ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೀಸಲಾತಿ ಹೆಚ್ಚಳ ವಿಚಾರದಲ್ಲಿ ಪರಿಶಿಷ್ಟರಿಗೆ ದ್ರೋಹ ಖಂಡಿಸಿ ಪ್ರತಿಭಟನೆ: ಡಿಕೆಶಿ

Last Updated 24 ಮಾರ್ಚ್ 2023, 0:08 IST
ಅಕ್ಷರ ಗಾತ್ರ

ಬೆಂಗಳೂರು: ‘ಮೀಸಲಾತಿ ಹೆಚ್ಚಿಸುವ ವಿಚಾರದಲ್ಲಿ ಪರಿಶಿಷ್ಟರಿಗೆ ರಾಜ್ಯ ಸರ್ಕಾರ ಮೋಸ ಮಾಡುತ್ತಿದೆ’ ಎಂದು ಆರೋಪಿ ಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ‘ಇದನ್ನು ಖಂಡಿಸಿ ಶುಕ್ರವಾರ (ಮಾರ್ಚ್‌ 24) ಬೆಳಿಗ್ಗೆ 10 ಗಂಟೆಗೆ ರಾಜಭವನದ ಎದುರು ಪ್ರತಿಭಟನೆ ಹಮ್ಮಿಕೊಳ್ಳ ಲಾಗಿದೆ’ ಎಂದರು.

ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ‘ಮೀಸಲಾತಿ ಹೆಚ್ಚಳ ಕುರಿತ ಪ್ರಸ್ತಾವವನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸದೇ, ಸಂವಿಧಾನದ 9ನೇ ಶೆಡ್ಯೂಲ್‌ನಲ್ಲಿ ಸೇರಿಸದೇ, ಸುಳ್ಳು ಹೇಳುವ ಮೂಲಕ ರಾಜ್ಯ ಬಿಜೆಪಿ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಜನರ ಕಿವಿಗೆ ಹೂವು ಇಡುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಮೀಸಲಾತಿ ಹೆಚ್ಚಿಸುವ ವಿಚಾರದಲ್ಲಿ ಕರ್ನಾಟಕ ರಾಜ್ಯ ಸರ್ಕಾರದಿಂದ ಯಾವುದೇ ಪ್ರಸ್ತಾವ ಬಂದಿಲ್ಲ ಎಂದು ಕೇಂದ್ರ ಸಚಿವರು ಸಂಸತ್ತಿನಲ್ಲಿ ಸ್ಪಷ್ಟವಾಗಿ ಹೇಳಿದ್ದಾರೆ. ಸಂವಿಧಾನದ 9ನೇ ಶೆಡ್ಯೂಲ್‌ನಲ್ಲಿ ಸೇರಿಸಲು ಪ್ರಸ್ತಾವನೆಯನ್ನೇ ಸಲ್ಲಿಸದೇ, ಮೀಸಲಾತಿ ಮಾಡಿದ್ದೇವೆ ಎಂದು ಹೇಳಿಕೊಂಡು ದಲಿತರಿಗೆ ಸರ್ಕಾರ ಮೋಸ ಮಾಡುತ್ತಿದೆ’ ಎಂದರು.

‘ಈ ದ್ರೋಹವನ್ನು ಖಂಡಿಸಲು ಪಕ್ಷದ ಎಲ್ಲ ನಾಯಕರು‌ ಶುಕ್ರವಾರ ಬೆಳಿಗ್ಗೆ ರಾಜ್ಯಪಾಲರ ಭೇಟಿಗೆ ಸಮಯಾವಕಾಶ ಕೇಳಿದ್ದೇವೆ. ಸಂಸತ್ತಿನಲ್ಲಿ ಅಧಿವೇಶನ ನಡೆಯುತ್ತಿರುವಾಗ ಬಿಜೆಪಿ ಸರ್ಕಾರ ಈ ವಿಚಾರವಾಗಿ ಪ್ರಸ್ತಾವ ಸಲ್ಲಿಸಲಿಲ್ಲ ಯಾಕೆ? ಈ ವಿಚಾರದಲ್ಲಿ ಬಿಜೆಪಿಯವರಿಗೆ ಬದ್ಧತೆ ಇದ್ದರೆ, ಕೇಂದ್ರಕ್ಕೆ ಪ್ರಸ್ತಾವ ಸಲ್ಲಿಸಿ ಸಂವಿಧಾನದ 9ನೇ ಶೆಡ್ಯೂಲ್‌ನಲ್ಲಿ ಈ ಮೀಸಲಾತಿ ಹೆಚ್ಚಳ ವಿಚಾರವನ್ನು ಸೇರಿಸಬೇಕು’ ಎಂದು ಆಗ್ರಹಿಸಿದರು.

