ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಸಭೆ ಚುನಾವಣೆ: 5ನೇ ಅಭ್ಯರ್ಥಿಯಾಗಿ ಜೆಡಿಎಸ್‌ನ ಕುಪೇಂದ್ರ ರೆಡ್ಡಿ ಕಣಕ್ಕೆ

Published 15 ಫೆಬ್ರುವರಿ 2024, 6:04 IST
Last Updated 15 ಫೆಬ್ರುವರಿ 2024, 6:04 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಅಗತ್ಯ ಸಂಖ್ಯಾ
ಬಲದ ಕೊರತೆಯ ಮಧ್ಯೆಯೂ ಉದ್ಯಮಿ ಡಿ. ಕುಪೇಂದ್ರ ರೆಡ್ಡಿ ಅವರು ಜೆಡಿಎಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಇದರೊಂದಿಗೆ ಈ ಚುನಾವಣೆ ಕುತೂಹಲಕಾರಿ ತಿರುವು ಪಡೆದುಕೊಂಡಿದೆ.

ಕುಪೇಂದ್ರ ರೆಡ್ಡಿ ಅವರನ್ನು ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲಾಗಿದೆ. ಜೆಡಿಎಸ್‌ ಶಾಸಕರ ಜತೆಗೆ ಎಂ. ಸತೀಶ್‌ ರೆಡ್ಡಿ ಸೇರಿದಂತೆ ಬಿಜೆಪಿಯ ಕೆಲವರೂ ಸೂಚಕರಾಗಿ ನಾಮಪತ್ರಕ್ಕೆ ಸಹಿ ಮಾಡಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್‌ ಜಂಟಿಯಾಗಿ ಕಾಂಗ್ರೆಸ್‌ನಿಂದ ಒಂದು ಸ್ಥಾನವನ್ನು ಕಿತ್ತುಕೊಳ್ಳುವ ತಂತ್ರಗಾರಿಕೆಯ ಭಾಗವಾಗಿ ರೆಡ್ಡಿ ಅವರನ್ನು ಕಣಕ್ಕಿಳಿಸಿವೆ.

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ, ಶಾಸಕ ಎಚ್‌.ಡಿ. ರೇವಣ್ಣ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರೊಂದಿಗೆ ತೆರಳಿ ಕುಪೇಂದ್ರ ರೆಡ್ಡಿ ಅವರು ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಸಿದರು.

ಜೆಡಿಎಸ್‌ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಕುರಿತು ಬುಧವಾರ ಮಧ್ಯಾಹ್ನದವರೆಗೂ ಯಾವುದೇ ತೀರ್ಮಾನಕ್ಕೆ ಬಂದಿರಲಿಲ್ಲ. ಬಿಜೆಪಿ ವರಿಷ್ಠರ ಸಂದೇಶ ಹೊತ್ತು ಬುಧವಾರ ಮಧ್ಯಾಹ್ನ ವಿಧಾನಸಭೆಯ ವಿರೋಧ ಪಕ್ಷದ ಮೊಗಸಾಲೆಗೆ ಬಂದಿದ್ದ ರಾಜ್ಯಸಭಾ ಸದಸ್ಯ ಲಹರ್‌ ಸಿಂಗ್‌ ಸಿರೋಯ, ಎರಡೂ ಪಕ್ಷಗಳ ಪ್ರಮುಖರ ಜತೆ ಚರ್ಚಿಸಿದ್ದರು. ಆ ಬಳಿಕವೇ ಕುಪೇಂದ್ರ ರೆಡ್ಡಿ ಅವರನ್ನು ಕಣಕ್ಕಿಳಿಸುವ ನಿರ್ಧಾರ
ವನ್ನು ಅಂತಿಮಗೊಳಿಸಲಾಗಿತ್ತು.

ರಾಜ್ಯದಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳು ಖಾಲಿಯಾಗುತ್ತಿವೆ. ಸದ್ಯದ ಸಂಖ್ಯಾ ಬಲದಲ್ಲಿ ಕಾಂಗ್ರೆಸ್‌ ಮೂರು ಮತ್ತು ಬಿಜೆಪಿ ಒಂದು ಸ್ಥಾನಗಳನ್ನು ಪಡೆಯಲು ಅವಕಾಶವಿದೆ. ಜೆಡಿಎಸ್‌ ಐದನೇ ಅಭ್ಯರ್ಥಿಯನ್ನು
ಕಣಕ್ಕಿಳಿಸಿರುವುದರಿಂದ ತೀವ್ರ ಸ್ಪರ್ಧೆ ಸೃಷ್ಟಿಯಾಗಿದೆ.

ಕಾಂಗ್ರೆಸ್‌ 135 ಶಾಸಕರ ಬಲವನ್ನು ಹೊಂದಿದೆ. ಬಿಜೆಪಿ 66, ಜೆಡಿಎಸ್‌ 19, ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಜಿ. ಜನಾರ್ದನ ರೆಡ್ಡಿ, ಸರ್ವೋದಯ ಕರ್ನಾಟಕ ಪಕ್ಷದ ದರ್ಶನ್ ಪುಟ್ಟಣ್ಣಯ್ಯ ಮತ್ತು ಪಕ್ಷೇತರರಾದ ಹರಪನಹಳ್ಳಿ ಶಾಸಕಿ ಲತಾ ಮಲ್ಲಿಕಾರ್ಜುನ್‌ ಹಾಗೂ ಗೌರಿಬಿದನೂರು ಶಾಸಕ ಕೆ.ಪಿ.ಪುಟ್ಟಸ್ವಾಮಿ ಗೌಡ  ಇದ್ದಾರೆ. ದರ್ಶನ್, ಲತಾ, ಪುಟ್ಟಸ್ವಾಮಿ ಕಾಂಗ್ರೆಸ್ ಜತೆ ಗುರುತಿಸಿಕೊಂಡಿದ್ದಾರೆ. ಜನಾರ್ದನ ರೆಡ್ಡಿ ಸಹ ಆರಂಭದಲ್ಲಿ ಕಾಂಗ್ರೆಸ್ ಜತೆಗಿರುವುದಾಗಿ ಹೇಳಿದ್ದರು. ಇತ್ತೀಚೆಗೆ, ಬಿಜೆಪಿ ಕಡೆ ಒಲವು ತೋರಿದ್ದಾರೆ.

ಒಬ್ಬ ಅಭ್ಯರ್ಥಿಯ ಗೆಲುವಿಗೆ 45 ಮತಗಳು ಬೇಕಾಗುತ್ತವೆ. ಮೈತ್ರಿಕೂಟದ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಅವರಿಗೆ ಬಿಜೆಪಿಯ 21 ಹೆಚ್ಚುವರಿ ಮತಗಳು ದೊರಕಲಿವೆ. ಹೆಚ್ಚುವರಿಯಾಗಿ ಅಗತ್ಯವಿರುವ ಐದು ಮತಗಳನ್ನು ಸೆಳೆಯಲು ಬಿಜೆಪಿ ಮತ್ತು ಜೆಡಿಎಸ್‌ ನಾಯಕರು ಜಂಟಿ ಕಾರ್ಯಾಚರಣೆಗೆ ಇಳಿದಿದ್ದಾರೆ. ಇದರಿಂದಾಗಿ ಕಾಂಗ್ರೆಸ್‌ ಅಡ್ಡ ಮತದಾನದ ಭೀತಿಗೆ ಸಿಲುಕಿದೆ.

‘ಬಿಜೆಪಿ ನಾಯಕರ ಸಲಹೆಯಂತೆ ಸ್ಪರ್ಧೆ’

‘ಬಿಜೆಪಿಯ ರಾಷ್ಟ್ರೀಯ ನಾಯಕರು ಮತ್ತು ರಾಜ್ಯ ಘಟಕದ ನಾಯಕರ ಸಲಹೆಯಂತೆ ನಮ್ಮ ಕುಪೇಂದ್ರ ರೆಡ್ಡಿ ಅವರನ್ನು ಕಣಕ್ಕಿಳಿಸಲಾಗಿದೆ. ಬಿಜೆಪಿ ಮತ್ತು ಜೆಡಿಎಸ್‌ನ ಹೆಚ್ಚುವರಿ ಮತಗಳು ನಮ್ಮ ಬಳಿ ಇವೆ. ಮತಗಳ ಕೊರತೆ ನೀಗುವುದು ಚುನಾವಣೆ ವೇಳೆಯೇ ನಿರ್ಧಾರವಾಗುತ್ತದೆ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಸುದ್ದಿಗಾರರಿಗೆ ಗುರುವಾರ ಪ್ರತಿಕ್ರಿಯಿಸಿದರು.

ನಮಗೂ ಆತ್ಮಸಾಕ್ಷಿ ಮತಗಳು ಬರುತ್ತವೆ: ಡಿ.ಕೆ. ಶಿವಕುಮಾರ್

‘ನಮಗೂ ಆತ್ಮಸಾಕ್ಷಿ ಮತಗಳು ಬರುತ್ತವೆ’ ‘ರಾಜ್ಯಸಭೆ ಚುನಾವಣೆಯಲ್ಲಿ ನಮ್ಮ (ಕಾಂಗ್ರೆಸ್‌) ಅಭ್ಯರ್ಥಿಗಳಿಗೂ ಆತ್ಮಸಾಕ್ಷಿ ಮತಗಳು ಬೀಳಲಿವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.

‘ರಾಜ್ಯಸಭೆ ಚುನಾವಣೆಗೆ ಜೆಡಿಎಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಕುಪೇಂದ್ರ ರೆಡ್ಡಿ ಅವರಿಗೆ ಎಲ್ಲ ಪಕ್ಷಗಳಲ್ಲಿ ಸ್ನೇಹಿತರಿದ್ದು, ಅವರಿಗೆ ಆತ್ಮಸಾಕ್ಷಿಯ ಮತಗಳು ಬೀಳಲಿವೆ’ ಎಂದು ಬಿಜೆಪಿ–ಜೆಡಿಎಸ್‌ ನಾಯಕರು ಹೇಳಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಶಿವಕುಮಾರ್‌, ‘ನಮಗೂ ಎಲ್ಲ ಪಕ್ಷಗಳಲ್ಲಿ ಸ್ನೇಹಿತರಿದ್ದಾರೆ’ ಎಂದು ತಿರುಗೇಟು ನೀಡಿದರು. ‘ಜೆಡಿಎಸ್ ವಿಫಲವಾಗಿರುವ ಕಾರಣ ಬಿಜೆಪಿ ಜತೆ ನೆಂಟಸ್ತನ ಬೆಳೆಸಿದೆ. ಆ ಪಕ್ಷಗಳಿಂದ ನಮಗೂ ಆತ್ಮಸಾಕ್ಷಿಯ ಮತಗಳು ಬರುವ ವಿಶ್ವಾಸವಿದೆ. ಬಿಜೆಪಿ ಮತ್ತು ಜೆಡಿಎಸ್‌ನವರು ಸದಾ ಕುದುರೆ ವ್ಯಾಪಾರ ಮಾಡುತ್ತಾರೆ. ಅದಕ್ಕೆ ಅವರು ಹೆಸರುವಾಸಿ. ಇದೇ 27ರಂದು ಎಲ್ಲವೂ ತಿಳಿಯಲಿದೆ. ಜೆಡಿಎಸ್‌ನವರು ಬಿಜೆಪಿಗೆ ಬಹಳ ಹತ್ತಿರವಾಗಿರುವಂತೆ ಬಿಂಬಿಸುತ್ತಿದ್ದಾರೆ. ಬಿಜೆಪಿಯ ಎಷ್ಟು ಮತಗಳು ಅವರಿಗೆ ಸಿಗಲಿದೆ ಎಂಬುದನ್ನು ಕಾದು ನೋಡಿ’ ಎಂದರು. ಐದನೇ ಅಭ್ಯರ್ಥಿ ಕಣಕ್ಕಿಳಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು , ‘ಅವರು ಅವರ ಪ್ರಯತ್ನ ಮಾಡಲಿ. ನಾವು ನಮ್ಮ ಒಗ್ಗಟ್ಟಿನ ರಾಜಕಾರಣ ಮಾಡುತ್ತೇವೆ’ ಎಂದರು.

