ಬೆಂಗಳೂರು: ತುಳುನಾಡಿನಲ್ಲಿ ಶ್ರದ್ಧಾಭಕ್ತಿಯಿಂದ ಆರಾಧಿಸುವ ಗುಳಿಗ ದೈವವನ್ನು ಆಧರಿಸಿ ರಚಿಸಿರುವ ನಾಟಕ ‘ಶಿವದೂತೆ ಗುಳಿಗೆ’ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂಬ ವಿವಾದಕ್ಕೆ ಗುರಿಯಾಗಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ಈ ಬಗ್ಗೆ ಗುರುವಾರ ಸ್ಪಷ್ಟನೆ ನೀಡಿದ್ದಾರೆ.
ತುಳುನಾಡಿನಲ್ಲಿ ಶ್ರದ್ಧಾಭಕ್ತಿಯಿಂದ ಆರಾಧಿಸುವ ಗುಳಿಗ ದೈವವನ್ನು ಆಧರಿಸಿ, ರಚಿಸಿರುವ ಪೌರಾಣಿಕ ನಾಟಕದ ಬಗ್ಗೆ ನನಗೆ ಅಪಾರ ಭಕ್ತಿ, ಮೆಚ್ಚುಗೆ ಇದೆ. ದೈವಗಳ ಬಗ್ಗೆ ಅಪಾರ ಭಕ್ತಿ, ಗೌರವ ಹೊಂದಿದ್ದೇನೆ.@BSBommai @BJP4Karnataka @INCKarnataka
— Araga Jnanendra (@JnanendraAraga) March 16, 2023
‘ನಾಟಕದ ಬಗ್ಗೆ ನನಗೆ ಅಪಾರ ಭಕ್ತಿ, ಮೆಚ್ಚುಗೆ ಇದೆ. ದೈವಗಳ ಬಗ್ಗೆ ಅಪಾರ ಭಕ್ತಿ, ಗೌರವ ಹೊಂದಿದ್ದೇನೆ’ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಮಾಜಿ ಸಚಿವ ಕಿಮ್ಮನೆ ರತ್ನಾಕರ ಅವರು ‘ಶಿವದೂತೆ ಗುಳಿಗೆ’ ಎಂಬ ನಾಟಕವನ್ನು ಮಾ. 14ರಂದು ತೀರ್ಥಹಳ್ಳಿಯಲ್ಲಿ ಆಯೋಜಿಸಿದ್ದರು. ಕಾಂಗ್ರೆಸ್ ಅನ್ನು ಟೀಕಿಸುವ ಭರದಲ್ಲಿ ಜ್ಞಾನೇಂದ್ರ ಅವರು ನಾಟಕದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
ಬಾಳೇಬೈಲಿನಲ್ಲಿ ಆಯೋಜಿಸಿದ್ದ ವಿಜಯ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ್ದ ಜ್ಞಾನೇಂದ್ರ, ‘ಗುಳಿಗೆ, ಗುಳಿಗೆ ಅಂತ ವಾಲ್ಪೋಸ್ಟರ್ಗಳನ್ನು ಹಾಕಿದ್ದಾರೆ. ನಿನ್ನೆ ರಾತ್ರಿ ಅದೆಂತದೋ ನಾಟಕ. ಬಹಳಾ ಅಪಾಯ. ಅವರು (ಕಾಂಗ್ರೆಸ್) ಅದ್ಯಾವ ಗುಳಿಗೆ ಕೊಡ್ತಾರೆ ಅಂತ. ಜಾಪಾಳ್ ಮಾತ್ರೆನಾ...? ಹೇಳಕ್ಕಾಗಲ್ಲ’ ಎಂದು ಹೇಳಿದ್ದರು.
ಆರಗ ಜ್ಞಾನೇಂದ್ರ ಅವರ ಈ ಮಾತಿನ ಬಗ್ಗೆ ತೀವ್ರ ವಿರೋಧ ವ್ಯಕ್ತವಾಗಿತ್ತು. ತುಳುನಾಡಿನ ಆರಾಧ್ಯ ದೈವ ಗುಳಿಗನನ್ನು ಅಪಮಾನ ಮಾಡಲಾಗಿದೆ ಎಂಬ ದೂರು ಕೇಳಿ ಬಂದಿತ್ತು.
ಈ ಹಿನ್ನೆಲೆಯಲ್ಲಿ ಗುರುವಾರ ಟ್ವೀಟ್ ಮಾಡಿರುವ ಆರಗ ಜ್ಞಾನೇಂದ್ರ ವಿವಾದಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.
‘ತುಳುನಾಡಿನಲ್ಲಿ ಶ್ರದ್ಧಾಭಕ್ತಿಯಿಂದ ಆರಾಧಿಸುವ ಗುಳಿಗ ದೈವವನ್ನು ಆಧರಿಸಿ, ರಚಿಸಿರುವ ಪೌರಾಣಿಕ ನಾಟಕದ ಬಗ್ಗೆ ನನಗೆ ಅಪಾರ ಭಕ್ತಿ, ಮೆಚ್ಚುಗೆ ಇದೆ. ದೈವಗಳ ಬಗ್ಗೆ ಅಪಾರ ಭಕ್ತಿ, ಗೌರವ ಹೊಂದಿದ್ದೇನೆ‘ ಎಂದು ಅವರು ಹೇಳಿದ್ದಾರೆ.
‘ರಂಗಭೂಮಿಯಲ್ಲಿ ತಂತ್ರಜ್ಞಾನ ಬಳಸಿಕೊಂಡು ಯಶಸ್ವಿ ಪ್ರದರ್ಶನ ನೀಡುತ್ತಿರುವ ಕಲಾವಿದರು ಹಾಗೂ ವಿಶೇಷವಾಗಿ ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್ ಬೈಲ್ ಅವರ ಸೃಜನಶೀಲತೆ ಬಗ್ಗೆ ಅಭಿಮಾನ ಇದೆ. ಆದರೆ, ಜನರ ವಿಶ್ವಾಸ ಕಳೆದುಕೊಂಡ ತೀರ್ಥಹಳ್ಳಿಯ ಕಾಂಗ್ರೆಸ್ ನಾಯಕರು, ರಾಜಕೀಯ ದುರುದ್ದೇಶದಿಂದ ಶಿವದೂತೆ ಗುಳಿಗೆ ನಾಟಕ ಪ್ರದರ್ಶನ ಮಾಡಿದ್ದಾರೆ. ಈ ಮೂಲಕ, ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಹತಾಶ ಪ್ರಯತ್ನ ಮಾಡಿರುವುದನ್ನು ಪ್ರಸ್ತಾಪಿಸಿದ್ದೇನೆಯೇ ಹೊರತು, ನಾಟಕದ ಬಗ್ಗೆ ಅಥವಾ ದೈವದ ವಿರುದ್ಧ ಮಾತನಾಡಿಲ್ಲ. ನಾನಾಡಿದ ಮಾತುಗಳಿಗೆ ಅಪಾರ್ಥ ಕಲ್ಪಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ನಡೆಸುತ್ತಿರುವ ಕುಹಕಿಗಳ ಉದ್ದೇಶ ಈಡೇರುವುದಿಲ್ಲ’ ಎಂದು ಅವರು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.