ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯೆಮೆನ್‌ ಪ್ರವಾಸ ನಿಷೇಧ ಕ್ರಮ: ಹೈಕೋರ್ಟ್‌ ಮೌಖಿಕ ಸಹಮತ

ಪಾಸ್‌ಪೋರ್ಟ್‌ ಮುಟ್ಟುಗೋಲು ಪ್ರಕರಣ
Published 15 ಏಪ್ರಿಲ್ 2024, 16:34 IST
Last Updated 15 ಏಪ್ರಿಲ್ 2024, 16:34 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಷ್ಟ್ರೀಯ ಭದ್ರತೆ ಹಾಗೂ ಭಾರತೀಯ ನಾಗರಿಕರ ಸುರಕ್ಷತೆ ದೃಷ್ಟಿಯಿಂದ ಮಧ್ಯಪ್ರಾಚ್ಯ ದೇಶಗಳಲ್ಲಿ ಒಂದಾದ ಯೆಮೆನ್‌ ದೇಶಕ್ಕೆ ಪ್ರವಾಸ ಕೈಗೊಳ್ಳುವುದನ್ನು ನಿಷೇಧಿಸಿರುವ ಕೇಂದ್ರ ಸರ್ಕಾರದ ಕ್ರಮ ಸರಿಯಾಗಿಯೇ ಇದೆ’ ಎಂದು ಹೈಕೋರ್ಟ್‌ ಮೌಖಿಕವಾಗಿ ಸಹಮತ ವ್ಯಕ್ತಪಡಿಸಿದೆ.

‘ಮುಟ್ಟುಗೋಲು ಹಾಕಿಕೊಂಡಿರುವ ನನ್ನ ಪಾಸ್‌ಪೋರ್ಟ್‌ ಅನ್ನು ಹಿಂದಿರುಗಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಕೋರಿ ಬೆಳ್ತಂಗಡಿ ತಾಲ್ಲೂಕಿನ ಗಂಡಿಬಾಗಿಲು ನೆರಿಯಾ ನಿವಾಸಿ ಶೇನಿ ಜಾಯ್‌ (48) ಸಲ್ಲಿಸಿರುವ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಎಸ್‌.ಸುಶಾಂತ್‌ ವೆಂಕಟೇಶ್‌ ಪೈ ನ್ಯಾಯಪೀಠಕ್ಕೆ ಪ್ರಮಾಣ ಪತ್ರ ಸಲ್ಲಿಸಿ, ‘ಅರ್ಜಿದಾರರ ಪಾಸ್‌ಪೋರ್ಟ್ ಹಿಂದಿರುಗಿಸಲು ಪ್ರತಿವಾದಿಗಳಿಗೆ ನಿರ್ದೇಶಿಸಬೇಕು’ ಎಂದು ಕೋರಿದರು.

ಇದಕ್ಕೆ ಕೇಂದ್ರದ ಪರ ಹಾಜರಿದ್ದ ಡೆಪ್ಯುಟಿ ಸಾಲಿಸಿಟರ್‌ ಜನರಲ್‌ ಎಚ್.ಶಾಂತಿಭೂಷಣ್‌, ‘ಯೆಮೆನ್‌ನಲ್ಲಿ ನಾಗರಿಕ ಜನಜೀವನ ಅಸ್ಥಿರತೆಯಲ್ಲಿದೆ. ಸುರಕ್ಷತೆ ದುರ್ಬಲಗೊಂಡಿದೆ. ಹೀಗಾಗಿ, ಯೆಮೆನ್‌ ಪ್ರವಾಸ ನಿಷೇಧಿಸಿ ಕೇಂದ್ರ ವಿದೇಶಾಂಗ ಸಚಿವಾಲಯ 2017ರ ಸೆಪ್ಟೆಂಬರ್ 26ರಂದು ಅಧಿಸೂಚನೆ ಹೊರಡಿಸಿದೆ. ಅರ್ಜಿದಾರರು ಅಧಿಸೂಚನೆ ಉಲ್ಲಂಘಿಸಿರುವ ಕಾರಣ ಪಾಸ್‌ಪೋರ್ಟ್‌ ಅನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ’ ಎಂದರು.

ಇದಕ್ಕೆ ನ್ಯಾಯಮೂರ್ತಿಗಳು ಅರ್ಜಿದಾರರ ಪರ ವಕೀಲರನ್ನು ಉದ್ದೇಶಿಸಿ, ’ಯೆಮೆನ್‌ನಲ್ಲಿನ ಸದ್ಯದ ಪರಿಸ್ಥಿತಿ ಮತ್ತು ನಾಗರಿಕರ ಸುರಕ್ಷತೆಯನ್ನು ಗಮನದಲ್ಲಿ ಇರಿಸಿಕೊಂಡೇ ಕೇಂದ್ರ ಸರ್ಕಾರ ಯೆಮೆನ್‌ ಪ್ರವಾಸ ನಿಷೇಧದ ಅಧಿಸೂಚನೆ ಹೊರಡಿಸಿದೆಯಲ್ಲವೇ?, ನೀವು ಅಧಿಸೂಚನೆ ಉಲ್ಲಂಘಿಸಿದ್ದೀರಿ ಎಂಬ ಕಾರಣಕ್ಕೆ ನಿಮ್ಮ ಪಾಸ್‌ಪೋರ್ಟ್‌ ಮುಟ್ಟುಗೋಲು ಹಾಕಿಕೊಂಡಿರುವುದಲ್ಲವೇ?, ಯೆಮೆನ್‌ ಪ್ರವಾಸ ನಿಷೇಧಿಸಿರುವ ಕೇಂದ್ರದ ಕ್ರಮವನ್ನು ಈಗಾಗಲೇ ದೆಹಲಿ ಹೈಕೋರ್ಟ್‌ ಎತ್ತಿ ಹಿಡಿದಿದೆಯಲ್ಲವೇ' ಎಂದು ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಸುಶಾಂತ್‌, ‘ಅರ್ಜಿದಾರರು 2010–11ರಿಂದಲೇ ಯೆಮೆನ್‌ನಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದಾರೆ. ಒಂದು ವೇಳೆ ಪಾಸ್‌ಪೋರ್ಟ್ ಹಿಂದಿರುಗಿಸದೇ ಹೋದರೆ ಕೆಲಸ ಕಳೆದುಕೊಳ್ಳು‌ತ್ತಾರೆ’ ಎಂದು ಕಳವಳ ವ್ಯಕ್ತಪಡಿಸಿದರು.

ಇದಕ್ಕೆ ನ್ಯಾಯಪೀಠ, ‘ಈ ಸಂಬಂಧ ಅರ್ಜಿದಾರರು ಸಲ್ಲಿಸಿರುವ ಮನವಿಯನ್ನು ಪರಿಶೀಲಿಸಿ ನಿಮ್ಮ ನಿಲುವೇನು ಎಂಬುದನ್ನು ತಿಳಿಸಿ’ ಎಂದು ಶಾಂತಿಭೂಷಣ್‌ ಅವರಿಗೆ ಸೂಚಿಸಿ ವಿಚಾರಣೆಯನ್ನು ಇದೇ 18ಕ್ಕೆ ಮುಂದೂಡಿತು. 

ಪ್ರಕರಣವೇನು?: ದೆಹಲಿಯ ಇಂದಿರಾಗಾಂಧಿ ವಿಮಾನ ನಿಲ್ದಾಣದಲ್ಲಿ 2023ರ ಆಗಸ್ಟ್‌ 20ರಂದು ಶೇನಿ ಜಾಯ್‌ ಅವರ ಪಾಸ್‌ಪೋರ್ಟ್‌ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಅಂತೆಯೇ, 2017ರ ಅಧಿಸೂಚನೆಯ ಅನುಸಾರ ಮತ್ತು ಪಾಸ್‌ಪೋರ್ಟ್‌ ಕಾಯ್ದೆ–1967ರ ಕಲಂ19ರ ಅನ್ವಯ ಅವರ ಪಾಸ್‌ಪೋರ್ಟ್‌ ಅನ್ನು ಅಮಾನ್ಯಗೊಳಿಸಲಾಗಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT