ಕಲಬುರಗಿ: ಪಿಎಸ್ಐ ಅಕ್ರಮ ನೇಮಕಾತಿಗೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ನಗರದ ಪ್ರಧಾನ ಜೆಎಂಎಫ್ಸಿ ನ್ಯಾಯಾಲಯಕ್ಕೆ ಗುರುವಾರ ಮೂರನೇ ಚಾರ್ಜ್ ಶೀಟ್ ಸಲ್ಲಿಸಿದರು.
ನಗರದ ನೊಬೆಲ್ ಸ್ಕೂಲ್ ಪರೀಕ್ಷಾ ಕೇಂದ್ರದಲ್ಲಿ ನಡೆದ ಪರೀಕ್ಷಾ ಅಕ್ರಮಕ್ಕೆ ಸಂಬಂದಿಸಿದಂತೆ ಈಗಾಗಲೇ ಏಳು ಆರೋಪಿಗಳನ್ನು ಬಂಧಿಸಿದ್ದಾರೆ.
ಆರು ಸಂಪುಟಗಳಲ್ಲಿ 2060 ಪುಟಗಳ ಚಾರ್ಜ್ ಶೀಟನ್ನು ಸಿಐಡಿ ಡಿವೈಎಸ್ಪಿಗಳಾದ ಪ್ರಕಾಶ ರಾಠೋಡ, ಶಂಕರಗೌಡ ಪಾಟೀಲ ಹಾಗೂ ಸಿಬ್ಬಂದಿ ನಿಗದಿತ ಅವಧಿಗಿಂತ ಎಂಟು ದಿನ ಮೊದಲೇ ನ್ಯಾಯಾಲಯಕ್ಕೆ ಸಲ್ಲಿಸಿದರು.
ಇದರಲ್ಲಿ 124 ಕಡತಗಳು, 104 ಜನರ ಸಾಕ್ಷಿಗಳನ್ನು ದಾಖಲಿಸಿಕೊಳ್ಳಲಾಗಿದೆ.
ಈಗಾಗಲೇ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಒಡೆತನದ ಜ್ಞಾನಜ್ಯೋತಿ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ನಡೆದ ಅಕ್ರಮ ಹಾಗೂ ಎಂ.ಎಸ್. ಇರಾನಿ ಕಾಲೇಜಿನಲ್ಲಿ ನಡೆದ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದ ಎರಡು ಚಾರ್ಜ್ ಶೀಟ್ ಗಳನ್ನು ಸಲ್ಲಿಸಲಾಗಿದೆ.
ಪ್ರಮುಖ ಆರೋಪಿಗಳಾದ ದಿವ್ಯಾ ಹಾಗರಗಿ, ಅವರ ಪತಿ ರಾಜೇಶ್ ಹಾಗರಗಿ, ಆರ್.ಡಿ. ಪಾಟೀಲ, ಮಂಜುನಾಥ ಮೇಳಕುಂದಿ, ಅಮಾನತುಗೊಂಡ ಡಿವೈಎಸ್ಪಿ ಮಲ್ಲಿಕಾರ್ಜುನ ಸಾಲಿ, ಕೆಎಸ್ ಆರ್ ಪಿ ಸಹಾಯಕ ಕಮಾಂಡೆಂಟ್ ಆಗಿದ್ದ ವೈಜನಾಥ ರೇವೂರ ಹಾಗೂ ಹಲವು ಅಭ್ಯರ್ಥಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ.