ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾರಕಿಹೊಳಿ ಸಿಡಿ ಪ್ರಕರಣ: 19ಕ್ಕೆ ವರದಿ ಸಲ್ಲಿಕೆ

Last Updated 16 ಜುಲೈ 2021, 19:30 IST
ಅಕ್ಷರ ಗಾತ್ರ

ಬೆಂಗಳೂರು: ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಸಂಬಂಧಿಸಿದ ಸಿ.ಡಿ ಪ್ರಕರಣದ ತನಿಖೆಯ ಸಮಗ್ರ ವರದಿಯನ್ನು ಇದೇ 19ರಂದು ಸಲ್ಲಿಸಲಾಗುವುದು ಎಂದು ರಾಜ್ಯ ಸರ್ಕಾರವು ಹೈಕೋರ್ಟ್‌ಗೆ ಶುಕ್ರವಾರ ತಿಳಿಸಿತು.

ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠವು, ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡದ(ಎಸ್‌ಐಟಿ) ರಚನೆ ಮತ್ತು ಅದು ನಡೆಸಿದ ತನಿಖೆಯ ಪ್ರಗತಿಯ ಬಗ್ಗೆ ಪ್ರಶ್ನಿಸಿದಾಗ, ಅಡ್ವೊಕೇಟ್‌ ಜನರಲ್ ಪ್ರಭುಲಿಂಗ ಕೆ. ನಾವಡಗಿ ಈ ಉತ್ತರ ನೀಡಿದರು.

‘ಪ್ರಕರಣಕ್ಕೆ ಸಂಬಂಧಿಸಿದ ಸಮಗ್ರ ತನಿಖಾ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು’ ಎಂದು ಅವರು ಹೇಳಿದರು.

‘ಎಸ್‌ಐಟಿಯು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಪಾರದರ್ಶಕ ತನಿಖೆ ನಡೆಯಬೇಕೆಂದರೆ ಪ್ರಕರಣದ ತನಿಖೆಯ ಹೊಣೆಯನ್ನು ಬೇರೆ ಸಂಸ್ಥೆಗೆ ವರ್ಗಾಯಿಸಬೇಕು’ ಎಂದು ಸಂತ್ರಸ್ತ ಯುವತಿಯು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

‘ಗೃಹಸಚಿವರು ನಗರ ಪೊಲೀಸ್‌ ಕಮಿಷನರ್‌ ಅವರಿಗೆ ಬರೆದ ಪತ್ರದ ಆಧಾರದ ಮೇಲೆ ಎಸ್ಐಟಿಯನ್ನು ರಚಿಸಲಾಗಿದೆ. ರಮೇಶ ಜಾರಕಿಹೊಳಿ ಅವರ ಮನವಿಯ ಮೇರೆಗೇ ಗೃಹ ಸಚಿವರು ಈ ಪತ್ರ ಬರೆದಿದ್ದು, ತನಿಖೆಯು ಪಾರದರ್ಶಕವಾಗಿ ನಡೆದಿಲ್ಲ’ ಎಂದು ಯುವತಿ ದೂರಿದ್ದರು.

ಇದರ ನಂತರ, ಮತ್ತೊಂದು ಅರ್ಜಿ ಸಲ್ಲಿಸಿದ್ದ ಯುವತಿ, ‘ಸದಾಶಿವನಗರ ಠಾಣೆಯಲ್ಲಿ ರಮೇಶ ಜಾರಕಿಹೊಳಿಯವರ ಪರವಾಗಿ ಎಂ.ವಿ. ನಾಗರಾಜು ಅವರು ನೀಡಿದ್ದ ದೂರನ್ನೂ ರದ್ದು ಮಾಡಬೇಕು’ ಎಂದೂ ಕೋರಿದ್ದರು. ಈ ಎರಡೂ ಅರ್ಜಿಗಳ ವಿಚಾರಣೆಯು ಶುಕ್ರವಾರ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT