ಸಭಾಪತಿ ಮಾತು ಒಪ್ಪದ ವಿರೋಧ ಪಕ್ಷಗಳ ಎಲ್ಲ ಸದಸ್ಯರು ಎದ್ದು ನಿಂತು ಸರ್ಕಾರದ ವಿರುದ್ಧ ಘೋಷಣೆ ಕೂಗಲಾರಂಭಿಸಿದರು. ಗದ್ದಲದ ಮಧ್ಯೆಯೇ ಮಾತು ಮುಂದಿವರಿಸಿದ ಮುಖ್ಯಮಂತ್ರಿ, ಬಿಜೆಪಿ ವರ್ತನೆಯನ್ನು ತರಾಟೆಗೆ ತೆಗೆದುಕೊಂಡರು. ರಾಜ್ಯಕ್ಕೆ ಕೇಂದ್ರದ ಅನ್ಯಾಯ, ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಆರ್ಎಸ್ಎಸ್ ನಿಲುವು, ಧರ್ಮದ ಆಧಾರದಲ್ಲಿ ಸಮಾಜ ಒಡೆಯುವ ಕುತಂತ್ರದ ವಿಷಯಗಳನ್ನು ಪ್ರಸ್ತಾಪಿಸುವ ಮೂಲಕ ಬಿಜೆಪಿ ಸದಸ್ಯರನ್ನು ಮತ್ತಷ್ಟು ಕೆರಳಿಸಿದರು.