ಬಳ್ಳಾರಿ: ಪೆಟ್ರೋಲ್ ಮತ್ತು ಡಿಸೇಲ್ ದರ ಹೆಚ್ಚಳವಾಗಿದ್ದರೂ, ಬಸ್ ಪ್ರಯಾಣ ದರವನ್ನು ಸದ್ಯಕ್ಕೆ ಏರಿಸುವುದಿಲ್ಲ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ತಿಳಿಸಿದರು.
ಬಸ್ ದರ ಹೆಚ್ಚಿಸಿದರೆ ಪ್ರಯಾಣಿಕರಿಗೆ ತೊಂದರೆಯಾಗಲಿದೆ. ಇದರ ಬದಲಾಗಿ ಎಲೆಕ್ಟ್ರಿಕಲ್ ಬಸ್ಗಳನ್ನು ಓಡಿಸಲು ಯೋಜನೆ ರೂಪಿಸಲಾಗಿದ್ದು, ಟೆಂಡರ್ ಕೂಡ ಕರೆಯಲಾಗಿದೆ. ಕೇಂದ್ರ ಸರ್ಕಾರ ಈ ಯೋಜನೆಗಾಗಿ ಪ್ರತ್ಯೇಕವಾಗಿ ಅನುದಾನ ನೀಡುವ ವಿಶ್ವಾಸವಿದೆ ಎಂದರು.
ಮೊದಲ ಹಂತದಲ್ಲಿ ಬೆಂಗಳೂರು ಸೇರಿ ದೊಡ್ಡ ನಗರಗಳಲ್ಲಿ ಎಲೆಕ್ಟ್ರಿಕಲ್ ಬಸ್ ಓಡಿಸಲಾಗುವುದು. ಆರಂಭದಲ್ಲಿ 700 ಬಸ್ ಖರೀದಿಸಲಿದ್ದೇವೆ ಎಂದು ಶನಿವಾರ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.
ಸಾರಿಗೆ ಇಲಾಖೆಯ ನಾಲ್ಕು ನಿಗಮಗಳು ತೀವ್ರ ನಷ್ಟದಲ್ಲಿವೆ. ಪ್ರಸಕ್ತ ಸಾಲಿನಲ್ಲಿ ₹ 510 ಕೋಟಿ ನಷ್ಟವಾಗಿದೆ. ಕಳೆದ ವರ್ಷ ₹ 1280 ಕೋಟಿ ನಷ್ಟವಾಗಿದೆ. ನಷ್ಟದಲ್ಲಿರುವ ನಿಗಮಗಳನ್ನು ಲಾಭದತ್ತ ಕೊಂಡೊಯ್ಯುವ ಕುರಿತು ಹಿರಿಯ ಅಧಿಕಾರಿಗಳ ಸಭೆ ನಡೆಸಲಾಗಿದೆ. ಸಂಸ್ಥೆಯನ್ನು ನಷ್ಟದಿಂದ ಹೊರ ತರಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು.
ಹಳೇ ಬಸ್ಗಳನ್ನು ಗುಜುರಿಗೆ ಬಿಸಾಡುವ ಕೇಂದ್ರ ಸರ್ಕಾರದ ನೀತಿ ಚೆನ್ನಾಗಿದೆ. ಮೋದಿಯವರ ಸೂಚನೆಯಂತೆ ಅನುಷ್ಠಾನ ಮಾಡಲಾಗುವುದು ಎಂದು ಶ್ರೀರಾಮುಲು ಸ್ಪಷ್ಟಪಡಿಸಿದರು.
ಪ್ರತಿಕ್ರಿಯೆಗೆ ನಕಾರ
ಆನಂದ ಸಿಂಗ್ ಅಸಮಾಧಾನದ ವಿಚಾರ ಕುರಿತು ಪ್ರಸ್ತಾಪಿಸಿದ ಸಾರಿಗೆ ಸಚಿವರು, ಸಿಂಗ್ ಜತೆ ಶುಕ್ರವಾರ ಮಾತನಾಡಿದ್ಸೇನೆ. ಈ ಕುರಿತಂತೆ ಯಾವುದೇ ಪ್ರತಿಕ್ರಿಯೆ ನೀಡಲಾರೆ ಎಂದರು.
ಸಿಂಗ್ ಅವರಿಗೆ ದೆಹಲಿಗೆ ತೆರಳಲು ಮುಖ್ಯಮಂತ್ರಿ ಸೂಚಿಸಿದ್ದಾರೆ. ಆ.16 ರಂದು ದೆಹಲಿಗೆ ತೆರಳಬಹುದು. ನನ್ನ ಪ್ರಯತ್ನ ನಾನು ಮಾಡುತ್ತಿದ್ದೇನೆ. ಮುಖ್ಯಮಂತ್ರಿಗಳೂ ಮಾತನಾಡಿದ್ದಾರೆ. ಏನಾಗುತ್ತದೊ ಮುಂದೆ ನೋಡೋಣ ಎಂದರು.
ಇದಕ್ಕೂ ಮೊದಲು ಸಚಿವರು ಬಳ್ಳಾರಿಯ ಪ್ರಾದೇಶಿಕ ಸಾರಿಗೆ ಇಲಾಖೆ (ಆರ್ಟಿಒ) ಕಚೇರಿಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಕಲಬುರ್ಗಿ ಸಾರಿಗೆ ವಿಭಾಗದ ಜಂಟಿ ಆಯುಕ್ತ ಮಲ್ಲಿಕಾರ್ಜುನ್ ಮತ್ತಿತರ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.