ಮೈಸೂರು: ಮೈಸೂರು ಜಿಲ್ಲಾ ಪಂಚಾಯಿತಿಯಲ್ಲಿ ಜೆಡಿಎಸ್– ಬಿಜೆಪಿ ಮೈತ್ರಿ ಮುಂದುವರಿಯಲಿದ್ದು, ಕಾಂಗ್ರೆಸ್ ಜತೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಇಲ್ಲಿ ಶುಕ್ರವಾರ ಹೇಳಿದರು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಶನಿವಾರ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮಾಧ್ಯಮದವರ ಜತೆ ಮಾತನಾಡಿ, ‘ಪೂರ್ಣ ಐದು ವರ್ಷಗಳ ಅವಧಿಗೆ ಮೈತ್ರಿ ಮುಂದುವರಿಯಲಿದೆ ಎಂದು ಬಿಜೆಪಿಗೆ ಮಾತು ಕೊಟ್ಟಿದ್ದೆವು. ಕೊಟ್ಟ ಮಾತಿನಂತೆ ಮೈತ್ರಿ ಮುಂದುವರಿಸುತ್ತೇವೆ’ ಎಂದರು.
‘ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಸಚಿವ ಸಾ.ರಾ.ಮಹೇಶ್ ಜತೆ ಮಾತನಾಡಿದ್ದು, ಕಾಂಗ್ರೆಸ್ ಜತೆ ಕೈಜೋಡಿಸುವಂತೆ ಕೇಳಿಕೊಂಡಿದ್ದಾರೆ. ಆದರೆ ಸ್ಥಳೀಯ ಮಟ್ಟದಲ್ಲಿ ಕಾಂಗ್ರೆಸ್ ಜತೆ ಹೊಂದಾಣಿಕೆ ಸಾಧ್ಯವಿಲ್ಲ ಎಂದು ಅವರಿಗೆ ಸ್ಪಷ್ಟಪಡಿಸಿದ್ದೇವೆ’ ಎಂದು ತಿಳಿಸಿದರು.