ಬೆಂಗಳೂರು: ‘ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುವುದಾದರೆ ಸಚಿವ ಸ್ಥಾನ ತ್ಯಾಗಕ್ಕೆ ನಾನು ಸಿದ್ಧ’ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದರು.
ಸುದ್ದಿಗಾರರ ಜತೆ ಶನಿವಾರ ಮಾತನಾಡಿದ ಅವರು, ‘ಕೆಪಿಸಿಸಿ ಅಧ್ಯಕ್ಷರನ್ನು ಬದಲಾವಣೆ ಮಾಡುವುದಾದರೆ ನಾನೂ ಕೂಡ ಆಕಾಂಕ್ಷಿ. ಅದಕ್ಕಾಗಿ ಮಂತ್ರಿ ಸ್ಥಾನ ಬಿಟ್ಟು ಕೆಲಸ ಮಾಡಲು ಸಿದ್ಧನಾಗಿದ್ದೇನೆ’ ಎಂದರು.
‘ಕೆಪಿಸಿಸಿ ಅಧ್ಯಕ್ಷನಾದರೆ ಮುಂದೆ ವಿಧಾನಸಭೆ ಸೇರಿದಂತೆ ಯಾವುದೇ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಪೂರ್ಣ ಪ್ರಮಾಣದಲ್ಲಿ ಪಕ್ಷದ ಸಂಘಟನೆಗೆ ಸಮಯ ಮೀಸಲಿಡುವೆ. ಯಾವ ರಾಜಕೀಯ ಅಧಿಕಾರವೂ ನನಗೆ ಬೇಕಿಲ್ಲ. ತನು, ಮನ ಅರ್ಪಿಸಿ ಪಕ್ಷಕ್ಕಾಗಿ ದುಡಿಯುವೆ’ ಎಂದು ಹೇಳಿದರು.
ಹೈಕಮಾಂಡ್ ನಿರ್ಧರಿಸುತ್ತದೆ: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಷಯ ಕುರಿತು ಪ್ರತಿಕ್ರಿಯಿಸಿದ ಗೃಹ ಸಚಿವ ಜಿ. ಪರಮೇಶ್ವರ, ‘ಅಧ್ಯಕ್ಷರ ಬದಲಾವಣೆ ಕುರಿತು ನನಗೆ ಗೊತ್ತಿಲ್ಲ. ಅದನ್ನು ಕಾಂಗ್ರೆಸ್ ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ’ ಎಂದರು.