ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರದಿಂದ ಬೇಡಿಕೆ ಈಡೇರಿಸುವ ಭರವಸೆ: ಮುಷ್ಕರ ನಿರ್ಧಾರ ಹಿಂಪಡೆದ ವೈದ್ಯರು

Last Updated 23 ಆಗಸ್ಟ್ 2020, 19:45 IST
ಅಕ್ಷರ ಗಾತ್ರ

ಬೆಂಗಳೂರು: ನಂಜನಗೂಡು ಪ್ರಕರಣದ ಬಗ್ಗೆ ಸೂಕ್ತ ತನಿಖೆ ಹಾಗೂ ಕೆಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸೋಮವಾರದಿಂದ ರಾಜ್ಯದಾದ್ಯಂತ ನಡೆಸಲು ಉದ್ದೇಶಿಸಿದ್ದ ಮುಷ್ಕರವನ್ನು ವೈದ್ಯರು ಹಿಂತೆಗೆದುಕೊಂಡಿದ್ದಾರೆ.

‘ಅಧಿಕಾರಿಗಳ ಕಿರುಕುಳ ತಾಳಲಾರದೆ ನಂಜನಗೂಡು ತಾಲ್ಲೂಕು ವೈದ್ಯಾಧಿಕಾರಿ ಡಾ. ನಾಗೇಂದ್ರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನು ಖಂಡಿಸಿ, ರಾಜ್ಯದಾದ್ಯಂತ ಮುಷ್ಕರ ನಡೆಸಲು ತೀರ್ಮಾನಿಸಿದ್ದೆವು. ಆದರೆ, ಸೂಕ್ತ ತನಿಖೆ ನಡೆಸುವುದಲ್ಲದೆ, ಎಲ್ಲ ಬೇಡಿಕೆ ಈಡೇರಿಸುವುದಾಗಿ ಸರ್ಕಾರ ಭರವಸೆ ನೀಡಿರುವುದರಿಂದ ಮುಷ್ಕರದ ನಿರ್ಧಾರ ಹಿಂಪಡೆದಿದ್ದೇವೆ’ ಎಂದುರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷ ಡಾ.ಶ್ರೀನಿವಾಸ್ ಹೇಳಿದ್ದಾರೆ.

‘ತುರ್ತು ಚಿಕಿತ್ಸೆ ಬಿಟ್ಟು, ಬೇರೆ ಯಾವುದೇ ಚಿಕಿತ್ಸೆ ನೀಡಬಾರದು ಎಂದು ತೀರ್ಮಾನಿಸಿದ್ದೆವು. ಮೈಸೂರು ಜಿಲ್ಲಾ ಪಂಚಾಯಿತಿ ಸಿಇಒ ಅವರನ್ನು ತಕ್ಷಣಕ್ಕೆ ವರ್ಗಾವಣೆ ಮಾಡುವುದಾಗಿ ಸರ್ಕಾರ ಹೇಳಿದೆ. ಸಾರ್ವಜನಿಕರಿಗೆ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಪ್ರತಿಭಟನೆ ವಾಪಸ್‌ ಪಡೆದಿದ್ದೇವೆ’ ಎಂದು ಅವರು ಹೇಳಿದರು.

‘ದಿನಕ್ಕೆ 250 ರಿಂದ 300 ರೋಗಿಗಳ ಪರೀಕ್ಷೆ ಮಾಡುವಂತೆ ಗುರಿ ನಿಗದಿ ಮಾಡಲಾಗುತ್ತಿದೆ. ಒಂದು ಪಿಪಿಇ ಕಿಟ್‌ ಹಾಕಿಕೊಂಡು ದಿನಕ್ಕೆ 30 ರಿಂದ 40 ಜನರನ್ನು ಪರೀಕ್ಷಿಸಬಹುದು. ಎಲ್ಲರನ್ನೂ ಪರೀಕ್ಷೆ ಮಾಡಬೇಕು ಎಂದು ವೈದ್ಯರ ಮೇಲೆ ಒತ್ತಡ ಆಗುತ್ತದೆ. ಬೇರೆ ಇಲಾಖೆಯ ಅಧಿಕಾರಿಗಳೂ ವೈದ್ಯರ ಮೇಲೆ ಒತ್ತಡ ಹೇರುವ ಕೆಲಸ ಮಾಡುತ್ತಿದ್ದಾರೆ’ ಎಂದರು.

‘ಹೆಚ್ಚು ವೈದ್ಯರು, ಶುಶ್ರೂಷಕರು, ಆರೋಗ್ಯ ಸಿಬ್ಬಂದಿ ಇಲ್ಲದೆ ಕೆಲಸ ಮಾಡುವುದು ಕಷ್ಟವಾಗುತ್ತಿದೆ. ಇದನ್ನೆಲ್ಲ ಸರ್ಕಾರದ ಗಮನಕ್ಕೆ ತಂದಿದ್ದೇವೆ’ ಎಂದು ಅವರು ತಿಳಿಸಿದರು.

ಮುಂದಿನ ವಾರ ಸಭೆ

‘ಸರ್ಕಾರಿ ವೈದ್ಯರ ಸಮಸ್ಯೆಗಳ ಪರಿಹಾರಕ್ಕೆ ಸಂಬಂಧಿಸಿದಂತೆ ವೈದ್ಯಾಧಿಕಾರಿಗಳ ಜೊತೆ ಮುಂದಿನ ವಾರದಲ್ಲಿ ಸಭೆ ನಡೆಸಲಾಗುವುದು’ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ.

‘ಕೋವಿಡ್ ವ್ಯಾಪಿಸಿರುವ ಸನ್ನಿವೇಶದಲ್ಲಿ ಜನರ ಆರೈಕೆಗೆ ನಿಮ್ಮೆಲ್ಲರ ಸೇವೆ ಅತ್ಯಗತ್ಯ. ಈ ಜವಾಬ್ದಾರಿ ಅರಿತು, ಸಾರ್ವಜನಿಕ ಹಿತದೃಷ್ಟಿಯಿಂದ ಮುಷ್ಕರ ನಡೆಸುವ ನಿರ್ಧಾರ ಹಿಂಪಡೆದಿರುವ ಎಲ್ಲ ಆರೋಗ್ಯಾಧಿಕಾರಿಗಳಿಗೆ ಧನ್ಯವಾದಗಳು’ ಎಂದು ಅವರುಟ್ವೀಟ್ ಮಾಡಿದ್ದಾರೆ.

‘ಕೋವಿಡ್ ಸಂದರ್ಭದಲ್ಲಿ ವೈದ್ಯರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ರಾಜ್ಯ ಸರ್ಕಾರಕ್ಕೆ ಅರಿವಿದೆ. ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡಲಾಗಿದೆ. ಮುಷ್ಕರ ವಾಪಸ್ ಪಡೆದಿರುವ ವೈದ್ಯರಿಗೆ ಧನ್ಯವಾದಗಳು’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಕೂಡ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT