ಬೆಂಗಳೂರು: ಸ್ವಯಂ ಚಾಲಿನ ದರ ಸಂಗ್ರಹಣೆಗಾಗಿ ‘ಒಂದು ದೇಶ ಒಂದು ಕಾರ್ಡ್’ ಅನ್ನು ಬೆಂಗಳೂರು ಮೆಟ್ರೊ ರೈಲು ಮತ್ತು ಬಿಎಂಟಿಸಿಗಳಲ್ಲಿ ಕಾರ್ಯಗತಗೊಳಿಸಲಾಗುವುದು ಎಂದು ರಾಜ್ಯಪಾಲ ವಜುಭಾಯಿ ವಾಲಾ ತಿಳಿಸಿದರು.
ವಿಧಾನಮಂಡಲದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿ ಅವರು ಈ ವಿಷಯ ತಿಳಿಸಿದರು.
ರಾಜ್ಯ ಸರ್ಕಾರ ಬೆಂಗಳೂರು ಮೆಟ್ರೊ ರೈಲು ನಿಗಮದ ವತಿಯಿಂದ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಲಾಗುವುದು. ಅಲ್ಲದೆ, ಹಂತ 2 ಮತ್ತು ಹಂತ 2 ಎ ಕಾಮಗಾರಿಗಳು ಪ್ರಗತಿಯಲ್ಲಿದ್ದು, 2022 ರೊಳಗೆ 75 ಕಿ.ಮೀ.ಗಳಷ್ಟು ಮೆಟ್ರೊ ಮಾರ್ಗವನ್ನು ನಿರ್ಮಿಸುವ ಗುರಿ ಹೊಂದಲಾಗಿದೆ ಎಂದರು.
ನಗರದ ಸಂಚಾರ ದಟ್ಟಣೆಯನ್ನು ನಿವಾರಿಸಲು ₹15,767 ಕೋಟಿ ವೆಚ್ಚದಲ್ಲಿ ಬೆಂಗಳೂರು ಉಪನಗರ ರೈಲ್ವೆ ಯೋಜನೆ ಅನುಷ್ಠಾನಗೊಳಿಸಲು ಅನುಮೋದನೆ ನೀಡಲಾಗಿದೆ ಎಂದು ಹೇಳಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ರಾಜಕಾಲುವೆಗಳಿಗೆ ಸಂಬಂಧಿಸಿದ ನವ ನಗರೋತ್ಥಾನ ಕಾರ್ಯಕ್ರಮದಡಿ ₹1,060 ಕೋಟಿಗೆ ಅನುಮೋದನೆ ನೀಡಲಾಗಿದೆ. ಹೊಸದಾಗಿ ಸೇರಿದ 110 ಗ್ರಾಮಗಳಿಗೆ ಒಳಚರಂಡಿ ಸೌಲಭ್ಯ ಕಲ್ಪಿಸಲು ₹1,000 ಕೋಟಿ ನೀಡಲಾಗಿದೆ ಎಂದು ರಾಜ್ಯಪಾಲರು ವಿವರಿಸಿದರು.
ಬಿಬಿಎಂಪಿ ಅಧಿನಿಯಮವನ್ನು ಬೆಂಗಳೂರು ನಗರದ ಉತ್ತಮ ಆಡಳಿತಕ್ಕಾಗಿ ರಚಿಸಲಾಗಿದೆ. ಅಲ್ಲದೆ ನಗರದ ಜೀವನ ಮಟ್ಟವನ್ನು ಸುಧಾರಿಸುವ ನಿಟ್ಟಿನಲ್ಲಿ ಬೆಂಗಳೂರು ಮಿಷನ್–2022 ಅನ್ನು ಪ್ರಾರಂಭಿಸಿದೆ. ಬೆಂಗಳೂರು ನಗರದಲ್ಲಿ ₹8,015 ಕೋಟಿ ವೆಚ್ಚದಲ್ಲಿ ಮೂಲ ಸೌಕರ್ಯ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಅನುಮೋದನೆ ನೀಡಲಾಗಿದೆ ಎಂದರು.