ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ರೋಗಿಗಳಿಗೆ ನೀಡಲು ರೆಮ್ಡಿಸಿವಿರ್ ಚುಚ್ಚುಮದ್ದು ಮತ್ತು ಆಮ್ಲಜನಕ ಕೊರತೆ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪ್ರಧಾನಿ ನರೇಂದ್ರ ಮೋದಿಯ ಗಮನ ಸೆಳೆದಿದ್ದಾರೆ.
ಕೋವಿಡ್ ಪ್ರಕರಣಗಳು ಅತೀ ಹೆಚ್ಚು ಕಂಡುಬರುತ್ತಿರುವ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ದೂರವಾಣಿ ಮೂಲಕ ಸಮಾಲೋಚನೆ ನಡೆಸುತ್ತಿದ್ದು, ಭಾನುವಾರ ಬೆಳಿಗ್ಗೆ ಯಡಿಯೂರಪ್ಪ ಅವರಿಗೂ ಕರೆ ಮಾಡಿ ರಾಜ್ಯದಲ್ಲಿನ ವಸ್ತುಸ್ಥಿತಿಯ ಮಾಹಿತಿ ಪಡೆದಿದ್ದಾರೆ.
ಈ ವೇಳೆ, ಹೆಚ್ಚುತ್ತಿರುವ ಸೋಂಕು ಪ್ರಕರಣಗಳು ಮತ್ತು ಸಾವಿನ ಪ್ರಮಾಣದ ಸಹಿತ ರಾಜ್ಯದ ಸದ್ಯದ ಸ್ಥಿತಿಗತಿಯನ್ನು ಪ್ರಧಾನಿಗೆ ಯಡಿಯೂರಪ್ಪ ವಿವರಿಸಿದ್ದಾರೆ. ಅಲ್ಲದೆ, ರಾಜ್ಯಕ್ಕೆ ರೆಮ್ಡಿಸಿವಿರ್ ಮತ್ತು ಆಮ್ಲಜನಕ ಹಂಚಿಕೆ ಪಾಲು ಹೆಚ್ಚಿಸುವಂತೆ ಬೇಡಿಕೆ ಇಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕೋವಿಡ್ ಎರಡನೇ ಅಲೆ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಈವರೆಗೆ ತೆಗೆದುಕೊಂಡ ಕ್ರಮಗಳು ಮತ್ತು ಲಾಕ್ಡೌನ್ ವಿಧಿಸಿರುವ ಬಗ್ಗೆಯೂ ಪ್ರಧಾನಿ ಜೊತೆ ಯಡಿಯೂರಪ್ಪ ವಿಚಾರ ವಿನಿಮಯ ನಡೆಸಿದ್ದಾರೆ ಎಂದೂ ಮೂಲಗಳು ಹೇಳಿವೆ.