ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳಾ ಮೀಸಲಾತಿ ಮಸೂದೆ ಮಂಡನೆ: ಕಾಂಗ್ರೆಸ್ ಪಕ್ಷದ ಕನಸಿನ ಕೂಸು ಎಂದ ಸಿದ್ದರಾಮಯ್ಯ

Published 20 ಸೆಪ್ಟೆಂಬರ್ 2023, 12:40 IST
Last Updated 20 ಸೆಪ್ಟೆಂಬರ್ 2023, 12:40 IST
ಅಕ್ಷರ ಗಾತ್ರ

ಬೆಂಗಳೂರು: ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಸ್ಥಾನಗಳನ್ನು ಮೀಸಲಿಡುವ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿದೆ.

ಮಹಿಳಾ ಮೀಸಲಾತಿ ಮಸೂದೆ ಮಂಡನೆ ಕುರಿತು ಸಾಮಾಜಿಕ ಮಾಧ್ಯಮ ‘ಎಕ್ಸ್‌’ನಲ್ಲಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಮಹಿಳೆಯರಿಗೆ ಶೇಕಡ 33ರಷ್ಟು ರಾಜಕೀಯ ಮೀಸಲಾತಿ ನೀಡುವ ಮಸೂದೆ ಮೂಲತಃ ಕಾಂಗ್ರೆಸ್ ಪಕ್ಷದ ಕನಸಿನ ಕೂಸು. ಈ ಕನಸನ್ನು ನನಸು ಮಾಡಲು ಪ್ರಾಮಾಣಿಕವಾದ ಪ್ರಯತ್ನ ಮಾಡಿದವರು ನಮ್ಮ ಹೆಮ್ಮೆಯ ನಾಯಕರಾದ ದಿವಂಗತ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರು ಎನ್ನುವುದನ್ನು ನಾವೆಲ್ಲರೂ ನೆನಪು ಮಾಡಿಕೊಳ್ಳಬೇಕಾಗಿದೆ’ ಎಂದಿದ್ದಾರೆ.

ನಗರ ಮತ್ತು ಗ್ರಾಮೀಣ ಪ್ರದೇಶಗಳ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ರಾಜಕೀಯ ಮೀಸಲಾತಿ ನೀಡುವ ಮಸೂದೆಯನ್ನು ಮೊದಲ ಬಾರಿ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರು 1989ರಲ್ಲಿಯೇ ಲೋಕಸಭೆಯಲ್ಲಿ ಮಂಡಿಸಿದ್ದರು. ಆದರೆ ರಾಜ್ಯಸಭೆಯಲ್ಲಿ ಅನುಮೋದನೆ ಪಡೆಯಲು ಸಾಧ್ಯವಾಗಿರಲಿಲ್ಲ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ನೀಡುವ ಐತಿಹಾಸಿಕ ಮಸೂದೆ 1993ರಲ್ಲಿ ಆಗಿನ ಪ್ರಧಾನಿ ಪಿ.ವಿ.ನರಸಿಂಹರಾವ್ ಅವರ ಕಾಲದಲ್ಲಿ ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ ಅನುಮೋದನೆಗೊಂಡು ಅನುಷ್ಠಾನಗೊಂಡಿದೆ. ಈ ಕ್ರಾಂತಿಕಾರಿ ಬದಲಾವಣೆಗೆ ಕಾಂಗ್ರೆಸ್ ಪಕ್ಷ ಕಾರಣ ಎನ್ನುವುದು ಕೂಡಾ ಇತಿಹಾಸದ ಪುಟದಲ್ಲಿ ದಾಖಲಾಗಿದೆ ಎಂದು ಹೇಳಿದ್ದಾರೆ.

2004ರಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ತನ್ನ ಸಾಮಾನ್ಯ ಕನಿಷ್ಠ ಕಾರ್ಯಕ್ರಮಗಳಲ್ಲಿ ಮಹಿಳಾ ಮೀಸಲಾತಿಯನ್ನೂ ಸೇರಿಸಿಕೊಂಡಿತ್ತು. 2010ರಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ರಾಜ್ಯಸಭೆಯಲ್ಲಿ ಮಂಡಿಸಿದ್ದ ಕಾಂಗ್ರೆಸ್ ಸರ್ಕಾರ ಅದಕ್ಕೆ ಅಂಗೀಕಾರ ಪಡೆಯಲು ಯಶಸ್ವಿಯಾಗಿತ್ತು ಎಂದು ಅವರು ಸ್ಮರಿಸಿದ್ದಾರೆ.

ಸಂಸತ್ ಮತ್ತು ವಿಧಾನಮಂಡಲಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡುವ ಕಾಯ್ದೆಯನ್ನು ಜಾರಿಗೆ ತರುವಂತೆ ಕಾಂಗ್ರೆಸ್ ಪಕ್ಷ ನಿರಂತರವಾಗಿ ಪ್ರಯತ್ನ ಮಾಡುತ್ತಲೇ ಬಂದಿದೆ. ರಾಜಕೀಯ ಭಿನ್ನಮತಗಳನ್ನು ಮೀರಿ ಮಹಿಳಾ ಮೀಸಲಾತಿ ಮಸೂದೆ ಸಂಸತ್‌ನಲ್ಲಿ ಅಂಗೀಕಾರವಾಗುವಂತೆ ಪ್ರಯತ್ನ ಮಾಡಿ ಎಂದು 2018ರಲ್ಲಿ ರಾಹುಲ್‌ ಗಾಂಧಿ ಅವರು ಪ್ರಧಾನಿ ಮೋದಿ ಅವರಿಗೆ ಮನವಿ ಸಲ್ಲಿಸಿದ್ದರು ಎಂದು ಅವರು ತಿಳಿಸಿದ್ದಾರೆ.

2019ರ ಲೋಕಸಭೆ ಚುನಾವಣೆಯ ಕಾಲದ ಕಾಂಗ್ರೆಸ್ ಪ್ರಣಾಳಿಕೆಯಲ್ಲಿಯೂ ಮಹಿಳೆಯರ ರಾಜಕೀಯ ಮೀಸಲಾತಿಯನ್ನು ಸೇರಿಸಲಾಗಿದ್ದು ಅದಕ್ಕೆ ನಾವು ಸದಾ ಬದ್ಧರಾಗಿದ್ದೇವೆ. ಮಹಿಳಾ ಮೀಸಲಾತಿ ವಿಧೇಯಕದ ವಿಚಾರದಲ್ಲಿ ಬಿಜೆಪಿ ಆಡಳಿತವಿರುವ, ದೇಶದ ಅತ್ಯಂತ ಹೆಚ್ಚು ಜನಸಂಖ್ಯೆಯುಳ್ಳ ಉತ್ತರ ಪ್ರದೇಶದ ಮುಖ್ಯಮಂತ್ರಿಯ ಯೋಗಿ ಆದಿತ್ಯನಾಥ ಅವರ ಅಭಿಪ್ರಾಯವೇನಿತ್ತು ಎನ್ನುವುದು ಇಡೀ ದೇಶಕ್ಕೇ ಗೊತ್ತಿರುವ ವಿಚಾರವಾಗಿದೆ. ಸಂಸದರಾಗಿದ್ದ ವೇಳೆ ಆದಿತ್ಯನಾಥ ಅವರು ಈ ವಿಚಾರವಾಗಿ ಅಭಿಪ್ರಾಯಭೇದ ವ್ಯಕ್ತಪಡಿಸಿದ್ದರು ಎಂದು ಸಿದ್ದರಾಮಯ್ಯ ಬೇಸರ ಹೊರಹಾಕಿದ್ದಾರೆ.

