ಬೆಂಗಳೂರು: ಜನವರಿ 26ರಂದು ನವದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡುವ ಮೂಲಕ ಕೇಂದ್ರದ ಬಿಜೆಪಿ ಸರ್ಕಾರವು ರಾಜ್ಯದ ಏಳು ಕೋಟಿ ಕನ್ನಡಿಗರಿಗೆ ಅಪಮಾನ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರ ಹಾಕಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರಿಗೆ ಟ್ಯಾಗ್ ಮಾಡಿದ್ದಾರೆ. ಕೇಂದ್ರ ಸರ್ಕಾರವು ತನ್ನ ತಪ್ಪನ್ನು ತಿದ್ದಿಕೊಂಡು ಗಣರಾಜ್ಯೋತ್ಸವ ಪರೇಡ್ನ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ರಾಜ್ಯಕ್ಕೆ ಅವಕಾಶ ನೀಡಬೇಕೆಂದು ಅವರು ಒತ್ತಾಯಿಸಿದ್ದಾರೆ.
ಕಳೆದ ವರ್ಷ ಕೂಡ ಮೊದಲಿಗೆ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡಿ, ವಿವಾದದ ಸ್ವರೂಪ ಪಡೆದ ನಂತರ ಅನುಮತಿ ನೀಡಿತ್ತು, ಈ ಬಾರಿ ಮತ್ತೆ ಕನ್ನಡಿಗರನ್ನು ಅವಮಾನಿಸುವ ತನ್ನ ಚಾಳಿಯನ್ನು ಕೇಂದ್ರ ಸರ್ಕಾರ ಮುಂದುವರೆಸಿದೆ ಎಂದು ಅವರು ಹೇಳಿದ್ದಾರೆ.
ಜನವರಿ 26ರಂದು ಹೊಸದಿಲ್ಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡುವ ಮೂಲಕ ಕೇಂದ್ರ @BJP4India ಸರ್ಕಾರವು ನಾಡಿನ ಏಳು ಕೋಟಿ ಕನ್ನಡಿಗರಿಗೆ ಅಪಮಾನ ಮಾಡಿದೆ. ಕಳೆದ ವರ್ಷ ಕೂಡ ಮೊದಲಿಗೆ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡಿ, ವಿವಾದದ ಸ್ವರೂಪ…
— Siddaramaiah (@siddaramaiah) January 9, 2024
ನವಕರ್ನಾಟಕದ ಅಭಿವೃದ್ಧಿಯ ದೃಷ್ಟಾರ, ಸಾಮಾಜಿಕ ನ್ಯಾಯದ ಹರಿಕಾರ, ನೀರಾವರಿ, ಬ್ಯಾಂಕಿಂಗ್, ಮೂಲಸೌಕರ್ಯದ ಕ್ಷೇತ್ರಗಳ ಅಭಿವೃದ್ದಿಯ ಮೂಲಕ ಮೈಸೂರನ್ನು ಒಂದು ಮಾದರಿ ರಾಜ್ಯವಾಗಿ ಕಟ್ಟಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಸ್ತಬ್ಧಚಿತ್ರ, ರಾಜಧಾನಿ ಬೆಂಗಳೂರಿನ ಗ್ರಾಮದೇವತೆ, ಸುಮಾರು 10ನೇ ಶತಮಾನದಲ್ಲಿ ನಿರ್ಮಿಸಲ್ಪಟ್ಟ ಅಣ್ಣಮ್ಮದೇವಿಯ ದೇವಸ್ಥಾನದ ಸ್ತಬ್ಧಚಿತ್ರ ಒಳಗೊಂಡಂತೆ ಸುಮಾರು 4 ಸ್ತಬ್ಧಚಿತ್ರ ಮಾದರಿಗಳಿಗೆ ಅವಕಾಶ ಕೋರಿ ಕೇಂದ್ರಕ್ಕೆ ಮನವಿ ಮಾಡಲಾಗಿತ್ತು. ಆದರೆ ಕೇಂದ್ರದ ಆಯ್ಕೆ ಸಮಿತಿಯು ನಮ್ಮ ಮನವಿಯನ್ನು ತಿರಸ್ಕರಿಸಿ, ನಾಡಿನ ಅಸೀಮ ಸಾಧನೆ ಮತ್ತು ಮಾದರಿ ಸಾಧಕರನ್ನು ದೇಶಕ್ಕೆ ಪರಿಚಯಿಸುವ ಅವಕಾಶವನ್ನು ಕಸಿದುಕೊಂಡಿದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಿರುವುದು ಕೇಂದ್ರದ ಬಿಜೆಪಿ ಸರ್ಕಾರಕ್ಕೆ ನುಂಗಲಾರದ ತುತ್ತಾಗಿದೆ. ತೆರಿಗೆ ಪಾಲಿನಲ್ಲಿ ವಂಚನೆ, ಬರಪರಿಹಾರದಲ್ಲಿ ಅನ್ಯಾಯ, ಕನ್ನಡಿಗರು ಕಟ್ಟಿರುವ ಬ್ಯಾಂಕು, ಬಂದರು, ವಿಮಾನ ನಿಲ್ದಾಣಗಳ ಮಾರಾಟ ಹೀಗೆ ಹೆಜ್ಜೆಹೆಜ್ಜೆಗೂ ಕನ್ನಡಿಗರ ಮೇಲೆ ಕೇಂದ್ರ ಸರ್ಕಾರ ರಾಜಕೀಯ ದುರುದ್ದೇಶದಿಂದ ಪ್ರಹಾರ ಮಾಡುತ್ತಿದೆ. ಇದರ ಜೊತೆಗೆ ಈಗ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ಅವಕಾಶ ನಿರಾಕರಿಸಿ ನಮ್ಮ ಅಸ್ಮಿತೆಯ ಮೇಲೆ ದಾಳಿಗೆ ಇಳಿದಿದೆ ಎಂದು ಅವರು ಆರೋಪಿಸಿದ್ದಾರೆ.
ರಾಜ್ಯದಲ್ಲಿ @INCKarnataka ಸರ್ಕಾರ ಅಧಿಕಾರಕ್ಕೆ ಬಂದಿರುವುದು ಕೇಂದ್ರದ @BJP4India ಸರ್ಕಾರಕ್ಕೆ ನುಂಗಲಾರದ ತುತ್ತಾಗಿದೆ. ತೆರಿಗೆ ಪಾಲಿನಲ್ಲಿ ವಂಚನೆ, ಬರಪರಿಹಾರದಲ್ಲಿ ಅನ್ಯಾಯ, ಕನ್ನಡಿಗರು ಕಟ್ಟಿರುವ ಬ್ಯಾಂಕು, ಬಂದರು, ವಿಮಾನ ನಿಲ್ದಾಣಗಳ ಮಾರಾಟ ಹೀಗೆ ಹೆಜ್ಜೆಹೆಜ್ಜೆಗೂ ಕನ್ನಡಿಗರ ಮೇಲೆ ಕೇಂದ್ರ ಸರ್ಕಾರ ರಾಜಕೀಯ ದುರುದ್ದೇಶದಿಂದ…
— Siddaramaiah (@siddaramaiah) January 9, 2024
ಕನ್ನಡ-ಕನ್ನಡಿಗ ಮತ್ತು ಕರ್ನಾಟಕಕ್ಕೆ ನಿರಂತರವಾಗಿ ಕೇಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯದಿಂದ ಕನ್ನಡಿಗರು ಈಗಾಗಲೇ ರೋಸಿಹೋಗಿದ್ದಾರೆ. ಅವರ ತಾಳ್ಮೆಯನ್ನು ಪರೀಕ್ಷಿಸಲು ಕೇಂದ್ರ ಸರ್ಕಾರ ಹೋಗಬಾರದು. ಈಗಲೂ ಕಾಲ ಮಿಂಚಿಲ್ಲ, ಕೇಂದ್ರ ಸರ್ಕಾರ ತಕ್ಷಣ ತನ್ನ ತಪ್ಪನ್ನು ತಿದ್ದಿಕೊಂಡು ಕರ್ನಾಟಕಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಿಕೊಂಡು ದೇಶದ ಹೆಮ್ಮೆಯ ಗಣರಾಜ್ಯೋತ್ಸವ ಪರೇಡ್ನ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ನಮಗೆ ಅವಕಾಶ ನೀಡಬೇಕು ಎಂದು ಒತ್ತಾಯ ಮಾಡುತ್ತೇನೆ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.