ಬೆಂಗಳೂರು: ಪದವಿಪೂರ್ವ ಕಾಲೇಜು ಮತ್ತು ಪ್ರೌಢಶಾಲಾ ಶಿಕ್ಷಕರು ಪರೀಕ್ಷಾ ಕಾರ್ಯದಲ್ಲಿ ತೊಡಗಿರುವುದರಿಂದ ಅವರನ್ನು ಕೋವಿಡ್ ಕೆಲಸಗಳಿಂದ ಬಿಡುಗಡೆಗೊಳಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಅವರು ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದಾರೆ.
ಕೋವಿಡ್ 19 ಸಂಬಂಧ ರಾಜ್ಯದಲ್ಲಿ ಸರ್ಕಾರಿ, ಅನುದಾನಿತ, ಅನುದಾನರಹಿತ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಶಿಕ್ಷಕರು ಹಾಗೂ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರು ಚೆಕ್ ಪೋಸ್ಟ್, ಆರೋಗ್ಯ ಸಮೀಕ್ಷೆ ಇನ್ನಿತರೆ ಕೆಲಸಗಳಿಗೆ ನಿಯೋಜಿಸಿಕೊಳ್ಳಲಾಗಿದೆ.
ಈಗಾಗಲೆ ಪ್ರೌಢಶಾಲಾ ಶಿಕ್ಷಕರನ್ನು ಎಸ್ಎಸ್ಎಲ್ಸಿ ಪರೀಕ್ಷೆ ಹಾಗೂ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರನ್ನು ಪರೀಕ್ಷಾ ಕರ್ತವ್ಯ ನಿರ್ವಹಿಸುವಂತೆ ಇಲಾಖೆಯಿಂದ ನಿರ್ದೇಶನ ನೀಡಲಾಗಿದೆ. ದ್ವಿತೀಯ ಪಿಯುಸಿ ಮೌಲ್ಯಮಾಪನ ಕಾರ್ಯವನ್ನು ಈಗಾಗಲೆ ಆರಂಭಿಸಲಾಗಿದೆ.
ಇವರನ್ನು ಕೋವಿಡ್ 19 ಸಂಬಂಧಿಸಿದ ಕಾರ್ಯಗಳಲ್ಲಿ ತೊಡಗಿಸುವುದರಿಂದ ಇವರು ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಸಂಪರ್ಕಕ್ಕೆ ಬಂದು ಕೋವಿಡ್ 19 ಸೋಂಕಿಗೆ ಒಳಗಾಗುವ ಅಪಾಯವಿದ್ದು, ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ. ಆದ ಕಾರಣ ಪ್ರೌಢಶಾಲೆ ಶಿಕ್ಷಕರು ಹಾಗೂಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರನ್ನು ಕೋವಿಡ್ 19 ಕರ್ತವ್ಯಗಳಿಂದ ಬಿಡುಗಡೆಗೊಳಿಸುವಂತೆ ಸಂಬಂಧಿಸಿದವರಿಗೆ ನಿರ್ದೇಶನ ನೀಡಬೇಕಾಗಿ ವಿನಂತಿಸುವುದಾಗಿ ಪುಟ್ಟಣ್ಣ ಆಗ್ರಹಿಸಿದ್ದಾರೆ.