ಮೊದಲು ಈ ವಿಷಯದಲ್ಲಿ ಪಕ್ಷದಲ್ಲಿ ಆಂತರಿಕವಾಗಿ ಚರ್ಚೆಯಾಗಿ ಸಹಮತ ಮೂಡಬೇಕು ಎಂದಿದ್ದರು. ‘ಕಾಂಗ್ರೆಸ್‌ನ ಪಾಪವನ್ನು ನಾವೇಕೆ ತಲೆಯ ಮೇಲೆ ಹೊರಬೇಕು’ ಎಂದು ಹೀಗಳೆದಿದ್ದರು. ಈಗಲೂ ಅವರ ಅಭಿಪ್ರಾಯ ಇದೇ ಇದೆಯೋ ಅಥವಾ ಬದಲಾಗಿದೆಯೋ ಎಂದು ಈ ವೇಳೆ ಕೇಳಬಯಸುತ್ತೇನೆ ಎಂದು ಸಿದ್ದರಾಮಯ್ಯ ಗುಡುಗಿದ್ದಾರೆ.

ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿರುವ ಮಹಿಳಾ ಮೀಸಲಾತಿ ಮಸೂದೆ ಸ್ವಾಗತಾರ್ಹ ನಿರ್ಧಾರವಾಗಿದ್ದರೂ ಹಿಂದುಳಿದ ಜಾತಿಯ ಮಹಿಳೆಯರಿಗೆ ಒಳಮೀಸಲಾತಿ ನೀಡದೆ ಇದ್ದರೆ ಈ ಸಮುದಾಯದ ಮಹಿಳೆಯರಿಗೆ ಅನ್ಯಾಯ ಮಾಡಿದಂತಾಗುವುದು ಮಾತ್ರವಲ್ಲ ಮೀಸಲಾತಿಯ ಉದ್ದೇಶವೇ ವಿಫಲವಾಗಲಿದೆ ಎಂದು ಹೇಳಿದ್ದಾರೆ.

ಲಿಂಗ ಅಸಮಾನತೆಯ ಜೊತೆಯಲ್ಲಿ ಜಾತಿ ಅಸಮಾನತೆಯನ್ನೂ ಒಳಗೊಂಡಿರುವ ಭಾರತೀಯ ಸಮಾಜದಲ್ಲಿ ಹಿಂದುಳಿದ ಜಾತಿಗಳಿಗೆ ಸೇರಿದ ಮಹಿಳೆಯರು ರಾಜಕೀಯವಾಗಿ ಉಳಿದವರ ಜೊತೆ ಪೈಪೋಟಿ ನಡೆಸಿ ಪ್ರಾತಿನಿಧ್ಯ ಪಡೆಯುವಂತಹ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಾಮರ್ಥ್ಯ ಇಲ್ಲದಿರುವುದನ್ನು ನಾವು ಗಮನಿಸಬೇಕಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಈಗಾಗಲೇ ರಾಜಕೀಯ ಮೀಸಲಾತಿ ಇರುವುದರಿಂದ ಆ ಸಮುದಾಯಗಳ ಮಹಿಳೆಯರಿಗೆ ಮೀಸಲಾತಿ ನೀಡುವುದು ಸಮಸ್ಯೆಯಾಗಲಾರದು ಎಂದು ಅವರು ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿರುವ ಮಹಿಳಾ ಮೀಸಲಾತಿಯ ಮಸೂದೆಯನ್ನು ವಿವರವಾಗಿ ಪರಿಶೀಲಿಸಿದರೆ ಮಹಿಳೆಯರಿಗೆ ರಾಜಕೀಯ ನ್ಯಾಯಕೊಡಿಸುವುದಕ್ಕಿಂತಲೂ ಹೆಚ್ಚಾಗಿ ರಾಜಕೀಯ ಲಾಭ ಪಡೆಯುವ ಸ್ವಾರ್ಥವೇ ಕಾಣುತ್ತಿದೆ. ಈಗಿನ ಮಸೂದೆಯನ್ನು ಇದೇ ರೂಪದಲ್ಲಿ ಜಾರಿಗೆ ತರಲು ಹೊರಟರೆ ಮಹಿಳೆಯರು ರಾಜಕೀಯ ಮೀಸಲಾತಿ ಪಡೆಯಲು ಇನ್ನೆರಡು ದಶಕಗಳ ಕಾಲ ಕಾಯಬೇಕಾಗಬಹುದು ಎಂದು ಹೇಳಿದ್ದಾರೆ.

ಮಹಿಳೆಯರಿಗೆ ರಾಜಕೀಯ ಮೀಸಲಾತಿ ನೀಡಬೇಕೆಂಬ ಪ್ರಾಮಾಣಿಕ ಉದ್ದೇಶವನ್ನು ಪ್ರಧಾನಿ ಮೋದಿ ಅವರು ಹೊಂದಿದ್ದರೆ 2010ರಲ್ಲಿನ ಕಾಂಗ್ರೆಸ್ ಸರ್ಕಾರದ ಕಾಲದಲ್ಲಿ ರಾಜ್ಯ ಸಭೆಯಲ್ಲಿ ಅಂಗೀಕಾರ ಪಡೆದಿರುವ ಮಸೂದೆಯನ್ನೇ ಲೋಕಸಭೆಯಲ್ಲಿ ಮಂಡಿಸಬೇಕಾಗಿತ್ತು. 2010ರಲ್ಲಿ ಮಸೂದೆಗೆ ರಾಜ್ಯಸಭೆ ನೀಡಿರುವ ಅಂಗೀಕಾರ ಇನ್ನೂ ಚಾಲ್ತಿಯಲ್ಲಿರುವ ಕಾರಣ ಲೋಕಸಭೆಯಲ್ಲಿ ಅಂಗೀಕಾರ ಪಡೆದ ಕೂಡಲೇ ಮಸೂದೆ ಕಾಯ್ದೆಯಾಗಿ ರೂಪುಗೊಳ್ಳುವ ಪ್ರಕ್ರಿಯೆ ಪ್ರಾರಂಭವಾಗುತ್ತಿತ್ತು. ಆದರೆ, ನರೇಂದ್ರ ಮೋದಿ ಸರ್ಕಾರ ಉದ್ದೇಶಪೂರ್ವಕವಾಗಿ ಮಸೂದೆಯಲ್ಲಿ ಸಣ್ಣಪುಟ್ಟ ಬದಲಾವಣೆ ಮಾಡಿರುವುದರಿಂದ ಅದನ್ನು ಮತ್ತೆ ರಾಜ್ಯಸಭೆಯಲ್ಲಿ ಮಂಡಿಸಬೇಕಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಮುಂದಿನ ಜನಗಣತಿ ಮತ್ತು ಕ್ಷೇತ್ರ ಮರು ವಿಂಗಡಣೆ ನಡೆದ ನಂತರವಷ್ಟೇ ಮಹಿಳಾ ಮೀಸಲಾತಿ ಜಾರಿಗೆ ಬರಲಿದೆ ಎಂದು ಮಸೂದೆಯಲ್ಲಿಯೇ ಹೇಳಿರುವುದರಿಂದ ಈ ಎಲ್ಲ ಪ್ರಕ್ರಿಯೆಗಳು ಪೂರ್ಣಗೊಳ್ಳಲು ಕನಿಷ್ಠ 20 ವರ್ಷ ಬೇಕಾಗಬಹುದು. ಮುಂದಿನ ಜನಗಣತಿ 2026ರಲ್ಲಿ ಮತ್ತು ಕ್ಷೇತ್ರ ಮರು ವಿಂಗಡಣೆ 2031ರಲ್ಲಿ ನಡೆಯುವ ಸಾಧ್ಯತೆ ಇದೆ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT