ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ವಿರೋಧಿಸಿ ಇಂದು (ಶುಕ್ರವಾರ) ಕರ್ನಾಟಕ ಬಂದ್ಗೆ ಕರೆ ನೀಡಲಾಗಿದೆ.
ರಾಜಧಾನಿ ಬೆಂಗಳೂರಿನಲ್ಲಿ ಸೆ. 28ರ ರಾತ್ರಿಯಿಂದ ಸೆ. 29ರ ರಾತ್ರಿ 12 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸ್ ಕಮಿಷನರ್ ಬಿ. ದಯಾನಂದ್ ಆದೇಶ ಹೊರಡಿಸಿದ್ದಾರೆ.
ಬಹುತೇಕ ವ್ಯಾಪಾರಿಗಳು ಹಾಗೂ ಉದ್ಯಮಿಗಳು ಶುಕ್ರವಾರದ ಬಂದ್ ಬೆಂಬಲಿಸಿದ್ದಾರೆ. ಹೀಗಾಗಿ, ಅವರೆಲ್ಲರೂ ವ್ಯಾಪಾರ–ವಹಿವಾಟು ಸ್ಥಗಿತಗೊಳಿಸಲಿದ್ದಾರೆ.
ಖಾಸಗಿ ವಾಹನಗಳು, ಆಟೊ, ಮ್ಯಾಕ್ಸಿಕ್ಯಾಬ್, ಓಲಾ–ಉಬರ್ ಕ್ಯಾಬ್, ಶಾಲೆ ವಾಹನಗಳ ಚಾಲಕರು ಹಾಗೂ ಮಾಲೀಕರು ಬಂದ್ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಆಟೊ ಹಾಗೂ ಖಾಸಗಿ ವಾಹನಗಳ ಓಡಾಟ ಬಂದ್ ಆಗುವ ಸಂಭವವಿದೆ.
‘ವಾರದಲ್ಲಿ ಇದು ಎರಡನೇ ಬಂದ್. ಹೋಟೆಲ್ ನಂಬಿಕೊಂಡವರಿಗೆ ಒಂದನೇ ಬಂದ್ನಿಂದ ನಷ್ಟವಾಗಿದೆ. ಎರಡನೇ ಬಂದ್ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಭದ್ರತೆ ನೀಡಿದರೆ ಹೋಟೆಲ್ ತೆರೆಯುತ್ತೇವೆ’ ಎಂದು ರಾಜ್ಯ ಪ್ರದೇಶ ಹೋಟೆಲ್ ಮತ್ತು ಉಪಾಹಾರ ಮಂದಿರಗಳ ಸಂಘದ ಅಧ್ಯಕ್ಷ ಚಂದ್ರಶೇಖರ್ ಹೆಬ್ಬಾರ್ ತಿಳಿಸಿದ್ದಾರೆ.
ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ವಿವಿಧ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ಗೆ ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಬೆಂಬಲ ವ್ಯಕ್ತವಾಗಿದೆ.
ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದ್ದು, ವಿದ್ಯಾರ್ಥಿಗಳು ಹಾಗೂ ಅವರನ್ನು ಕರೆತರುವ ವಾಹನಗಳ ಓಡಾಟವಿಲ್ಲ. ಅಂಗಡಿಗಳನ್ನು ಮುಚ್ಚಲಾಗಿದೆ.
ರೈತ ಸಂಘ ಹಾಗೂ ಕನ್ನಡಪರ ಸಂಘಟನೆಗಳ ಹೋರಾಟಗಾರರು ಮೈಸೂರಿನ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದರು.
‘ಬಂದ್ ಭದ್ರತೆಗಾಗಿ ರಾಜ್ಯದಾದ್ಯಂತ 70 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ. ಕಾವೇರಿ ನದಿ ಕೊಳ್ಳದ ಜಿಲ್ಲೆಗಳಲ್ಲಿ ಭದ್ರತೆಗೆ ಒತ್ತು ನೀಡಲಾಗಿದೆ. ಆಯಾ ಜಿಲ್ಲೆಗಳ ಎಸ್ಪಿಗಳಿಗೆ ಭದ್ರತೆ ಜವಾಬ್ದಾರಿ ವಹಿಸಲಾಗಿದೆ’ ಎಂದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್. ಹಿತೇಂದ್ರ ತಿಳಿಸಿದ್ದಾರೆ.
‘ಆಯಾ ಜಿಲ್ಲೆಗಳಲ್ಲಿ ಪರಿಸ್ಥಿತಿ ನೋಡಿಕೊಂಡು ನಿಷೇಧಾಜ್ಞೆ ಜಾರಿ ಬಗ್ಗೆ ಜಿಲ್ಲಾಧಿಕಾರಿಗಳು ಕ್ರಮ
ಕೈಗೊಳ್ಳಲಿದ್ದಾರೆ. ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದರೆ ಹಾಗೂ ಸಾರ್ವಜನಿಕರ ಹಕ್ಕುಗಳಿಗೆ ಚ್ಯುತಿ ಉಂಟು ಮಾಡಿದರೆ ಕ್ರಮ ಜರುಗಿಸಲಾಗುವುದು’ ಎಂದಿದ್ದಾರೆ.
ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಹಾಗೂ ಮೆಟ್ರೊ ರೈಲು ಎಂದಿನಂತೆ ಸಂಚಾರ ನಡೆಸುತ್ತಿದೆ. ಉಳಿದಂತೆ ರಾಜ್ಯದಾದ್ಯಂತ ಕೆಎಸ್ಆರ್ಟಿಸಿ ಬಸ್ಗಳು ಸಂಚರಿಸುತ್ತಿವೆ.
ಚಾಮರಾಜನಗರ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಕರ್ನಾಟಕ ಬಂದ್ ಗೆ ಉತ್ತಮ ಬೆಂಬಲ ವ್ಯಕ್ತವಾಗಿದೆ.
ಬೆಳಿಗ್ಗೆ 6 ಗಂಟೆಯಿಂದಲೇ ಕಾವೇರಿ ಹೋರಾಟ ಕ್ರಿಯಾ ಸಮಿತಿಯವರು ಪ್ರತಿಭಟನೆ ಆರಂಭಿಸಿದ್ದು, ಜಿಲ್ಲಾ ಕೇಂದ್ರದಲ್ಲಿ ಅಲ್ಲಲ್ಲಿ ರಸ್ತೆ ತಡೆ ಮಾಡುತ್ತಿದ್ದಾರೆ.
ಕಾವೇರಿ ಹೋರಾಟ ಕ್ರಿಯಾ ಸಮಿತಿಯವರು ಪ್ರತಿಭಟನೆ ಆರಂಭಿಸಿದ್ದಾರೆ.
ತಮಿಳುನಾಡಿಗೆ ಕಾವೇರಿ ನೀರು ಹರಿಸಬಾರದು ಎಂದು ಆಗ್ರಹಿಸಿ, ಇಂದು ರಾಜ್ಯದಾದ್ಯಂತ ಕರೆ ಕೊಟ್ಟಿರುವ ಬಂದ್ಗೆ ರಾಮನಗರದಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಳಿಗ್ಗೆಯಿಂದಲೇ ಅಂಗಡಿ–ಮುಂಗಟ್ಟುಗಳು ಮುಚ್ಚಿವೆ. ಸರ್ಕಾರಿ ಬಸ್ ಮತ್ತು ಖಾಸಗಿ ವಾಹನಗಳ ಓಡಾಟವೂ ಕಡಿಮೆಯಾಗಿದೆ.