ಕುಪೇಂದ್ರ ರೆಡ್ಡಿ ಗೆಲುವಿಗೆ ತಂತ್ರ: ವಿಜಯೇಂದ್ರ

‘ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ನಾಮಪತ್ರ
ಸಲ್ಲಿಸಿರುವುದರ ಹಿಂದೆ ಜೆಡಿಎಸ್ ಕಾರ್ಯತಂತ್ರ ಇದ್ದೇ ಇರುತ್ತದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಎನ್‍ಡಿಎ ಕೂಟಕ್ಕೆ ಜೆಡಿಎಸ್‌ ಸೇರಿದ ನಂತರ ಯಾವುದೇ ಹೋರಾಟ ಮತ್ತು ತೀರ್ಮಾನಗಳನ್ನು ಜಂಟಿಯಾಗಿಯೇ ತೆಗೆದುಕೊಳ್ಳುತ್ತಿದ್ದೇವೆ. ರಾಜ್ಯದ ಜೆಡಿಎಸ್‌ ನಾಯಕರ ಜೊತೆ ಚರ್ಚಿಸಿ ರಾಜ್ಯಸಭೆಗೆ ಐದನೇ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಅವರನ್ನು ಕಣಕ್ಕೆ ಇಳಿಸಲು ನಿರ್ಧರಿಸಿರುವುದಾಗಿ ನಮ್ಮ ವರಿಷ್ಠರು ತಿಳಿಸಿದ್ದಾರೆ. ನಮ್ಮ ಅಭ್ಯರ್ಥಿ ಗೆಲ್ಲುವ ದೃಷ್ಟಿಯಿಂದ ಮುಂದಿನ ದಿನಗಳಲ್ಲಿ ಬಿಜೆಪಿ- ಜೆಡಿಎಸ್ ಒಟ್ಟಾಗಿ ತಂತ್ರಗಾರಿಕೆ ರೂಪಿಸುತ್ತೇವೆ’ ಎಂದರು.

ಇಬ್ಬರು ಅಭ್ಯರ್ಥಿಗಳೂ ಗೆಲುವು: ಅಶೋಕ

‘ಬಿಜೆಪಿ ಅಭ್ಯರ್ಥಿ ನಾರಾಯಣ ಭಾಂಡಗೆ ಮತ್ತು ಬಿಜೆಪಿ- ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಇಬ್ಬರೂ ಗೆಲ್ಲುವ ವಿಶ್ವಾಸವಿದೆ’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ ತಿಳಿಸಿದರು.

7 ಅಭ್ಯರ್ಥಿಗಳಿಂದ ನಾಮಪತ್ರ

ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಇದೇ 27ರಂದು ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ
ಗುರುವಾರ (ಫೆ. 15) ಆರು ಅಭ್ಯರ್ಥಿಗಳು ಒಟ್ಟು 17 ನಾಮಪತ್ರಗಳನ್ನು ಸಲ್ಲಿಸಿದ್ದಾರೆ. 

ಬಿಜೆಪಿ ಅಭ್ಯರ್ಥಿ ನಾರಾಯಣಸಾ ಭಾಂಡಗೆ ಎರಡು, ಕಾಂಗ್ರೆಸ್‌ ಅಭ್ಯರ್ಥಿಗಳಾದ ಅಜಯ್ ಮಾಕನ್‌, ಜಿ.ಸಿ. ಚಂದ್ರಶೇಖರ್ ಮತ್ತು ಸಯ್ಯದ್‌ ನಾಸೀರ್ ಹುಸೇನ್, ಜೆಡಿಎಸ್‌ ಅಭ್ಯರ್ಥಿ ಡಿ. ಕುಪೇಂದ್ರ ರೆಡ್ಡಿ ಅವರು ತಲಾ ನಾಲ್ಕು ನಾಮಪತ್ರ, ಪಕ್ಷೇತರ ಅಭ್ಯರ್ಥಿ ಮಲ್ಲಿಕಾರ್ಜುನ ಕೆಂಗನೂರು ಒಂದು ನಾಮಪತ್ರ ಸಲ್ಲಿಸಿದ್ದಾರೆ.

ಪಕ್ಷೇತರ ಅಭ್ಯರ್ಥಿಯಾಗಿ ಡಾ.ಕೆ. ಪದ್ಮರಾಜನ್ ಅವರು ಫೆ. 8ರಂದು ಒಂದು ನಾಮಪತ್ರ ಸಲ್ಲಿಸಿದ್ದಾರೆ. ಹೀಗಾಗಿ ಒಟ್ಟು 7 ಅಭ್ಯರ್ಥಿಗಳು 18 ನಾಮಪತ್ರ ಸಲ್ಲಿಸಿದಂತಾಗಿದೆ.

ನಾಮಪತ್ರಗಳ ಪರಿಶೀಲನೆ ಶುಕ್ರವಾರ (ಫೆ. 16) ನಡೆಯಲಿದೆ. ನಾಮಪತ್ರ ಹಿಂಪಡೆಯಲು ಇದೇ 20 ಕೊನೆಯ ದಿನ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT