ಬೆಂಗಳೂರು: ‘ದಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇರಿಸಿದ್ದು ತೀರ್ಥಹಳ್ಳಿಯ ಮುಸಾವೀರ್ ಹುಸೇನ್ ಶಾಜೀಬ್’ ಎಂದು ರಾಷ್ಟ್ರೀಯ ತನಿಖಾ ದಳದ (ಎನ್ಐಎ) ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಕರಣದ ಬಗ್ಗೆ ಶುಕ್ರವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ‘ಮುಸಾವೀರ್ ಬಾಂಬ್ ಇಟ್ಟಿದ್ದನೆಂಬುದಕ್ಕೆ ಸಾಕಷ್ಟು ಪುರಾವೆಗಳು ಸಿಕ್ಕಿವೆ. ಹೀಗಾಗಿ, ಈತನೇ ಬಾಂಬ್ ಸ್ಫೋಟದ ಪ್ರಮುಖ ಆರೋಪಿ ಎಂಬುದು ಗೊತ್ತಾಗಿದೆ’ ಎಂದಿದ್ದಾರೆ.
‘ಮುಸಾವೀರ್ ಕೃತ್ಯಕ್ಕೆ ಅಬ್ದುಲ್ ಮಥೀನ್ ಹೆಚ್ಚು ಸಹಕಾರ ನೀಡಿದ್ದ. ಸ್ಫೋಟದ ಸಂಚಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ. ಈತನೇ ಕಚ್ಚಾ ಬಾಂಬ್ (ಐಇಡಿ) ತಯಾರಿಸಿದ್ದನೆಂಬ ಮಾಹಿತಿ ಇದೆ’ ಎಂದು ಹೇಳಿದ್ದಾರೆ.
‘ಕರ್ನಾಟಕ, ತಮಿಳುನಾಡು ಹಾಗೂ ಉತ್ತರ ಪ್ರದೇಶದ 18 ಸ್ಥಳಗಳ ಮೇಲೆ ಇತ್ತೀಚೆಗೆ ದಾಳಿ ಮಾಡಲಾಗಿತ್ತು. ಇದೇ ಸಂದರ್ಭದಲ್ಲಿ ಶಂಕಿತರ ಬಗ್ಗೆ ಹಲವು ಪುರಾವೆಗಳನ್ನು ಜಪ್ತಿ ಮಾಡಲಾಗಿದೆ. ದಾಳಿ ವೇಳೆ ಬಂಧಿಸಲಾಗಿದ್ದ ಮುಜಮೀಲ್ನನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದಾಗ, ಸಾಕಷ್ಟು ಮಾಹಿತಿ ಬಾಯ್ಬಿಟ್ಟಿದ್ದಾನೆ’ ಎಂದು ತಿಳಿಸಿದ್ದಾರೆ.