ಬೆಳಗಾವಿ: ಮಹಾರಾಷ್ಟ್ರ ಏಕೀಕರಣ ಸಮಿತಿಯ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಸಭೆ ನಡೆಸಲು ಮಹಾರಾಷ್ಟ್ರದ ಸಚಿವರು ರಾಜ್ಯಕ್ಕೆ ಪ್ರವೇಶಿಸದಂತೆ ಬೆಳಗಾವಿಗೆ ಹೋಗುವ ಎಲ್ಲಾ ರಸ್ತೆಗಳಲ್ಲಿ ಪೊಲೀಸರುಮಂಗಳವಾರ ಕಟ್ಟೆಚ್ಚರ ವಹಿಸಿದ್ದಾರೆ.
ಮಹಾರಾಷ್ಟ್ರದ ಗಡಿ ಉಸ್ತುವಾರಿ ಸಚಿವರಾದ ಚಂದ್ರಕಾಂತ ಪಾಟೀಲ, ಶಂಭುರಾಜ್ ದೇಸಾಯಿ ಹಾಗೂ ಮಹಾರಾಷ್ಟ್ರ ಗಡಿ ಸಲಹಾ ಸಮಿತಿ ಅಧ್ಯಕ್ಷ, ಸಂಸದ ಧೈರ್ಯಶೀಲ ಮಾನೆ ಅವರು ಡಿಸೆಂಬರ್ 6ರಂದು ಬೆಳಗಾವಿಗೆ ಭೇಟಿ ನೀಡದಂತೆ ಜಿಲ್ಲಾಧಿಕಾರಿನಿತೇಶ್ ಪಾಟೀಲ ನಿಷೇಧ ಘೋಷಿಸಿದ್ದಾರೆ.
'ಮಹಾರಾಷ್ಟದ ನಾಯಕರು ಜಿಲ್ಲೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡುವ ಸಾಧ್ಯತೆ ಇರುತ್ತದೆ. ಇದರಿಂದ ಭಾಷಾ ವೈಷಮ್ಯ ಬೆಳೆದು, ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗಬಹುದು. ಹೀಗಾಗಿ ಸಿಆರ್ಪಿಸಿ 144(3)ನೇ ಕಲಂ ಅನ್ವಯ ಬೆಳಗಾವಿಗೆ ಪ್ರವೇಶ ನಿಷೇಧಿಸಲಾಗಿದೆ' ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಮಹಾರಾಷ್ಟ್ರ ಸಚಿವರ ನಡೆಯನ್ನು ಖಂಡಿಸಿ ಪ್ರತಿಭಟಿಸಲು, ಬೆಂಗಳೂರಿನಿಂದ ವಿವಿಧ ಕನ್ನಡ ಸಂಘಟನೆಗಳು ಬೆಳಗಾವಿಯತ್ತ ಮುಖ ಮಾಡಿವೆ. ಇಲ್ಲಿನ ರಾಣಿ ಚನ್ನಮ್ಮ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಮಹಾರಾಷ್ಟ್ರದ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.