ಶೆಡ್ಯೂಲ್ 9ಕ್ಕೆ ಸೇರಿಸಲು ಬದ್ಧ– ಸಿಎಂ

ಬೆಂಗಳೂರು: ‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಹೆಚ್ಚಿಸಿ ಈಗಾಗಲೇ ಕಾನೂನು ರಚಿಸಿದ್ದು, ಅದನ್ನು ಸಂವಿಧಾನದ ಶೆಡ್ಯೂಲ್ 9ಕ್ಕೆ ಸೇರಿಸುವ ಬದ್ಧತೆ ಸರ್ಕಾರಕ್ಕಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

‘ಪರಿಶಿಷ್ಟರ ಮೀಸಲಾತಿ ವಿಚಾರದಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು’ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರ ಆಗ್ರಹಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ‘ಸುರ್ಜೇವಾಲಾ ಅವರು ಮೀಸಲಾತಿಗೆ ಸಂಬಂಧಿಸಿದಂತೆ ಇತಿಹಾಸ ಓದಬೇಕು. ಅಷ್ಟೇ ಅಲ್ಲ, ಮೀಸಲಾತಿ ಬಗ್ಗೆ ಕಾಂಗ್ರೆಸ್‌ಗೆ ಮಾತನಾಡುವ ನೈತಿಕ ಹಾಗೂ ರಾಜಕೀಯ ಅಧಿಕಾರ ಇಲ್ಲ’ ಎಂದರು.

ಎಸ್‌ಸಿ, ಎಸ್‌ಟಿ ಮೀಸಲು: ಶೆಡ್ಯೂಲ್‌ 9ಕ್ಕೆ ಸೇರಿಸಲು ಕೇಂದ್ರಕ್ಕೆ ಪತ್ರ

ಬೆಂಗಳೂರು: ಪರಿಶಿಷ್ಟ ಜಾತಿಗೆ ಶೇ 15ರಿಂದ ಶೇ 17, ಪರಿಶಿಷ್ಟ ಪಂಗಡಕ್ಕೆ ಶೇ 3ರಿಂದ ಶೇ7ರಷ್ಟು ಮೀಸಲಾತಿ ಹೆಚ್ಚಿಸಿ ರಾಜ್ಯ ಸರ್ಕಾರ ಮಾಡಿದ ‘ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳು (ಶೈಕ್ಷಣಿಕ ಸಂಸ್ಥೆಗಳಲ್ಲಿನ ಮತ್ತು ರಾಜ್ಯಾಧೀನ ಸೇವೆಗಳಲ್ಲಿನ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ) ಕಾಯ್ದೆ–2022’ನ್ನು ಸಂವಿಧಾನದ ಶೆಡ್ಯೂಲ್‌ 9ರಲ್ಲಿ ಸೇರಿಸುವಂತೆ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್‌ ಕುಮಾರ್‌ ಭಲ್ಲಾ ಅವರಿಗೆ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಪತ್ರ ಬರೆದಿದ್ದಾರೆ.

ಕಾಯ್ದೆಯ ಪ್ರತಿ ಸಹಿತ ಗುರುವಾರ ಪತ್ರ ಬರೆದಿರುವ ಅವರು, ಕಾಯ್ದೆಯನ್ನು ಸಂವಿಧಾನದ ಶೆಡ್ಯೂಲ್‌ 9ರಲ್ಲಿ ಸೇರಿಸಲು ಫೆ. 9ರಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡಿರುವ ತೀರ್ಮಾನವನ್ನೂ ಉಲ್ಲೇಖಿಸಿದ್ದಾರೆ. ‘ಕಾಯ್ದೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಹೀಗಾಗಿ, ಕಾಯ್ದೆಯನ್ನು ತಮಗೆ ಕಳುಹಿಸುತ್ತಿದ್ದೇನೆ’ ಎಂದೂ ಪತ್ರದಲ್ಲಿ ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT