ಕುರಿತು ಯಾವುದೇ ಅಭಿಪ್ರಾಯ ನೀಡಿಲ್ಲ. 1972ರ ವನ್ಯಜೀವಿ ಸಂರಕ್ಷಣಾ ಕಾಯ್ದೆಯ ಸೆಕ್ಷನ್‌ 38ರ ಪ್ರಕಾರ, ‍ಪ್ರಾಧಿಕಾರದಿಂದ ಅಭಿಪ್ರಾಯ ಪಡೆಯಲು ಸ್ಥಾಯಿ ಸಮಿತಿ ನಿರ್ಧರಿಸಿತು. ಕಾರ್ಯಸೂಚಿಯನ್ನು ಮುಂದಿನ ಸಭೆಗೆ ಮುಂದೂಡಲಾಯಿತು. 

ಹುಬ್ಬಳ್ಳಿ-ಧಾರವಾಡ, ಸುತ್ತಮುತ್ತಲಿನ ಪಟ್ಟಣಗಳು ಹಾಗೂ ಗ್ರಾಮಗಳಿಗೆ ಕುಡಿಯುವ ನೀರು ಒದಗಿಸುವ ಗುರಿ ಹೊಂದಿರುವ ಈ ಯೋಜನೆಗೆ ಮಹದಾಯಿ ನದಿ ನೀರು ವಿವಾದ ನ್ಯಾಯಮಂಡಳಿಯು 2018ರ ಆಗಸ್ಟ್‌ 14ರಂದು 3.90 ಟಿಎಂಸಿ ಅಡಿ ನೀರಿನ ಹಂಚಿಕೆ ಮಾಡಿತ್ತು. ಈ ಯೋಜನೆಯ ಪರಿಷ್ಕೃತ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಜಲ ಆಯೋಗ 2022ರ ಡಿಸೆಂಬರ್‌ 29ರಂದು ಅನುಮೋದನೆ ನೀಡಿತ್ತು. ಇದರಲ್ಲಿ ಕಳಸಾ ನಾಲಾ ತಿರುವು ಯೋಜನೆಗೆ 1.78 ಟಿಎಂಸಿ ಅಡಿ ಮೀಸಲಿಡಲಾಗಿದೆ. ಈ ಯೋಜನೆಗೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಏಳು ಗ್ರಾಮಗಳ ಅರಣ್ಯ ಬಳಕೆಗೆ (ಜಾಕ್‌ವೆಲ್‌ ನಿರ್ಮಾಣ, ಪಂಪ್‌ ಹೌಸ್‌, ಎಲೆಕ್ಟ್ರಿಕಲ್‌ ಸಬ್‌ ಸ್ಟೇಷನ್‌, ಪೈಪ್‌ಲೈನ್‌) ಒಪ್ಪಿಗೆ ನೀಡುವಂತೆ ರಾಜ್ಯ ಸರ್ಕಾರವು ಮಂಡಳಿಗೆ ಪ್ರಸ್ತಾವ ಸಲ್ಲಿಸಿತ್ತು. 

‘ಯೋಜನೆಯ ಅನುಷ್ಠಾನಕ್ಕೆ 26.92 ಹೆಕ್ಟೇರ್ ಅರಣ್ಯ ಬಳಸಿಕೊಳ್ಳಲಾಗುತ್ತಿದೆ. ಯೋಜನೆಗಾಗಿ ಕಾಳಿ ಹುಲಿ ಕಾರಿಡಾರ್‌ ಹಾಗೂ ಸಹ್ಯಾದ್ರಿ ಹುಲಿ ಸಂರಕ್ಷಿತ ಪ್ರದೇಶದ 7.96 ಹೆಕ್ಟೇರ್‌ ಅರಣ್ಯ ಹಾಗೂ 2.71 ಹೆಕ್ಟೇರ್ ಅರಣ್ಯೇತರ ಪ್ರದೇಶ ಬಳಸಿಕೊಳ್ಳಲು ಉದ್ದೇಶಿಸಲಾಗಿದೆ’ ಎಂದೂ ರಾಜ್ಯ ಸರ್ಕಾರವು ಪ್ರಸ್ತಾವದಲ್ಲಿ ತಿಳಿಸಿತ್ತು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT