ಬೆಂಗಳೂರು: ಖಾಸಗಿ, ಡೀಮ್ಡ್ ವಿಶ್ವವಿದ್ಯಾಲಯಗಳು ಹೊಸ ಕಾಲೇಜು, ಕೋರ್ಸ್ಗಳನ್ನು ಪ್ರಾರಂಭಿಸಲು ರಾಜ್ಯ ಸರ್ಕಾರದ ಅನುಮತಿ ಪಡೆಯುವ ನಿಯಮಗಳನ್ನು ರೂಪಿಸಬೇಕು ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಗೆ (ಎಐಸಿಟಿಇ) ಪತ್ರ ಬರೆದಿದ್ದಾರೆ.
ರಾಜ್ಯದಲ್ಲಿ ಎಂಜಿನಿಯರಿಂಗ್ ಕಾಲೇಜುಗಳು ನಾಯಿಕೊಡೆಗಳಂತೆ ತಲೆ ಎತ್ತುತ್ತಿವೆ. ರಾಜ್ಯದಲ್ಲಿನ 211 ಎಂಜಿನಿಯರಿಂಗ್ ಕಾಲೇಜುಗಳಲ್ಲಿ 185 ಕಾಲೇಜುಗಳು ಖಾಸಗಿ ಒಡೆತನದಲ್ಲಿವೆ. ಖಾಸಗಿ ವಿಶ್ವವಿದ್ಯಾಲಯಗಳು, ಡೀಮ್ಡ್ ವಿಶ್ವವಿದ್ಯಾಲಯಗಳು ಗಣನೀಯವಾಗಿ ಸೀಟು ಹೆಚ್ಚಳ ಮಾಡಿವೆ. ಇದರಿಂದ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ ಎಂದು ಸುಧಾಕರ್ ಹೇಳಿದ್ದಾರೆ.
ನಗರ ಪ್ರದೇಶಗಳ ವ್ಯಾಪ್ತಿಯ ಎಂಜಿನಿಯರಿಂಗ್ ಕಾಲೇಜುಗಳ ಹಲವು ಸಮಸ್ಯೆಗಳನ್ನು ಎದುರಿಸುತ್ತಿವೆ. ಬಹುತೇಕ ಅಧ್ಯಾಪಕರು ಕಾಲೇಜು ತೊರೆಯುತ್ತಿದ್ದಾರೆ. ಗ್ರಾಮೀಣ ವ್ಯಾಪ್ತಿಯ ಕಾಲೇಜುಗಳು ಬಾಗಿಲು ಮುಚ್ಚುತ್ತಿವೆ. ಹಾಗಾಗಿ, ಕನಿಷ್ಠ ಎರಡು-ಮೂರು ವರ್ಷ ಹೊಸ ಕಾಲೇಜುಗಳ ಆರಂಭಕ್ಕೆ ಅನುಮತಿ ನೀಡಬಾರದು ಎಂದು ಮನವಿ ಮಾಡಿದ್ದಾರೆ.
ಸುಧಾಕರ್ ಪತ್ರಕ್ಕೆ ಉತ್ತರ ನೀಡಿರುವ ಎಐಸಿಟಿಇ, ಖಾಸಗಿ ವಿಶ್ವವಿದ್ಯಾಲಯಗಳು ತನ್ನ ವ್ಯಾಪ್ತಿಗೆ ಬರುವುದಿಲ್ಲ. ಅವುಗಳ ಮೇಲೆ ನಿಯಂತ್ರಣಗಳನ್ನು ಚಲಾಯಿಸಲು ಸಾಧ್ಯವಿಲ್ಲ ಎಂದು ಹೇಳಿದೆ.