ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಲೆಗಳು ಆರಂಭ; ಎಲ್ಲೆಡೆ ಮೊದಲ ದಿನದ ಸಂಭ್ರಮ

Published 31 ಮೇ 2023, 20:47 IST
Last Updated 31 ಮೇ 2023, 20:47 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಎಲ್ಲೆಡೆ ಬುಧವಾರ ಶಾಲೆಗಳು ಪುನರಾರಂಭವಾಗಿದ್ದು, ಒಂದೂವರೆ ತಿಂಗಳ ಬೇಸಿಗೆ ರಜೆಯ ನಂತರ ಶಾಲೆಗೆ ಮರಳಿದ ಮಕ್ಕಳಲ್ಲಿ ಸಹಪಾಠಿಗಳನ್ನು ಮತ್ತೆ ಭೇಟಿ ಮಾಡಿದ ಸಂಭ್ರಮ ಮೇರೆಮೀರಿತ್ತು.

ಮಕ್ಕಳ ಸ್ವಾಗತಕ್ಕಾಗಿ ಬಾಳೆಕಂದು, ತಳಿರು ತೋರಣಗಳಿಂದ ಶಾಲೆಗಳನ್ನು ಸಿಂಗಾರಗೊಳಿಸಲಾಗಿತ್ತು. ಶಾಲೆಗಳಲ್ಲಿ ಹಬ್ಬದ ವಾತಾರಣವಿತ್ತು. ಎರಡು ದಿನಗಳಿಂದ ಶಾಲೆಗೆ ಬರುತ್ತಿರುವ ಶಿಕ್ಷಕ ವೃಂದ ಎಲ್ಲ ಸಿದ್ಧತೆ ಮಾಡಿಕೊಂಡಿತ್ತು. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರು, ಸದಸ್ಯರು ಮಕ್ಕಳಿಗೆ ಸಿಹಿ ತಿನಿಸಿ ಶಾಲೆಗಳಿಗೆ ಬರಮಾಡಿಕೊಂಡರು.

ಈಗಷ್ಟೇ ಸಚಿವ ಸ್ಥಾನ ಅಲಂಕರಿಸಿರುವ ಮಧು ಬಂಗಾರಪ್ಪ ದೇವನಹಳ್ಳಿ ತಾಲ್ಲೂಕಿನ ಅರದೇಶಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಸಿಹಿ ತಿನಿಸುವ ಮೂಲಕ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿದರು. ಮಕ್ಕಳಿಗೆ ಪಠ್ಯಪುಸ್ತಕ, ಸಮವಸ್ತ್ರ ವಿತರಿಸಿದರು. ನಂತರ ಬಸವನಪುರ ಹಾಗೂ ಜಾಲಿಗೆ ಶಾಲೆಗಳಿಗೆ ಭೇಟಿ ನೀಡಿದರು.

ಮೊದಲ ದಿನವೇ ಅಧಿಕ ಸಂಖ್ಯೆಯಲ್ಲಿ ಮಕ್ಕಳು ಉತ್ಸಾಹದಿಂದ ಶಾಲೆಗಳತ್ತ ಹೆಜ್ಜೆ ಹಾಕಿದರು. ಶಿಕ್ಷಕರು, ಕೆಲ ಶಾಲೆಗಳಲ್ಲಿ ಮಕ್ಕಳ ಜತೆ ಪೋಷಕರೂ ಆಗಮಿಸಿದ್ದರು. ಮಧ್ಯಾಹ್ನದ ಬಿಸಿಯೂಟದಲ್ಲೂ ಸಹಿಯ ಸವಿ ದೊರಕಿತು. ಮಕ್ಕಳಿಗೆ ಪಠ್ಯಪುಸ್ತಕ, ಸಮವಸ್ತ್ರ ವಿತರಿಸಲಾಯಿತು.

ಮೇ 31ರಿಂದ ಜೂನ್‌ 30ರವರೆಗೆ ಶಾಲೆಗಳಿಗೆ ಮಕ್ಕಳನ್ನು ದಾಖಲು ಮಾಡಿಕೊಳ್ಳಲಾಗುತ್ತದೆ. ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಶಾಲೆಗಳಿಗೆ ಕರೆತರಲು ಅಭಿಯಾನ ಹಮ್ಮಿಕೊಳ್ಳಲಾಗಿದೆ.

ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಅಗತ್ಯ

ದೇವನಹಳ್ಳಿ: ‘ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟದ ಶಿಕ್ಷಣ ಅಗತ್ಯ. ಉತ್ತಮ ಶಿಕ್ಷಣ ವ್ಯವಸ್ಥೆ ಕಲ್ಪಿಸಲು ಎಲ್ಲ ರೀತಿಯ ಸಹಕಾರ ನೀಡುವ ಮೂಲಕ ನನ್ನ ಕರ್ತವ್ಯ ನಿರ್ವಹಿಸುತ್ತೇನೆ’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ತಿಳಿಸಿದರು. 

ದೇವನಹಳ್ಳಿ ತಾಲ್ಲೂಕಿನ ಅರದೇಶನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದ ಶಾಲೆ ಪ್ರಾರಂಭೋತ್ಸವ ಕಾರ್ಯಕ್ರಮಕ್ಕೆ ಬುಧವಾರ ಚಾಲನೆ ನೀಡಿ ಅವರು ಮಾತನಾಡಿದರು.

ಶಾಲೆಯ ಮಕ್ಕಳಿಗೆ ಉಚಿತ ಪಠ್ಯಪುಸ್ತಕ ಮತ್ತು ಸಮವಸ್ತ್ರ ವಿತರಿಸಿ ಮಾತನಾಡಿದ ಅವರು, ಎಲ್ಲ ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆದು ಉತ್ತಮ ಸಾಧನೆ ಮಾಡಬೇಕು. ಶಿಕ್ಷಣದಿಂದ ಯಾವುದೇ ಮಕ್ಕಳು ವಂಚಿತರಾಗಬಾರದು. ನೆರೆಹೊರೆಯಲ್ಲಿ ಯಾರಾದರೂ ಶಿಕ್ಷಣ ವಂಚಿತ ಮಕ್ಕಳು ಕಂಡು ಬಂದಲ್ಲಿ ಅವರನ್ನು ಶಾಲೆಗೆ ಕರೆದುಕೊಂಡು ಬನ್ನಿ ಎಂದು ತಿಳಿಸಿದರು. 

ಶಾಲೆಗಳನ್ನು ಮೇಲ್ದರ್ಜೆಗೇರಿಸಲು ಹೆಚ್ಚಿನ ಒತ್ತು ನೀಡಲಾಗುವುದು, ಶಿಥಿಲಾವಸ್ಥೆಯಲ್ಲಿರುವ ಶಾಲಾ ಕಟ್ಟಡಗಳನ್ನು ಮರು ನಿರ್ಮಾಣ ಮಾಡಲು ತ್ವರಿತವಾಗಿ ಕ್ರಮ ಕೈಗೊಳ್ಳಲಾಗುವುದು. ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಯಾವುದೇ ಸಮಸ್ಯೆ, ಗೊಂದಲ ಆಗಬಾರದು ಎಂದು ಶಾಲಾ ಮಕ್ಕಳಿಗೆ ಆರಂಭದಲ್ಲೇ ಪಠ್ಯಪುಸ್ತಕ ಮತ್ತು ಸಮವಸ್ತ್ರ ವಿತರಣೆ ಮಾಡಲು ಶೀಘ್ರ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಹೇಳಿದರು.

ನಂತರ ಸಚಿವರು ಬಸವನಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಜಾಲಿಗೆ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ಶಾಲಾ ಸಮವಸ್ತ್ರ ಹಾಗೂ ಪಠ್ಯಪುಸ್ತಕವನ್ನು ವಿತರಿಸಿ ಮಕ್ಕಳಿಗೆ ಹೂ ನೀಡಿ ಶಾಲೆಗೆ ಸ್ವಾಗತಿಸಿದರು.

ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ, ಪ್ರಾಥಮಿಕ ಶಿಕ್ಷಣ ನಿರ್ದೇಶಕರಾದ ಪ್ರಸನ್ನ ಕುಮಾರ್, ಜಿಲ್ಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಶ್ರೀ ಕಂಠ.ಎನ್, ದೇವನಹಳ್ಳಿ ತಹಶೀಲ್ದಾರ್ ಶಿವರಾಜ್, ಬಿ.ಇ.ಒ ಸುಮಾ, ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT