ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ ಡೆಂಗಿ ಪ್ರಕರಣ ಏರಿಕೆ: ವಾರದಲ್ಲಿ 263 ಮಂದಿಗೆ ಜ್ವರ ದೃಢ

ರಾಜ್ಯದಲ್ಲಿ 2 ಲಕ್ಷಕ್ಕೂ ಹೆಚ್ಚು ಶಂಕಿತರಿಗೆ ತಪಾಸಣೆ
Published 29 ಡಿಸೆಂಬರ್ 2023, 16:14 IST
Last Updated 29 ಡಿಸೆಂಬರ್ 2023, 16:14 IST
ಅಕ್ಷರ ಗಾತ್ರ

ಬೆಂಗಳೂರು: ಹವಾಮಾನ ಬದಲಾವಣೆಯಿಂದಾಗಿ ರಾಜ್ಯದಲ್ಲಿ ಕಳೆದ ಒಂದು ವಾರದಲ್ಲಿ 263 ಡೆಂಗಿ ಪ್ರಕರಣಗಳು ದೃಢಪಟ್ಟಿವೆ. ಇದರಿಂದಾಗಿ ಒಟ್ಟು ಪ್ರಕರಣಗಳ ಸಂಖ್ಯೆ 16,189ಕ್ಕೆ ಏರಿಕೆಯಾಗಿದೆ. 

ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ ರಾಜ್ಯದಲ್ಲಿ ಈ ವರ್ಷ ಎರಡು ಲಕ್ಷಕ್ಕೂ ಅಧಿಕ ಡೆಂಗಿ ಶಂಕಿತರನ್ನು ತಪಾಸಣೆಗೆ ಒಳಪಡಿಸಲಾಗಿದೆ. ಅವರಲ್ಲಿ ಒಂದು ಲಕ್ಷಕ್ಕೂ ಅಧಿಕ ಮಂದಿಯ ರಕ್ತದ ಮಾದರಿ ಪರೀಕ್ಷೆ ಮಾಡಲಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಡೆಂಗಿ ಪ್ರಕರಣಗಳು ವರದಿಯಾಗಿವೆ. ಈವರೆಗೆ ರಾಜ್ಯದ 31 ಜಿಲ್ಲೆಗಳಿಂದ 7,792 ಪ್ರಕರಣಗಳು ದೃಢಪಟ್ಟರೆ, ಬಿಬಿಎಂಪಿ ವ್ಯಾಪ್ತಿಯಲ್ಲಿ 8,397 ಪ್ರಕರಣಗಳು ಖಚಿತಪಟ್ಟಿವೆ. 

ಕಳೆದ ವರ್ಷ ರಾಜ್ಯದಲ್ಲಿ 9,620 ಮಂದಿ ಡೆಂಗಿ ಜ್ವರದಿಂದ ಬಳಲಿದ್ದರು. ಅವರಲ್ಲಿ ಒಂಬತ್ತು ಮಂದಿ ಜ್ವರದ ತೀವ್ರತೆಗೆ ಮೃತಪಟ್ಟಿರುವುದು ದೃಢಪಟ್ಟಿತ್ತು. ಈ ವರ್ಷ ಬಿಬಿಎಂಪಿ ವ್ಯಾಪ್ತಿಯಲ್ಲಿ ನಾಲ್ಕು ಸೇರಿ ಒಟ್ಟು ಒಂಬತ್ತು ಮಂದಿ ಮೃತಪಟ್ಟಿರುವುದು ಖಚಿತಪಟ್ಟಿದೆ. 

ಬಿಬಿಎಂಪಿ ವ್ಯಾಪ್ತಿಯಲ್ಲಿ 58,756 ಡೆಂಗಿ ಶಂಕಿತರನ್ನು ತಪಾಸಣೆಗೆ ಒಳಪಡಿಸಲಾಗಿದೆ. ಅವರಲ್ಲಿ 36,622 ಮಂದಿಯ ರಕ್ತದ ಮಾದರಿಯನ್ನು ಪರೀಕ್ಷೆ ಮಾಡಲಾಗಿದೆ. ಕಲಬುರಗಿ, ಮೈಸೂರು ಹಾಗೂ ಉಡುಪಿಯಲ್ಲಿ ತಲಾ 500ಕ್ಕೂ ಅಧಿಕ ಪ್ರಕರಣಗಳು ದೃಢಪಟ್ಟಿವೆ. 

28 ಜಿಲ್ಲೆಗಳಲ್ಲಿ ಚಿಕೂನ್‌ಗುನ್ಯಾ ಪ್ರಕರಣಗಳು ಪತ್ತೆಯಾಗಿವೆ. 65 ಸಾವಿರಕ್ಕೂ ಅಧಿಕ ಮಂದಿ ಚಿಕೂನ್‌ಗುನ್ಯಾ ಶಂಕಿತರನ್ನು ಗುರುತಿಸಿ, ತಪಾಸಣೆಗೆ ಒಳಪಡಿಸಲಾಗಿದೆ. 33 ಸಾವಿರಕ್ಕೂ ಅಧಿಕ ಮಂದಿಯ ರಕ್ತ ಪರೀಕ್ಷೆ ನಡೆಸಲಾಗಿದೆ. ಅವರಲ್ಲಿ 1,598 ಮಂದಿ ಈ ಜ್ವರಕ್ಕೆ ಒಳಗಾಗಿರುವುದು ದೃಢಪಟ್ಟಿದೆ. ಮೈಸೂರು (210), ವಿಜಯಪುರ (172), ಕಲಬುರಗಿ (143), ಶಿವಮೊಗ್ಗದಲ್ಲಿ (137) ಹಾಗೂ ದಾವಣಗೆರೆಯಲ್ಲಿ (113) ಅಧಿಕ ಪ್ರಕರಣಗಳು ವರದಿಯಾಗಿವೆ. ಉಳಿದ ಜಿಲ್ಲೆಗಳಲ್ಲಿ ಈ ಸಂಖ್ಯೆ 100ಕ್ಕಿಂತ ಕಡಿಮೆಯಿದೆ.

ಕೋವಿಡ್: ಸಕ್ರಿಯ ಪ್ರಕರಣ 702ಕ್ಕೆ ಏರಿಕೆ

ರಾಜ್ಯದಲ್ಲಿ ಶುಕ್ರವಾರ ಹೊಸದಾಗಿ 173 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಇದರಿಂದಾಗಿ ಸಕ್ರಿಯ ಪ್ರಕರಣಗಳ ಸಂಖ್ಯೆ 702ಕ್ಕೆ ಏರಿಕೆಯಾಗಿದೆ. 

ಕೊರೊನಾ ಸೋಂಕಿತರಲ್ಲಿ ಇಬ್ಬರು ಬೆಂಗಳೂರಿನಲ್ಲಿ ಮೃತಪಟ್ಟಿರುವುದು ಖಚಿತಪಟ್ಟಿದೆ. ಜ್ವರ, ಕೆಮ್ಮು ಹಾಗೂ ಉಸಿರಾಟದ ಸಮಸ್ಯೆ ಕಾರಣ 59 ವರ್ಷದ ಪುರುಷ ಡಿ.15ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರು ಡಿ. 29ರಂದು ಮೃತಪಟ್ಟಿದ್ದು, ಮಧುಮೇಹ ಸಮಸ್ಯೆ ಎದುರಿಸುತ್ತಿದ್ದರು. 69 ವರ್ಷದ ಇನ್ನೋರ್ವ ವ್ಯಕ್ತಿ ಐಎಲ್‌ಐ ಸಮಸ್ಯೆ (ಶೀತ ಜ್ವರ ಮಾದರಿ ಅನಾರೋಗ್ಯ ಸಮಸ್ಯೆ) ಕಾರಣ ಡಿ.25ರಂದು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರು ಡಿ.27ರಂದು ಮೃತಪಟ್ಟಿದ್ದು, ಶ್ವಾಸಕೋಶ, ಹೃದಯ ಸಂಬಂಧಿ ಸಮಸ್ಯೆ ಎದುರಿಸುತ್ತಿದ್ದರು. ಇಬ್ಬರೂ ಕೋವಿಡ್ ತಡೆ ಲಸಿಕೆ ಪಡೆದವರಾಗಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. 

ರಾಜ್ಯದಲ್ಲಿ 24 ಗಂಟೆಯಲ್ಲಿ 8,349 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ. ಶೇ 2.07ರಷ್ಟು ಸೋಂಕು ದೃಢ ಪ್ರಮಾಣ ವರದಿಯಾಗಿದೆ. ಸಕ್ರಿಯ ಪ‍್ರಕರಣಗಳಲ್ಲಿ 649 ಮಂದಿ ಮನೆ ಆರೈಕೆಗೆ ಒಳಗಾಗಿದ್ದಾರೆ. 12 ಮಂದಿ ತೀವ್ರ ನಿಗಾ ಘಟಕ ಹಾಗೂ 41 ಮಂದಿ ಸಾಮಾನ್ಯ ಹಾಸಿಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಂಕಿತರಲ್ಲಿ 37 ಮಂದಿ ಚೇತರಿಸಿಕೊಂಡಿದ್ದಾರೆ.

21 ಜಿಲ್ಲೆಗಳಲ್ಲಿ ಹೊಸದಾಗಿ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಬೆಂಗಳೂರಿನಲ್ಲಿ 2,616 ಪರೀಕ್ಷೆಗಳನ್ನು ನಡೆಸಲಾಗಿದೆ. ಹೊಸದಾಗಿ 82 ಪ್ರಕರಣಗಳು ದೃಢಪಟ್ಟಿವೆ. ಇದರಿಂದಾಗಿ ಬೆಂಗಳೂರಿನಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 471ಕ್ಕೆ ಏರಿಕೆಯಾಗಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT