ಬೆಂಗಳೂರು: ತೂಕ ಮತ್ತು ಅಳತೆಯಲ್ಲಿ ನಿಖರತೆ ತಂದು ವಾರ್ಷಿಕ ₹ 1 ಸಾವಿರ ಕೋಟಿ ರಾಜಸ್ವ ಸಂಗ್ರಹಿಸಲು ಗುರಿ ನಿಗದಿ ಮಾಡಲಾಗಿದೆ ಎಂದು ಆಹಾರ ಮತ್ತು ಕಾನೂನು ಮಾಪನಶಾಸ್ತ್ರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.
ಕಾನೂನು ಮಾಪನಶಾಸ್ತ್ರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ನಂತರ ಅವರು ಮಾತನಾಡಿದರು.
ತೂಕ ಮತ್ತು ಅಳತೆಯ ನಿಖರತೆ ಮೂಲಕ ಗ್ರಾಹಕರ ಹಿತರಕ್ಷಣೆ ಕಾಯ್ದುಕೊಳ್ಳುವ ಜತೆಗೆ ರಾಜಸ್ವ ಸಂಗ್ರಹವನ್ನೂ ಹೆಚ್ಚಿಸಬೇಕಿದೆ. ಪ್ರಸ್ತುತ ವಾರ್ಷಿಕ ₹ 56 ಕೋಟಿ ಸಂಗ್ರಹಿಸಲಾಗುತ್ತಿದೆ. ಅಧಿಕಾರಿಗಳು, ಸಿಬ್ಬಂದಿ ಕೊರತೆ ಮತ್ತಿತರ ಕಾರಣಗಳಿಂದ ನಿಗದಿತ ಗುರಿ ತಲುಪಲು ಸಾಧ್ಯವಾಗಿಲ್ಲ. ಅದಕ್ಕಾಗಿ ವೃಂದ ಮತ್ತು ನೇಮಕಾತಿ ನಿಯಮಕ್ಕೆ ತಿದ್ದುಪಡಿ ತಂದು ಕಾನೂನು ಮಾಪನಶಾಸ್ತ್ರ ಇಲಾಖೆ ಬಲಪಡಿಸಲಾಗುವುದು. ಈಗಿರುವ ಸಂಗ್ರಹವನ್ನು 20ಪಟ್ಟು ಹೆಚ್ಚಿಸಲಾಗುವುದು ಎಂದರು.
ಕಾನೂನು ಮಾಪನಶಾಸ್ತ್ರ ಇಲಾಖೆಗೆ ಮೊದಲು ಸ್ವಂತ ಕಟ್ಟಡವಿರಲಿಲ್ಲ. ರಾಜ್ಯದ 137 ಕಚೇರಿಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದವು. ಇಂದು 92 ಸ್ವಂತ ಕಟ್ಟಡ ಹೊಂದಲಾಗಿದೆ. 45 ಕಚೇರಿಗಳಿಗೆ ಕಟ್ಟಡ ನಿರ್ಮಿಸಲು ಕ್ರಮಕೈಗೊಳ್ಳಲಾಗುವುದು. ಇ-ಮಾಪನ್ ತಂತ್ರಾಂಶವನ್ನು ಮೇಲ್ದರ್ಜೆಗೇರಿಸಲಾಗುವುದು. ಇಲಾಖೆಯನ್ನು ಪುನರ್ ರಚಿಸಲಾಗುವುದು ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.