ಬೆಂಗಳೂರು: ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿಎಸ್ಐ) ನೇಮಕಾತಿ ಹಗರಣದ ಆರೋಪಿ ಐಪಿಎಸ್ ಅಧಿಕಾರಿ ಅಮ್ರಿತ್ ಪೌಲ್ ಅವರ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡುವಂತೆ ಪ್ರಾಸಿಕ್ಯೂಷನ್ ನ್ಯಾಯಾಲಯಕ್ಕೆ ಮನವಿ ಮಾಡಿದೆ.
ಈ ಕುರಿತಂತೆ ಪ್ರಾಸಿಕ್ಯೂಷನ್ ಪರ ವಕೀಲರು ಶನಿವಾರ ಒಂದನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶ ಆನಂದ ಚೌಹಾಣ್ ಅವರಿಗೆ ಮನವಿ ಸಲ್ಲಿಸಿದರು.
ಇದೇ ವೇಳೆ, ಅಮ್ರಿತ್ ಪೌಲ್ ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಲು ಅನುಮತಿ ನೀಡುವ ಬಗ್ಗೆ ಉತ್ತರಿಸುವಂತೆ ಪ್ರಾಸಿಕ್ಯೂಷನ್ ಶುಕ್ರವಾರವಷ್ಟೇ (ಜುಲೈ 15) ಮನವಿ ಸಲ್ಲಿಸಿತ್ತು. ‘ಈ ಮನವಿಗೆ ಇದೇ 19ರಂದು ಉತ್ತರಿಸಲಾಗುವುದು’ ಎಂದು ಅಮ್ರಿತ್ ಪೌಲ್ ಪರ ವಕೀಲರು ಕೋರ್ಟ್ ಗೆ ತಿಳಿಸಿದರು.
ಇದನ್ನು ದಾಖಲು ಮಾಡಿಕೊಂಡ ನ್ಯಾಯಾಧೀಶರು ವಿಚಾರಣೆಯನ್ನು ಇದೇ 19ಕ್ಕೆ ಮುಂದೂಡಿದರು. ಅಮ್ರಿತ್ ಪೌಲ್, ಪಿಎಸ್ಐ ನೇಮಕಾತಿ ವಿಭಾಗದ ಎಡಿಜಿಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಈ ಪ್ರಕರಣದಲ್ಲಿ ಅವರು 35ನೇ ಆರೋಪಿಯಾಗಿದ್ದು, ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.