ಮೈಸೂರು: ಮೈಸೂರು ಜಿಲ್ಲೆಯಲ್ಲಿ ಕೋವಿಡ್–19 ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಎಚ್.ಡಿ.ಕೋಟೆ ತಾಲ್ಲೂಕಿನ ವ್ಯಾಪ್ತಿಯಲ್ಲಿನ ನಾಗರಹೊಳೆ ಹಾಗೂ ಬಂಡೀಪುರ ಅಭಯಾರಣ್ಯಗಳಲ್ಲಿ ಮತ್ತೆ ಸಫಾರಿ ಬಂದ್ ಮಾಡಲಾಗಿದೆ.
‘ಜುಲೈ 10ರಿಂದ ಎಚ್.ಡಿ.ಕೋಟೆ ತಾಲ್ಲೂಕಿನ ಎಲ್ಲಾ ಹೋಟೆಲ್, ರೆಸಾರ್ಟ್, ಲಾಡ್ಜ್ ಹಾಗೂ ಹೋಂ ಸ್ಟೇಗಳಲ್ಲಿ ಪ್ರವಾಸಿಗರಿಗೆ ವಸತಿ ಸೌಕರ್ಯ ನೀಡಕೂಡದು. ಆನ್ಲೈನ್ ಅಥವಾ ಆಫ್ಲೈನ್ನಲ್ಲಿ ಬುಕ್ಕಿಂಗ್ ಮಾಡಿಕೊಳ್ಳಬಾರದು’ ಎಂದು ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್ ಆದೇಶ ಹೊರಡಿಸಿದ್ದಾರೆ.
ಸದ್ಯ ವಸತಿ ಸೌಕರ್ಯ ಪಡೆದುಕೊಂಡಿರುವ ಪ್ರವಾಸಿಗರನ್ನು ಬಲವಂತವಾಗಿ ಕಳಿಸಕೂಡದು. ಅವರ ಬುಕ್ಕಿಂಗ್ ಅವಧಿ ಮುಗಿಯುವವರೆಗೆ ಸೇವೆ ನೀಡಬೇಕು. ಈಗಾಗಲೇ ಬುಕ್ಕಿಂಗ್ ಮಾಡಿದವರಿಗೆ ಮಾಹಿತಿ ನೀಡಿ ಪ್ರವಾಸ ಕೈಗೊಳ್ಳದಂತೆ ಮಾಹಿತಿ ರವಾನಿಸಬೇಕು ಎಂದು ಸೂಚನೆ ನೀಡಿದ್ದಾರೆ.