ಬೆಂಗಳೂರು: ಭೂ ಒಡೆತನ ಯೋಜನೆಯ ಅನುಷ್ಠಾನದಲ್ಲಿ ನಡೆದಿರುವ ಅಕ್ರಮಗಳ ಕುರಿತು ತನಿಖೆಗೆ ಆದೇಶಿಸಲಾಗುವುದು ಎಂದು ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಸಿ. ಮುನಿಕೃಷ್ಣ ತಿಳಿಸಿದ್ದಾರೆ.
ಭೂ ಒಡೆತನ ಯೋಜನೆಯಲ್ಲಿ ಅಕ್ರಮ ನಡೆಯುತ್ತಿರುವ ಕುರಿತು 'ಚೋಮನ ಕನಸು: ಚೋರರ ನನಸು' ಎಂಬ ಶೀರ್ಷಿಕೆಯಡಿ 'ಪ್ರಜಾವಾಣಿ'ಯ ಭಾನುವಾರದ ಸಂಚಿಕೆಯಲ್ಲಿ ಪ್ರಕಟವಾಗಿದ್ದ ವರದಿಗೆ ಪ್ರತಿಕ್ರಿಯಿಸಿರುವ ಅವರು, ಬೆಳಗಾವಿ, ರಾಯಚೂರು ಸೇರಿದಂತೆ ನಿರ್ದಿಷ್ಟ ಪ್ರಕರಣಗಳ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯೋಜನೆಯಡಿ ಈವರೆಗೆ 41,297 ಕುಟುಂಬಗಳಿಗೆ 14,136 ಎಕರೆ 18 ಗುಂಟೆ ನೀರಾವರಿ ಜಮೀನು ಮತ್ತು 5,388 ಎಕರೆ 37 ಗುಂಟೆ ಖುಷ್ಕಿ ಜಮೀನು ಹಂಚಿಕೆ ಮಾಡಲಾಗಿದೆ. ಯೋಜನೆಯ ಅನುಷ್ಠಾನದಲ್ಲಿ ಇರುವ ಲೋಪಗಳನ್ನು ಸರಿಪಡಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
ಭೂ ಒಡೆತನ ಯೋಜನೆಯ ಅನುಷ್ಠಾನದಲ್ಲಿ ಪಾರದರ್ಶಕತೆ ತರಲಾಗುವುದು. ನಿಗಮದ ಮೇಲುಸ್ತುವಾರಿಯಲ್ಲಿ ಆಯಾ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಯೋಜನೆ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಎಂದು ತಿಳಿಸಿದ್ದಾರೆ.